ದೇವಸ್ಥಾನದಲ್ಲಿ ನೆಲಗುಡಿಸಿದ ದ್ರೌಪದಿ ಮುರ್ಮು!! | ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿ ಎಂದು ಘೋಷಣೆಯ ಮರುದಿನವೇ ನೆಟ್ಟಿಗರ ಮನಗೆದ್ದ ಬುಡಕಟ್ಟು ಮಹಿಳೆ

ಬಿಜೆಪಿ ನೇತೃತ್ವದ ಎನ್‍ಡಿಎ ಮುಂಬರುವ ಚುನಾವಣೆಗೆ ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರು ಆಯ್ಕೆಯಾಗಿದ್ದಾರೆ. ಬುಡಕಟ್ಟು ಸಮುದಾಯಕ್ಕೆ ಸೇರಿದ ಜಾರ್ಖಂಡ್‌ನ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು ಅವರು ಶಿವನ ದೇವಸ್ಥಾನದ ನೆಲ ಗುಡಿಸುತ್ತಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಇದೀಗ ವೈರಲ್ ಆಗಿದೆ.

ದ್ರೌಪದಿ ಮುರ್ಮು ಅವರು ತಮ್ಮ ತವರು ರಾಜ್ಯವಾದ ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ರಾಯರಂಗ್‍ಪುರದಲ್ಲಿರುವ ಶಿವನ ದೇವಾಲಯಕ್ಕೆ ಇಂದು ಭೇಟಿ ಕೊಟ್ಟಿದ್ದಾರೆ. ಈ ವೇಳೆ ದೇವರಿಗೆ ಪ್ರಾರ್ಥನೆ ಸಲ್ಲಿಸುವ ಮೊದಲು ದೇವಾಲಯದ ನೆಲವನ್ನು ಗುಡಿಸಿದ್ದಾರೆ. ಪ್ರಸ್ತುತ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ವಿಡಿಯೋ ನೆಟ್ಟಿಗರ ಮನಗೆದ್ದಿದೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಷ್ಟ್ರಪತಿ ಅಭ್ಯರ್ಥಿಯನ್ನು ಬಹಿರಂಗಪಡಿಸಿದರು. ಈ ವೇಳೆ ಅವರು, ಒಡಿಸ್ಸಾದ ಬುಡಕಟ್ಟು ನಾಯಕಿ ದ್ರೌಪದಿ ಮುರ್ಮು ಅವರನ್ನು ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಆಡಳಿತಾರೂಢ ಎನ್‍ಡಿಎ ಅಭ್ಯರ್ಥಿಯಾಗಿ ಹೆಸರಿಸಲಾಗಿದೆ ಎಂದು ಘೋಷಿಸಿದ್ದರು.

ʼದ್ರೌಪದಿ ಮುರ್ಮು ಅವರು ಸಮಾಜ ಸೇವೆಗೆ ಮತ್ತು ಬಡವರು, ದೀನದಲಿತರು ಹಾಗೂ ಸಮಾಜದ ಅಂಚಿನಲ್ಲಿರುವವರ ಸಬಲೀಕರಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಅವರು ಶ್ರೀಮಂತ ಆಡಳಿತಾತ್ಮಕ ಅನುಭವವನ್ನು ಹೊಂದಿದ್ದಾರೆ. ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಅವರು ನಮ್ಮ ರಾಷ್ಟ್ರದ ಶ್ರೇಷ್ಠ ರಾಷ್ಟ್ರಪತಿಯಾಗುತ್ತಾರೆ ಎಂಬ ವಿಶ್ವಾಸ ನನಗಿದೆʼ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದರು.

ಒಂದು ವೇಳೆ ಮುರ್ಮು ಅವರು ರಾಷ್ಟ್ರಪತಿಯಾಗಿ ಆಯ್ಕೆಯಾದರೆ, ಇವರೇ ಒಡಿಶಾದಿಂದ ಆಯ್ಕೆಯಾದ ಮೊದಲ ರಾಷ್ಟ್ರಪತಿಯಾಗಿ ಹೊರಹೊಮ್ಮಿದ್ದಾರೆ. ಅಲ್ಲದೇ ಭಾರತದ ರಾಷ್ಟ್ರಪತಿ ಸ್ಥಾನವನ್ನು ಅಲಂಕರಿಸಿದ ಮೊದಲ ಬುಡಕಟ್ಟು ಮಹಿಳೆ ಎಂಬ ಖ್ಯಾತಿಗೆ ಪಾತ್ರವಾಗಲಿದ್ದಾರೆ.

Leave A Reply

Your email address will not be published.