ಮನೋಜ್ಞ ಅಭಿನೇತ್ರಿ, ಅಭಿನಯ ಶಾರದೆ ಜಯಂತಿ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ, ಜಯಂತಿ ಅವರು ಇಂದು ಬೆಳಗ್ಗೆ ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ.

1945ರಲ್ಲಿ ಬಳ್ಳಾರಿಯಲ್ಲಿ ಜನಿಸಿದ ಜಯಂತಿ ಅವರ ಮೂಲ ಹೆಸರು ಕಮಲಾ ಕುಮಾರಿ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಮತ್ತು ಮರಾಠಿ ಸೇರಿದಂತೆ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ತಮ್ಮ ಮನೋಜ್ಞ ಅಭಿನಯದ ಮೂಲಕವೇ ಮನೆ ಮಾತಾಗಿದ್ದ ಜಯಂತಿ ಅವರು ಅಭಿನಯ ಶಾರದೇ ಎಂದೇ ಕನ್ನಡ ಚಿತ್ರರಂಗದಲ್ಲಿ ಜನಜನಿತವಾಗಿದ್ದರು.

1968ರಲ್ಲಿ ತೆರೆ ಕಂಡ ವೈ.ಅರ್. ಸ್ವಾಮಿ ನಿರ್ದೇಶನದ “ಜೇನು ಗೂಡು” ಚಿತ್ರದ ಮೂಲಕ ಜಯಂತಿ ಅವರು ಚಿತ್ರರಂಗ ಪ್ರವೇಶಿಸಿದರು. ಒಟ್ಟು ಆರು ಭಾಷೆಯ ಚಿತ್ರಗಳಲ್ಲಿ ಜಯಂತಿ ಅಭಿನಯಿಸಿದ್ದಾರೆ.

ಕನ್ನಡದಲ್ಲಿ 190ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಹೆಗ್ಗಳಿಕೆ ಇವರದು. ಕಟ್ಟುಪಾಡುಗಳಿದ್ದ ಕಾಲದಲ್ಲೇ ಬೋಲ್ಡ್ ಚಿತ್ರಗಳಲ್ಲಿ ನಟಿಸುವ ಮೂಲಕ ಜಯಂತಿ ಅವರು ಎಲ್ಲರ ಹುಬ್ಬೇರಿಸಿದ್ದರು. ಇಂತಹ ಅಭಿನಯ ಶಾರದೆ ಇಂದು ನಮ್ಮನ್ನೆಲ್ಲ ಅಗಲಿದ್ದಾರೆ.

ಜಯಂತಿಯವರ ನಿಧನಕ್ಕೆ ಕನ್ನಡ ಚಿತ್ರರಂಗ, ಮುಖ್ಯಮಂತ್ರಿ ಯಡಿಯೂರಪ್ಪ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

‘ಪ್ರಖ್ಯಾತ ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಸದ್ಧತಿ ಕರುಣಿಸಲಿ, ಅವರ ಕುಟುಂಬ, ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಟ್ವಿಟ್ ಮೂಲಕ ಸಿಎಂ ಬಿ.ಎಸ್ .ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಹಿರಿಯ ನಟಿ ಜಯಂತಿ ಅವರ ಅಂತಿಮ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಸರ್ಕಾರದ ವತಿಯಿಂದಲೇ ವ್ಯವಸ್ಥೆ ಮಾಡಲಾಗಿದೆ.

ಇಂದು ಮಧ್ಯಾಹ್ನ 12.30ಕ್ಕೆ ರವೀಂದ್ರ ಕಲಾಕ್ಷೇತ್ರ ಆವರಣಕ್ಕೆ ಜಯಂತಿ ಅವರ ಪಾರ್ಥಿವ ಶರೀರವನ್ನು ತರಲಾಗುತ್ತದೆ. ಗಣ್ಯರು ಮತ್ತು ಸಾರ್ವಜನಿಕರಿಗೆ ಅಂತಿ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗುವುದು. ಹಿರಿ ನಟಿ ತಾರಾ ಅವರ ಮನವಿಗೆ ಸ್ಪಂದಿಸಿದ ಸರ್ಕಾರ ಈ ವ್ಯವಸ್ಥೆಯನ್ನು ಏರ್ಪಾಡು ಮಾಡಿದೆ.

Leave A Reply

Your email address will not be published.