ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ, 67 ಸಾಧಕರಿಗೆ ಗೌರವ, ತೆರೆಮರೆಯ ಶ್ರಮಿಕರಿಗೂ ಸಂದ ಗೌರವ !

ಅರವತ್ತೇಳನೇ ಕನ್ನಡ ರಾಜ್ಯೋತ್ಸವ ನಿಮಿತ್ತ ರಾಜ್ಯದ ಹಲವು ಗಣ್ಯರನ್ನು ಹಿರಿಯರನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಅರಸಿಕೊಂಡು ಬಂದಿದೆ. ಪ್ರಮುಖ ಸಾಹಿತಿಗಳು, ತೆರೆಮರೆಯ ಸಾಧಕರು, ಕ್ರೀಡಾ ಪಟುಗಳು ಸಮಾಜ ಸೇವಕರು ಸೇರಿದಂತೆ 67 ಜನರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರಕಾರ ಘೋಷಣೆ ಮಾಡಿದೆ. ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ 10 ಸಂಘ-ಸಂಸ್ಥೆಗಳನ್ನೂ ಸರ್ಕಾರ ಈ ಬಾರಿ ಗುರುತಿಸಿದೆ.

ಈ ಹಿಂದೆ ಪದ್ಮ ಪ್ರಶಸ್ತಿ .ಆಯ್ಕೆ ಮಾಡಿದ ಮಾದರಿಯಲ್ಲಿ ಈ ವರ್ಷ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಲ್ಲೂ ಹೊಸತನವನ್ನು ಮೆರೆದಿದ್ದು, ಸಾಮಾನ್ಯರಲ್ಲಿ ಅಸಾಮಾನ್ಯ ಕೆಲಸ ಮಾಡಿದವರನ್ನು ರಾಜ್ಯ ಸರ್ಕಾರ ಗುರುತಿಸಿದೆ.

ತೆರೆಮರೆಯಲ್ಲಿದ್ದ ಅರ್ಹ ಸಾಧನೆ ಮಾಡಿದವರು, ಸಮಾಜದ ನಾನಾ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದವರು, ಸಮಾಜದ ಹಿತಕ್ಕಾಗಿ ಗಣನೀಯ ಸೇವೆ ಸಲ್ಲಿಸಿದ ಹತ್ತು ಸಂಘ-ಸಂಸ್ಥೆಗಳನ್ನು, ಸಾಧಕರನ್ನು ರಾಜ್ಯೋತ್ಸವ ಆಯ್ಕೆ ಸಮಿತಿ ಹಾಗೂ ಸರಕಾರವೇ ಗುರುತಿಸಿ ನೀಡಿರುವುದು ಈ ಬಾರಿಯ ಒಂದು ಹೊಸ ಸಂಪ್ರದಾಯ.

ರಾಜ್ಯೋತ್ಸವ ಪ್ರಶಸ್ತಿಗೆ ಯಾವುದೇ ಅರ್ಜಿಯನ್ನು ಪರಿಗಣಿಸುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್‌ ಕುಮಾರ್‌ ಮೊದಲೇ ಪ್ರಕಟಿಸಿದ್ದರು. ಅದರಂತೆ ಹೆಚ್ಚಿನ ಜನರುಗಳು ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿಯನ್ನು ಹಾಕಿರಲಿಲ್ಲ. ಆದರೂ ಹಲವು ಅರ್ಜಿಗಳು ಬಂದಿದ್ದವು. Aa ಅರ್ಜಿಗಳಲ್ಲಿ ಇರುವ ಕೆಲ ಸಾಧಕರನ್ನೂ ಆಯ್ಕೆ ಸಮಿತಿ ಪರಿಗಣಿಸಿದೆ, ಒಟ್ಟಾರೆಯಾಗಿ ನ್ಯಾಯಯುತ ಪಟ್ಟಿ ಸಿದ್ದಗೊಂಡಿದೆ.

ಇಸ್ರೋ ಮಾಜಿ ನಿರ್ದೇಶಕ ಶಿವನ್‌, ಹಿರಿಯ ಸಾಹಿತಿ ಅ.ರಾ.ಮಿತ್ರ, ಪ್ರೊ.ಕೃಷ್ಣೇಗೌಡ, ಇಂಗ್ಲೀಷ್‌ ಕಡಲ್ಗಾಲುವೆ ಈಜಿದ ವಿಕಲಚೇತನ ಕ್ರೀಢಾಪಟು ರಾಘವೇಂದ್ರ ಅಣ್ವೇಕರ್‌, ನಿವೃತ್ತ ಐಎಎಸ್‌ ಅಧಿಕಾರಿ ಮದನ್‌ ಗೋಪಾಲ್‌, ಸೋಲಿಗ ಸಮುದಾಯದಲ್ಲಿ ಸಹಕಾರದ ಬೆಳಕು ಚೆಲ್ಲಿದ ಸೋಲಿಗರ ಮಾದಮ್ಮ, ವನಸಂರಕ್ಷಣೆಗಾಗಿ ಜೀವನವನ್ನೇ ಮುಡುಪಾಗಿಟ್ಟ ರಾಮನಗರದ ಸಾಲುಮರದ ನಿಂಗಣ್ಣ, ಹಿರಿಯ ಚಲನಚಿತ್ರನಟರಾದ ದತ್ತಣ್ಣ, ಅವಿನಾಶ್‌, ಪೌರ ಸೇನಾನಿ ಶ್ರೀಮತಿ ಮಲ್ಲಮ್ಮ, ಉಡುಪಿ ಜಿಲ್ಲೆಯ ದೈವನರ್ತಕ ಗುಡ್ಡ ಪಾಣಾರ, ಕಿರುತೆರೆ ನಟ ಸಿಹಿಕಹಿ ಚಂದ್ರು, ಯಕ್ಷಗಾನ ಕಲಾವಿದರಾದ ಡಾ. ಎಂ.ಪ್ರಭಾಕರ ಜೋಷಿ, ಸುಬ್ರಹ್ಮಣ್ಯ ಧಾರೇಶ್ವರ, ವೀರಗಾಸೆ ಕಲಾವಿದ ಹಾವೇರಿಯ ಮಹೇಶ್ವರ ಗೌಡ ಲಿಂಗದಹಳ್ಳಿ, ಕಮಲಮ್ಮ ಸೂಲಗಿತ್ತಿ, ಹಿರಿಯ ಸಂಗೀತ ವಿದ್ವಾಂಸ ಅನಂತಾಚಾರ್ಯ ಬಾಳಾಚಾರ್ಯ, ಹಿರಿಯ ಪತ್ರಕರ್ತರಾದ ಎಚ್.ಆರ್. ಶ್ರೀಶ, ಜಿ.ಎಂ.ಶಿರಹಟ್ಟಿ, ಹಿರಿಯ ಸಂಶೋಧಕ ಡಾ.ಎಂ.ಜಿ.ನಾಗರಾಜ್‌ ಸೇರಿದಂತೆ 67 ಜನರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಚಾಮರಾಜನಗರದ ಸೋಲಿಗರ ಮಾದಮ್ಮ, ಪೌರ ಸೇನಾನಿ ಶ್ರೀಮತಿ ಮಲ್ಲಮ್ಮ, ಉಡುಪಿಯ ದೈವನರ್ತಕ, ಗುಡ್ಡ ಪಾಣಾರ, ಪರಿಸರ ಸಂರಕ್ಷಕ ಸಾಲುಮರದ ನಿಂಗಣ್ಣ, ಗೊಲ್ಲ ಸಮುದಾಯದ ಡಾ.ಕರಿಯಪ್ಪ, ಮುಖವೀಣೆ ಕಲಾವಿದ ಅಂಜನಪ್ಪ ಸತ್ಪಾಡಿ ಅವರನ್ನು ಆಯ್ಕೆ ಮಾಡಲಾಗಿ, ತೆರೆಮರೆಯಲ್ಲಿ ಸಾಧನೆ ಮಾಡಿದ ಜನಸಾಮಾನ್ಯರನ್ನು ಗುರುತಿಸುವಲ್ಲಿ ರಾಜ್ಯೋತ್ಸವ ಸಮಿತಿ ವಿಶೇಷ ಗಮನ ನೀಡಿದೆ.

Leave A Reply

Your email address will not be published.