ಗಣೇಶೋತ್ಸವ ಆಚರಣೆಗೆ ನ್ಯೂ ರೂಲ್ಸ್ | ಈ ಬಾರಿಯೂ ‘ಡಿಜೆ’ಗಿಲ್ಲ ಅವಕಾಶ!

ಈ ಬಾರಿಯ ಗಣೇಶೋತ್ಸವ ಆಚರಣೆಗೆ ನ್ಯಾಯಾಲಯ ಹಾಗೂ ಸರ್ಕಾರವು ನಿಯಮಾವಳಿಯನ್ನು ಬಿಡುಗಡೆಗೊಳಿಸಿದ್ದು, ಉತ್ಸವವನ್ನು ಸಂಭ್ರಮದಿಂದ ಹಾಗೂ ಶಾಂತಿಯುತವಾಗಿ ಆಚರಿಸಬೇಕು. ಈ ಸಂದರ್ಭದಲ್ಲಿ ಡಿಜೆ ಗೆ ಅವಕಾಶವಿಲ್ಲ ಎಂದು ತಿಳಿಸಿದೆ.

ಗಣೇಶೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಗಣೇಶೋತ್ಸವ ಮಂಡಳಿಗಳ ಪೂರ್ವಭಾವಿ ಸಭೆ ನಡೆಸಿದ್ದು, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿದ್ದಾರೆ.

“ಬೆಳಗಾವಿ ನಗರ ಮತ್ತು ಜಿಲ್ಲೆಯಾದ್ಯಂತ ಆಗಸ್ಟ್ 31 ರಿಂದ ಸೆಪ್ಟೆಂಬರ್ 9 ರವರೆಗೆ ಗಣೇಶೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗೆ ಆಸ್ಪದವಾಗದಂತೆ ಸಂಭ್ರಮದಿಂದ ಹಾಗೂ ಶಾಂತಿಯುತವಾಗಿ ಉತ್ಸವ ಆಚರಣೆಗೆ ಗಣೇಶೋತ್ಸವ ಮಂಡಳಿಗಳು ಸಹಕರಿಸಬೇಕು” ಎಂದು ಹೇಳಿದ್ದಾರೆ.

“ಉತ್ಸವ ಸಂದರ್ಭದಲ್ಲಿ ಡಿಜೆ ಗೆ ಅವಕಾಶವಿಲ್ಲ. ಆದರೆ ನಿಗದಿತ ಪ್ರಮಾಣದ ಶಬ್ದ ಹೊರಸೂಸುವ ‘ಧ್ವನಿ’ವರ್ಧಕ ಬಳಕೆಗೆ ಸದ್ಯಕ್ಕೆ ಅವಕಾಶವಿರುತ್ತದೆ. ಬೆಳಿಗ್ಗೆ 6 ರಿಂದ ರಾತ್ರಿ 10 ರವರೆಗೆ ಧ್ವನಿವರ್ಧಕ ಬಳಕೆಗೆ ನಿಯಮಾವಳಿ ಪ್ರಕಾರ ಅನುಮತಿ ನೀಡಲಾಗುವುದು. ಏಕಗವಾಕ್ಷಿ ವ್ಯವಸ್ಥೆ ಮೂಲಕ ಆಯಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅನುಮತಿಯನ್ನು ನೀಡಲಾಗುವುದು. ಏಕಗವಾಕ್ಷಿ ವ್ಯವಸ್ಥೆ ಮೂಲಕ ಅರ್ಜಿ ಸಲ್ಲಿಸಿದ 24 ಗಂಟೆಗಳಲ್ಲಿ ಅನುಮತಿ ನೀಡಲು ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ಡಿಜೆ, ಧ್ವನಿವರ್ಧಕಗಳ ಬಳಕೆ, ಪಿಓಪಿ ಮೂರ್ತಿ ಬಳಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸರಕಾರ ಮತ್ತು ಸುಪ್ರಿಂ ಕೋರ್ಟ್ ಹಲವಾರು ಆದೇಶಗಳನ್ನು ಮತ್ತು ಮಾರ್ಗಸೂಚಿಗಳನ್ನು ಹೊರಡಿಸಿವೆ. ನ್ಯಾಯಾಲಯ ಹಾಗೂ ಸರಕಾರದ ಮಾರ್ಗಸೂಚಿ ಪ್ರಕಾರ ಉತ್ಸವ ಆಚರಣೆಗೆ ಅವಕಾಶ ಕಲ್ಪಿಸಲಾಗುವುದು.

ಪರಿಸರ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪಿಓಪಿ ಮೂರ್ತಿಗಳನ್ನು ಪ್ರತಿಷ್ಠಾಪನೆಗೆ ಅವಕಾಶವಿರುವುದಿಲ್ಲ. ಆದ್ದರಿಂದ ಪಿಓಪಿ ಮೂರ್ತಿಯನ್ನು ಪ್ರತಿಷ್ಠಾಪಿಸಬಾರದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮನವಿ ಮಾಡಿಕೊಂಡರು. ಪಿಓಪಿ ಗಣೇಶ ಮೂರ್ತಿ ತಯಾರಕರಿಗೆ ಮುಂಚಿತವಾಗಿಯೇ ಮಾಹಿತಿಯನ್ನು ನೀಡಬೇಕಿರುವುದರಿಂದ ಬಹಳಷ್ಟು ಮುಂಚಿತವಾಗಿಯೇ ಸಭೆ ನಡೆಸಲಾಗಿದೆ ಎಂದರು.

ಗಣೇಶೋತ್ಸವ ಮಹಾಮಂಡಳಿಗಳಿಗೆ ಅನುಕೂಲ ಕಲ್ಪಿಸಲು ಹೆಸ್ಕಾಂ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತಿತರ ಇಲಾಖೆಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ರಸ್ತೆಯ ಗುಂಡಿಗಳನ್ನು ಮುಚ್ಚಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ನಿರ್ದೇಶನ‌ ನೀಡಿದರು.

Leave A Reply

Your email address will not be published.