CPM ಪಕ್ಷದ ಪ್ರಧಾನ ಕಚೇರಿ ಮೇಲೆ ಬಾಂಬ್ ದಾಳಿ! ಹೆಚ್ಚಿದ ಆತಂಕ

ತಿರುವನಂತಪುರದಲ್ಲಿ ಆಡಳಿತರೂಢ ಸಿಪಿಎಂ ಪಕ್ಷದ ಪ್ರಧಾನ ಕಚೇರಿ ಮೇಲೆಯೇ ಬಾಂಬ್ ದಾಳಿ ಮಾಡಲಾಗಿದೆ. ಗುರುವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಯೋರ್ವ ಸಿಪಿಎಂ ಕಚೇರಿ ಮೇಲೆ ಸ್ಫೋಟಕ ಎಸೆದಿರುವ ಘಟನೆ ನಡೆದಿದೆ. ಈ ಘಟನೆಗೆ ಎಡ ಪಕ್ಷದವರಿಂದ ಭಾರಿ ಆಕ್ರೋಶ ವ್ಯಕ್ತವಾಗಿದೆ. ರಾಜ್ಯದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

ರಾತ್ರಿ 11.30ರ ಸುಮಾರಿಗೆ ಬೈಕಿನಲ್ಲಿ ಬಂದಿದ್ದ ಅಪರಿಚಿತ ವ್ಯಕ್ತಿಯೊಬ್ಬ ನಗರದ ಹೃದಯಭಾಗದಲ್ಲಿರುವ ಎಕೆಜಿ ಸೆಂಟರ್ ಮೇಲೆ ಸ್ಫೋಟಕ ಎಸೆದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಸಿಪಿಐ(ಎಂ) ಮುಖಂಡರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಇದೊಂದು ಬಾಂಬ್ ದಾಳಿ ಎಂದು ಆರೋಪ ಮಾಡಿದ್ದಾರೆ. ಎಕೆಜಿ ಸೆಂಟರ್‌ನಲ್ಲಿ ತಂಗಿದ್ದ ಕೆಲ ಸಿಪಿಐ(ಎಂ) ಮುಖಂಡರು ಕಟ್ಟಡದ ಹೊರಗೆ ಭಾರಿ ಸ್ಫೋಟದ ಶಬ್ದ ಕೇಳಿಸಿದ್ದಾಗಿಯೂ ಹೇಳಿದ್ದಾರೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಘಟನಾ ಸ್ಥಳ ಮತ್ತು ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ ಸಹ ತಪಾಸಣೆ ನಡೆಸಿದೆ.

ಎಕೆಜಿ ಸೆಂಟರ್‌ನ ಅಧಿಕೃತ ಮಾಧ್ಯಮ ಗುಂಪಿನ ಮೂಲಕ ಸಿಪಿಐ(ಎಂ) ಬಿಡುಗಡೆ ಮಾಡಿದ ಸಿಸಿಟಿವಿ ದೃಶ್ಯಗಳಲ್ಲಿ, ವ್ಯಕ್ತಿಯೊಬ್ಬ ಮೋಟಾರ್ ಬೈಕ್‌ನಲ್ಲಿ ಸ್ಥಳಕ್ಕೆ ಆಗಮಿಸಿ ಕಟ್ಟಡದ ಮೇಲೆ ಸ್ಫೋಟಕ ಎಸೆದು ಸ್ಥಳದಿಂದ ಪರಾರಿಯಾಗುತ್ತಿರುವುದು ಕಂಡುಬಂದಿದೆ. ಸ್ಫೋಟಕ ಎಕೆಜಿ ಕೇಂದ್ರದ ಕಲ್ಲಿನ ಗೋಡೆಗೆ ತಗುಲಿದೆ ಎನ್ನಲಾಗಿದೆ.

Leave A Reply

Your email address will not be published.