ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ಮೇ 25ರಂದು ಸಾಮೂಹಿಕ ವಿವಾಹ | ಆಸಕ್ತರಿಂದ ಅರ್ಜಿ ಆಹ್ವಾನ !!

ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ಸಪ್ತಪದಿ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮೇ.25 ರಂದು ಬೆಳಗ್ಗೆ 10.50 ರಿಂದ 11.40 ರವರೆಗೆ ನೆರವೇರುವ ಕಟಕ ಲಗ್ನ ಸುಮೂಹುರ್ತದಲ್ಲಿ ವಿವಾಹ ನೆರವೇರಲಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ದೇವಳದ ಕಚೇರಿಯಿಂದ ಅರ್ಜಿಯನ್ನು ಪಡೆದುಕೊಳ್ಳಬಹುದು. ಮೇ 4 ವಧು-ವರರು ನಿಗದಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಮೇ 8 ರಂದು ನೋಂದಾಯಿತ ವಧು-ವರರ ವಿವರಗಳನ್ನು ದೇವಳದಲ್ಲಿ ಪ್ರಕಟಿಸಲಾಗುವುದು. ಮೇ 13 ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕವಾದರೆ, ಮೇ 15 ರಂದು ವಧು-ವರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು.

ವಧು-ವರರು ತಮ್ಮ ಪೂರ್ಣ ವಿಳಾಸದೊಂದಿಗೆ ಜನನ ದಿನಾಂಕವನ್ನು ದೃಢೀಕರಿಸುವ ಶಾಲಾ ದೃಢಪತ್ರ ಪ್ರತಿ, ಪಾಸ್‌ಪೋರ್ಟ್ ಸೈಜ್‌ನ 2 ಫೋಟೋ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ವಧು-ವರರ ಬ್ಯಾಂಕ್ ಖಾತೆ ಸಂಖ್ಯೆಯ ದಾಖಲೆ ಪ್ರತಿ, ಅವಿವಾಹಿತರು ಎಂಬುದಾಗಿ ಪಂಚಾಯತ್‌ನಿಂದ ಅಥವಾ ಸಂಬಂಧಪಟ್ಟ ಸರಕಾರಿ ಇಲಾಖಾಧಿಕಾರಿಗಳಿಂದ ದೃಢಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.

ಸರಳ ಸಾಮೂಹಿಕ ವಿವಾಹವಾಗುವ ವಧುವಿಗೆ ಕಂದಾಯ ಇಲಾಖೆಯ ವತಿಯಿಂದ ಆದರ್ಶ ವಿವಾಹ ಯೋಜನೆಯಡಿ ರೂ.10 ಸಾವಿರ ನಿಶ್ಚಿತ ಠೇವಣಿ ಸೌಲಭ್ಯವನ್ನು ಒದಗಿಸಲಾಗುವುದು. ವಿವಾಹವಾಗುವ ಪರಿಶಿಷ್ಠ ಜಾತಿಯ ಜೋಡಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸರಳ ವಿವಾಹ ಯೋಜನೆಯಡಿ ರೂ.50 ಸಾವಿರಗಳನ್ನು ಒದಗಿಸಲಾಗುವುದು.

ಸರಳ ವಿವಾಹವಾಗುವ ವರನಿಗೆ ಶ್ರೀ ದೇವಳದಿಂದ ಪ್ರೋತ್ಸಾಹ ಧನವಾಗಿ ರೂ.5 ಸಾವಿರ ಹಾಗೂ ವಧುವಿಗೆ ರೂ.10 ಸಾವಿರ ನೀಡಲಾಗುವುದು. ಸುಮಾರು ರೂ 40 ಸಾವಿರ ಮೌಲ್ಯದಲ್ಲಿ ವಧುವಿಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡನ್ನು ದೇವಾಲಯದಿಂದ ಭರಿಸಲಾಗುವುದು. ಸಾಮೂಹಿಕ ಸರಳ ವಿವಾಹಕ್ಕೆ ಆಗಮಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಹಾಗೂ ಸಾರ್ವಜನಿಕರಿಗೆ ಊಟೋಪಚಾರ ಹಾಗೂ ಅವಶ್ಯಕ ವ್ಯವಸ್ಥೆಗಳನ್ನು ದೇವಳದಿಂದ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave A Reply

Your email address will not be published.