ಕಾರು-ಬೈಕ್ ಮುಖಾಮುಖಿ ಡಿಕ್ಕಿ | ಧರ್ಮಸ್ಥಳಕ್ಕೆ ಹೊರಟಿದ್ದ ದಂಪತಿಗಳಿಬ್ಬರು ದುರಂತ ಸಾವು

ಕಾರು-ಬೈಕ್ ನಡುವೆ ನಡೆದ ಅಪಘಾತದಲ್ಲಿ ಧರ್ಮಸ್ಥಳಕ್ಕೆ ಹೊರಟಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ದಂಟರಮಕ್ಕಿ ಕೆರೆ ಏರಿ ಬಳಿ ನಡೆದಿದೆ.

ಆನಂದ್ (35) ಹಾಗೂ ಲಕ್ಷ್ಮಿ(33) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ.

ಮೃತರು ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರು ಸಮೀಪದ ಕಾರೇಹಳ್ಳಿ ಮೂಲದವರು. ಇಂದು ಬೆಳಗ್ಗೆ ಬೈಕಿನಲ್ಲಿ ಧರ್ಮಸ್ಥಳಕ್ಕೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ.

ಬೈಕ್-ಕಾರು ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಬೈಕ್ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದಿದೆ. ಕಂದಕಕ್ಕೆ ಬಿದ್ದ ಬೈಕಿಗೆ ಬೆಂಕಿ ಹೊತ್ತಿದ ಪರಿಣಾಮ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಬೈಕ್ ಜೊತೆಯೇ ಕಂದಕಕ್ಕೆ ಬಿದ್ದ ಬೈಕ್ ಸವಾರ ಆನಂದ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತೀವ್ರ ಗಾಯಗೊಂಡಿದ್ದ ಮೃತ ಆನಂದ್ ಪತ್ನಿ ಲಕ್ಷ್ಮಿ ಅವರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗಿದೆ ಅವರು ಕೂಡ ಸಾವನ್ನಪ್ಪಿದ್ದಾರೆ.

ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ ಕೆಲಸ ನಡೆಯುತ್ತಿದೆ. ಹಾಗಾಗಿ, ಹೋಗಿ-ಬರುವ ವಾಹನಗಳನ್ನು ಒಂದೇ ಮಾರ್ಗದಲ್ಲಿ ಓಡಾಡಲು ಅವಕಾಶ ನೀಡಲಾಗಿದೆ. ಎರಡೂ ವಾಹನಗಳು ಒನ್‍ವೇನಲ್ಲಿ ಓಡಾಡುವಾಗ ಈ ಅವಘಡ ಸಂಭವಿಸಿದೆ.

ಈ ಬಗ್ಗೆ ಚಿಕ್ಕಮಗಳೂರು ನಗರ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.