ಬೆಂಗಳೂರು: ಶಿವಮೊಗ್ಗದ ಹರ್ಷ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ) ತನಿಖೆಗೆ ಸರ್ಕಾರ ವಹಿಸಿದೆ.ಎನ್ಐಎ ಈ ಪ್ರಕರಣದ ಕುರಿತು ಈಗಾಗಲೇ ಎಫ್ಐಆರ್ ದಾಖಲಿಸಿಕೊಂಡಿದೆ.
ಫೆ. 20ರಂದು ಶಿವಮೊಗ್ಗದ ಸೀಗೆಹಟ್ಟಿಯಲ್ಲಿ ನಡೆದಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು,ನ್ಯಾಯಾಂಗ ಬಂಧನದಲ್ಲಿದ್ದಾರೆ.
ಬಂಧಿತ ಆರೋಪಿಗಳನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಪ್ರತ್ಯೇಕ ಸೆಲ್ನಲ್ಲಿರಿಸಲಾಗಿತ್ತು. ಇದೀಗ ಕಳೆದ ಮೂರು ದಿನದ ಹಿಂದೆ ನಾಲ್ಕು ಮಂದಿ ಮೈಸೂರು ಕಾರಾಗೃಹಕ್ಕೆ, ನಾಲ್ಕು ಮಂದಿ ಬಳ್ಳಾರಿ ಕಾರಾಗೃಹಕ್ಕೆ ಕಳುಹಿಸಲಾಗಿದೆ. ಉಳಿದ ಇಬ್ಬರು ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿದ್ದು, ಅವರನ್ನು ಶೀಘ್ರದಲ್ಲೇ ಬೆಳಗಾವಿ ಕಾರಾಗೃಹಕ್ಕೆ ಸ್ಥಳಾಂತರಿಸಲಿದ್ದಾರೆ.
ಹರ್ಷ ಪ್ರಕರಣದ ಹಿಂದೆ ದೇಶ ವಿರೋಧಿ ಶಕ್ತಿಗಳ ಪಾತ್ರವಿದೆ ಎಂದು ಬಿಜೆಪಿ ಆರೋಪಿಸಿತ್ತು. ಆರಂಭದಲ್ಲಿ ಪೊಲೀಸ್ ತನಿಖೆಗೆ ಸರ್ಕಾರ ಆದೇಶಿಸಿತ್ತು. ಈಗ ಪ್ರಕರಣ ಗಂಭೀರವಾದ ಹಿನ್ನೆಲೆಯಲ್ಲಿ ಸರ್ಕಾರ ಎನ್ಐಎಗೆ ವಹಿಸಿದೆ.