ಬೀದಿ ನಾಯಿಗಳ ಬಾಯಿಗೆ ಆ್ಯಸಿಡ್ ಸುರಿದು ಅಮಾನವೀಯವಾಗಿ ಕೊಂದ ದುಷ್ಕರ್ಮಿಗಳು | ಮೂಕ ಪ್ರಾಣಿಗಳ ಮೇಲೆ ನಡೆದಿರುವ ಅಮಾನುಷ ಕೃತ್ಯಕ್ಕೆ ದೇಶದೆಲ್ಲೆಡೆ ವ್ಯಾಪಕ ಖಂಡನೆ

ಬರುಬರುತ್ತಾ ಮನುಷ್ಯ ತುಂಬಾನೇ ಕ್ರೂರಿಯಾಗುತ್ತಿದ್ದಾನೆ. ಮನುಷ್ಯತ್ವ ಎಳ್ಳಷ್ಟು ಉಳಿದಿಲ್ಲ ಎಂಬುದಕ್ಕೆ ಈ ಘಟನೆಯೊಂದು ಜೀವಂತ ಸಾಕ್ಷಿಯಾದಂತಿದೆ. ರಸ್ತೆಯಲ್ಲಿ ಓಡಾಡುತ್ತಿದ್ದ ಬೀದಿ ನಾಯಿಗಳ ಮೇಲೆ ಆ್ಯಸಿಡ್ ದಾಳಿ ನಡೆಸಿ, ಕೊಲೆ ಮಾಡಿರುವ ಅಮಾನವೀಯ ಘಟನೆ ಮಧ್ಯಪ್ರದೇಶದ ಉಜ್ಜೈನಿಯಲ್ಲಿ ನಡೆದಿದೆ.

ಉಜ್ಜೈನಿಯ ನಾಗಜಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 5 ಬೀದಿ ನಾಯಿಗಳ ಬಾಯಿಗೆ ಆ್ಯಸಿಡ್ ಹಾಕಿದ್ದಾರೆ ಎಂದು ಅಪರಿಚಿತ ವ್ಯಕ್ತಿ ಕರೆ ಮಾಡಿದ್ದರು. ಇದನ್ನು ಕೇಳಿ ಸ್ಥಳಕ್ಕೆ ಧಾವಿಸಿದಾಗ ಘಟನೆ ನಡೆದಿರುವುದು ಬೆಳಕಿಗೆ ಬಂತು ಎಂದು ಪೀಪಲ್ ಫಾರ್ ಅನಿಮಲ್ಸ್ ಇಂದೋರ್ ಘಟಕದ ಅಧ್ಯಕ್ಷ ಪ್ರಿಯಾಂಶು ಜೈನ್ ತಿಳಿಸಿದ್ದಾರೆ. ಆ ಬಳಿಕ ಸಂಸ್ಥೆಯ ಸದಸ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ನಾಲ್ಕರಿಂದ ಎಂಟು ವರ್ಷ ಪ್ರಾಯದ ನಾಯಿಗಳ ಮೇಲೆ ಆ್ಯಸಿಡ್ ದಾಳಿ ನಡೆಸಲಾಗಿದ್ದು, ಕೆಲ ನಾಯಿಗಳ ಬಾಯಿಗೆ ಆ್ಯಸಿಡ್ ಹಾಕಿದ್ದರಿಂದ ಸಂಪೂರ್ಣ ಸುಟ್ಟುಹೋಗಿದೆ. ಹೀಗೆ ಜೀವನ್ಮರಣದ ಹೋರಾಟ ನಡೆಸುತ್ತಿದ್ದ ನಾಯಿಗಳನ್ನು ಸ್ಥಳೀಯರು ಪಶು ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಿಲ್ಲ.

ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದವು. ಇದರ ಬೆನ್ನಲ್ಲೇ ಪ್ರಕರಣ ದಾಖಲಿಸಿರುವ ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಸುತ್ತ ಮುತ್ತಲಿನ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿರುವುದಾಗಿ ನಾಗಜಿರಿ ಪೊಲೀಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಲಿವಾನ್ ಕುಜೂರ್ ತಿಳಿಸಿದ್ದಾರೆ. ಖಂಡಿತವಾಗಿಯೂ ಆರೋಪಿಯನ್ನು ಬಂಧಿಸುವುದಾಗಿ ಪೊಲೀಸರು ಪೀಪಲ್ ಫಾರ್ ಅನಿಮಲ್ಸ್ ಸಂಸ್ಥೆಗೆ ಭರವಸೆ ನೀಡಿದ್ದಾರೆ.

ಒಟ್ಟಿನಲ್ಲಿ ಮೂಕ ಪ್ರಾಣಿಗಳ ಮೇಲಿನ ಅನುಮಾಷ ಕೃತ್ಯದ ಬಗ್ಗೆ ಎಲ್ಲೆಡೆಯಿಂದಲೂ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ದುಷ್ಕರ್ಮಿಗಳಿಗೆ ಸರಿಯಾದ ಶಿಕ್ಷೆಯಾಗಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

Leave A Reply

Your email address will not be published.