ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಗಸ್ಟ್ 30 ರ ತನಕ ಯಾವುದೇ ಸೇವೆಗಳಿಗೆ ಅವಕಾಶವಿಲ್ಲ

ಸುಬ್ರಹ್ಮಣ್ಯ: ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಯಾದ ದ.ಕ ದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಆ.30 ರ ತನಕ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಯಾವುದೇ ಸೇವೆಗಳು ನಡೆಯುವುದಿಲ್ಲ ಎಂದು ದೇವಳದ ಪ್ರಕಟಣೆ ತಿಳಿಸಿದೆ.

ಪ್ರಕಟಣೆ

ಕೇವಲ ಶ್ರೀ ದೇವರ ದರುಶನಕ್ಕೆ ಮಾತ್ರ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದ್ದು, ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ ಇರುವುದಿಲ್ಲ. ಶನಿವಾರ ಮತ್ತು ಆದಿತ್ಯವಾರ ವಾರಾಂತ್ಯದ ದಿನಗಳಲ್ಲಿ ಶ್ರೀ ದೇವರ ದರುಶನಕ್ಕೆ ಕೂಡಾ ಅವಕಾಶ ನಿರ್ಬಂಧಿಸಲಾಗಿದೆ ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.

ದ.ಕ ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್-19 ಪ್ರಕರಣಗಳು ಅಧಿಕವಾಗಿರುವುದರಿಂದ ಭಕ್ತರ ಆರೋಗ್ಯ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ರಾಜ್ಯದ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆಯಲ್ಲಿ ಆ.30 ರ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ, ತುಲಾಭಾರ, ಚವಲ, ಪಂಚಾಮೃತ ಮಹಾಭಿಷೇಕ, ಪ್ರಾರ್ಥನೆ ಸೇರಿದಂತೆ ಯಾವುದೇ ಸೇವೆಗಳು ನಡೆಯುವುದಿಲ್ಲ.

ಬೆಳಗ್ಗೆ 7.00 ರಿಂದ ಮಧ್ಯಾಹ್ನ 11.30ರ ತನಕ, ಮಧ್ಯಾಹ್ನ 12-15 ರಿಂದ-1-30 ಹಾಗೂ 2-30 ರಿಂದ ಸಂಜೆ 6-30 ತನಕ ಭಕ್ತರು ಶ್ರೀ ದೇವರ ದರುಶನ ಮಾಡಬಹುದು. ಅಲ್ಲದೆ ಈ ಸಂದರ್ಭ ಮಂಗಳಾರತಿ ಸೇವೆ ಸಲ್ಲಿಸಲು ಮಾತ್ರ ಅವಕಾಶ ಕಲ್ಪಿಸಲಾಗಿದೆ.

ವಾರಾಂತ್ಯ ದಿನಗಳನ್ನು ಹೊರತು ಪಡಿಸಿ ಇತರ ದಿನಗಳಲ್ಲಿ ವಸತಿ ಗೃಹದಲ್ಲಿ ತಂಗಲು ಅವಕಾಶವಿದೆ. ತಂಗುವ ಭಕ್ತರು 24 ಗಂಟೆಯೊಳಗೆ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿ ನೆಗೆಟಿವ್ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

Leave A Reply

Your email address will not be published.