NEET : ಈ ವರ್ಷ ಸಂಗ್ರಹ ಮಾಡಿದ್ದ ಶುಲ್ಕ ವಿದ್ಯಾರ್ಥಿಗಳಿಗೆ ವಾಪಾಸ್ | ಸಚಿವ ಡಾ.ಅಶ್ವತ್ಥ್ ನಾರಾಯಣ ಘೋಷಣೆ

ನೀಟ್ ಪರೀಕ್ಷೆಯಲ್ಲಿ ವಿಳಂಬ ಆಗಿರುವುದರಿಂದ, ಈಗಾಗಲೇ ಎಂಜಿನಿಯರಿಂಗ್ ಸೀಟು ಪಡೆದುಕೊಂಡು ಈಗ ವೈದ್ಯಕೀಯ ಕೋರ್ಸಿಗೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿಧಿಸುತ್ತಿದ್ದ ದಂಡ ಶುಲ್ಕವನ್ನು ರದ್ದುಪಡಿಸಲಾಗಿದೆ.

ಈ ವರ್ಷ ಸಂಗ್ರಹ ಮಾಡಿದ್ದ ಶುಲ್ಕವನ್ನು ವಿದ್ಯಾರ್ಥಿಗಳಿಗೆ ಹಿಂದಿರುಗಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸೂಚನೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಶುಕ್ರವಾರ ಕೇಳಿದ ಪ್ರಶ್ನೆಗಳಿಗೆ ಉತ್ತರಿಸುತ್ತಾ ಈ ವಿನಾಯಿತಿ ಈ ವರ್ಷಕ್ಕೆ ಮಾತ್ರ ಅನ್ವಯಿಸುತ್ತದೆ ಎಂದಿದ್ದಾರೆ.

ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಸೀಟು ಹಂಚಿಕೆ ಒಟ್ಟಿಗೇ ನಡೆಯುತ್ತಿತ್ತು. ಈ ವರ್ಷ ಪರೀಕ್ಷಾ ವಿಚಾರ ಕೋರ್ಟ್ ಮೆಟ್ಟಿಲೇರಿರುವುದರಿಂದ ವೈದ್ಯಕೀಯ ಸೀಟು ವಿಳಂಬ ಪಡೆದುಕೊಂಡಿದೆ. ಎಂಜಿನಿಯರಿಂಗ್ ಪ್ರವೇಶಾತಿ ಪಡೆದವರಿಗೆ ಈಗ ವೈದ್ಯಕೀಯ ಸೀಟು ಸಿಕ್ಕಿದ್ದರೆ ಆಸಕ್ತರು ಅಲ್ಲಿಗೇ ಹೋಗಬಹುದು. ಇದಕ್ಕೆ ಯಾವುದೇ ದಂಡ ವಸೂಲಿ ಇಲ್ಲ. ಹಾಗೆಯೇ ಈ ವರ್ಷ ಕಟ್ಟಿದ್ದ ಶುಲ್ಕ ಮುಟ್ಟುಗೋಲು ಮಾಡುವುದಿಲ್ಲ‌ ಬದಲಾಗಿ ಇದನ್ನು ವಿದ್ಯಾರ್ಥಿಗಳಿಗೇ ಹಿಂತಿರುಗಿಸಲಾಗುವುದು.

ಪ್ರವೇಶ ಪಡೆದ ನಂತರ ಸೀಟು ಬಿಟ್ಟು ಹೋಗುವವರಿಗೆ ಶುಲ್ಕದ ಐದು ಪಟ್ಟು ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ಇದೆ ಆದರೆ ಈ ಬಾರಿ ವಿನಾಯಿತಿ ನೀಡಲಾಗಿದೆ ಎಂದು ಅಶ್ವತ್ಥ್ ನಾರಾಯಣ ಹೇಳಿದರು.

Leave A Reply

Your email address will not be published.