ಔಷಧಿ ಘಟಕದಲ್ಲಿ ಅನಿಲ ಸೋರಿಕೆಯಿಂದ ರಿಯಾಕ್ಟರ್ ಸ್ಫೋಟ !! | 6 ಮಂದಿ ಕಾರ್ಮಿಕರು ಸಜೀವ ದಹನ, 13 ಮಂದಿಗೆ ಗಂಭೀರ ಗಾಯ

ಔಷಧಿ ಘಟಕದಲ್ಲಿ ಅನಿಲ ಸೋರಿಕೆಯಿಂದ ರಿಯಾಕ್ಟರ್ ಸ್ಫೋಟಗೊಂಡು ಕೆಲಸ ಮಾಡುತ್ತಿದ್ದ 6 ಮಂದಿ ಕಾರ್ಮಿಕರು ಸಜೀವ ದಹನವಾಗಿದ್ದು, 13 ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

ಉದುರುಪತಿ ಕೃಷ್ಣಯ್ಯ, ಬಿ ಕಿರಣ್ ಕುಮಾರ್, ಕಾರು ರವಿ ದಾಸ್, ಮನೋಜ್ ಕುಮಾರ್, ಸುವಾಸ್ ರವಿ ದಾಸ್ ಮತ್ತು ಹಬ್ದಾಸ್ ರವಿ ದಾಸ್ ಮೃತ ಕಾರ್ಮಿಕರು.

ಏಲೂರು ಜಿಲ್ಲೆಯ ಅಕ್ಕಿರೆಡ್ಡಿಗುಡೆಂನಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮೃತಪಟ್ಟ 6 ಮಂದಿಯಲ್ಲಿ ನಾಲ್ವರು ಬಿಹಾರದಿಂದ ವಲಸೆ ಬಂದ ಕಾರ್ಮಿಕರಾಗಿದ್ದಾರೆ.

ಬೆಂಕಿ ಕಾಣಿಸಿಕೊಂಡಾಗ 18 ಮಂದಿ ಔಷಧಿ ಘಟಕದಲ್ಲಿ ಕೆಲಸ ಮಾಡುತ್ತಿದ್ದರು. ಬೆಂಕಿಯನ್ನು ಹತೋಟಿಗೆ ತರಲು ಎರಡು ಗಂಟೆ ಬೇಕಾಯಿತು. ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ದೇವ್ ಶರ್ಮಾ, ಅನಿಲ ಸೋರಿಕೆಗೆ ಕಾರಣವನ್ನು ಪತ್ತೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಘಟನೆಯ ಬಗ್ಗೆ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಗಂಭೀರ ಗಾಯಗೊಂಡವರಿಗೆ ತಲಾ 5 ಲಕ್ಷ ರೂ. ಹಾಗೂ ಸಣ್ಣಪುಟ್ಟ ಗಾಯಳುಗಳಿಗೆ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.

Leave A Reply

Your email address will not be published.