ಅಬ್ಬರಿಸಲಿದೆ ಮತ್ತೊಂದು ಚಂಡಮಾರುತ “ಯಾಸ್” ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ

ತೌಕ್ತೆ ಚಂಡಮಾರುತದ ಬಳಿಕ ಯಾಸ್ ಚಂಡಮಾರುತ ಮೇ23ರಿಂದ ಆರ್ಭಟಿಸಲಿದ್ದು, ಮೇ 26ರವರೆಗೆ ಭಾರೀ ಮಳೆಯಾಗಲಿದೆ. ಪಶ್ಚಿಮ ಬಂಗಾಳ, ಒರಿಸ್ಸಾ,ತಮಿಳುನಾಡು, ಗೋವಾ ಸೇರಿದಂತೆ ಕರಾವಳಿ ತೀರದ ರಾಜ್ಯಗಳಲ್ಲಿ ಯಾಸ್ ಚಂಡಮಾರುತದ ಆರ್ಭಟವಿರಲಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ
ಕುಸಿತವಾಗಿರುವುದರಿಂದ ಮೇ 23ರಿಂದ 26ರವರೆಗೆ ಯಾಸ್ ಚಂಡಮಾರುತ ಪಶ್ಚಿಮ ಕರಾವಳಿಯ ರಾಜ್ಯಗಳಿಗೆ ಅಪ್ಪಳಿಸಲಿದೆ. ಮೇ 23ರಂದು ಈ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಳ್ಳಲಿದ್ದು, ಮೇ 26ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಜೂನ್ 1ರಂದು ಕೇರಳಕ್ಕೆ ಮುಂಗಾರು ಪ್ರವೇಶವಾಗಲಿದೆ. ಅಷ್ಟರೊಳಗೆ ಯಾಸ್ ಎಂಬ ಮತ್ತೊಂದು ಚಂಡಮಾರುತ ಅಪ್ಪಳಿಸಲಿದ್ದು, ಇನ್ನೊಂದು ವಾರ ದಕ್ಷಿಣ ಕನ್ನಡ, ಉಡುಪಿ, ಕಾರವಾರ ಭಾಗಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಶುಕ್ರವಾರ ಬೆಳಗ್ಗೆಯಿಂದಲೇ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆ ಮುಂದುವರೆಯುವ ಸಾಧ್ಯತೆಯಿದೆ.ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಮುಂದಿನ 24 ಗಂಟೆಗಳಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಮುಂದಿನ 48 ಗಂಟೆಗಳ ಕಾಲ ಉತ್ತಮ ಮಳೆಯಾಗಲಿದೆ.

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಹಾಗೂ ಹೆಚ್ಚಿನ ತೇವಾಂಶದ ಕಾರಣದಿಂದ ಈಗ ರಾಜ್ಯದಲ್ಲಿ ಮಳೆಯಾಗುತ್ತಿದೆ.ಮೇ.24 ರ ನಂತರ ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದ ಉಂಟಾಗುವ ಚಂಡಮಾರುತ “ಯಾಸ್” ನಿಂದ ರಾಜ್ಯದಲ್ಲಿ ಅಷ್ಟೊಂದು ಪರಿಣಾಮ ಸದ್ಯಕ್ಕೆ ಕಂಡುಬರುತ್ತಿಲ್ಲ.

ಈಗಾಗಲೇ ಕರ್ನಾಟಕ, ಕೇರಳ, ಮಹಾರಾಷ್ಟ್ರ, ಗುಜರಾತ್, ಒರಿಸ್ಸಾದಲ್ಲಿ ತೌಕ್ತೆ ಚಂಡಮಾರುತ ಸಾಕಷ್ಟು ಅನಾಹುತಗಳನ್ನು ಸೃಷ್ಟಿಸಿದೆ. ಗುಜರಾತ್‌ನಲ್ಲಿ 16 ಸಾವಿರಕ್ಕೂ ಹೆಚ್ಚು ಮನೆಗಳು ಧ್ವಂಸವಾಗಿದ್ದು, ಮಹಾರಾಷ್ಟ್ರದಲ್ಲೂ ಅನೇಕ ಆಸ್ತಿಪಾಸ್ತಿ ಹಾನಿಯಾಗಿದೆ. ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ತೌಕ್ತೆ ಚಂಡಮಾರುತದಿಂದ 33 ಜನರು ಸಾವನ್ನಪ್ಪಿದ್ದಾರೆ. ಗುಜರಾತ್‌ನಲ್ಲಿ 23 ವರ್ಷಗಳಿಂದೀಚೆಗೆ ಉಂಟಾದ ಅತಿ ಭೀಕರ ಚಂಡಮಾರುತ ಇದು ಎನ್ನಲಾಗಿದೆ. ಇದರ ಬೆನ್ನಲ್ಲೇ ಯಾಸ್ ಚಂಡಮಾರುತದ ಆತಂಕವೂ ಶುರುವಾಗಿದ್ದು, ನದಿತೀರದ, ತಗ್ಗುಪ್ರದೇಶದ ಜನರು ಆತಂಕಕ್ಕೀಡಾಗಿದ್ದಾರೆ.

Leave A Reply

Your email address will not be published.