ಮಂಗಳೂರಿನಲ್ಲಿ ಸುರಿವ ಮಳೆಯನ್ನೂ ಲೆಕ್ಕಿಸದೆ ಕೊರೋನಾ ಲಸಿಕೆ ಹಾಕಿಸಿಕೊಳ್ಳಲು ನುಗ್ಗಿ ಬಂದ ಜನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ನಡುವೆಯೂ ಜನ ಕೊರೋನಾ ಲಸಿಕೆ ಹಾಕಿಸಿಕೊಳ್ಳಲು ಮನೆಯಿಂದ ಹೊರ ಬಂದಿದ್ದಾರೆ. ಇಂದು ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆ, ಆರೋಗ್ಯ ಕೇಂದ್ರ ಸೇರಿದಂತೆ ಹಲವೆಡೆ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಸರ್ಕಾರದ ಉಚಿತ ಲಸಿಕೆ ನೀಡಲಾಗುತ್ತಿದೆ.

ಜಿಲ್ಲೆಯಲ್ಲೂ ಲಸಿಕೆಗೆ ಬೇಡಿಕೆ ಹೆಚ್ಚಾಗಿದ್ದು, ಸರ್ಕಾರದ ಉಚಿತ ಲಸಿಕೆ ಸಿಗದೇ ಇರುವವರು ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಿಸಿಕೊಳ್ಳುತ್ತಿದ್ದಾರೆ. ನಗರ ಪ್ರದೇಶದಲ್ಲಿರುವ ಕೇಂದ್ರಗಳಲ್ಲಿ ಕೇವಲ ಆನ್ ಲೈನ್ ಮುಂಗಡ ಬುಕ್ಕಿಂಗ್ ಮಾಡಿದವರಿಗೆ ಮಾತ್ರ ಲಸಿಕೆ ನೀಡಲಾಗುತ್ತಿದ್ದು, ನಗರದಿಂದ ಹೊರಗಿನೆಲ್ಲೆಡೆ ಆನ್ ಲೈನ್ ಬುಕ್ಕಿಂಗ್ ಮಾಡದವರಿಗೂ ಲಸಿಕೆ ನೀಡಲಾಗುತ್ತಿದೆ. ಹೀಗಾಗಿ ಎಲ್ಲೆಡೆ ಮಳೆಯನ್ನು ಲೆಕ್ಕಿಸದೆ ಜನ ಸರತಿ ಸಾಲಿನಲ್ಲಿ ನಿಂತು ಲಸಿಕೆ ಹಾಕಿಸಿಕೊಳ್ಳುತ್ತಿದ್ದಾರೆ.

ನಾಳೆ ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶವಾಗಲಿದ್ದು, ಅದರ ಮೊದಲ ದಿನ ಕರಾವಳಿಯ ಹಲವೆಡೆ ಮಳೆಯಾಗಿದೆ. ಇಂದು ಕರಾವಳಿಯಲ್ಲಿ ಭಾರೀ ಮಳೆಯಾಗಲಿದ್ದು, 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ನಾಳೆಯವರೆಗೂ ಜಿಲ್ಲೆಯಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

Leave A Reply

Your email address will not be published.