ಬಿಜೆಪಿ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ | ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರ್ಪಡೆ ಕಾರಣ?!
ರಾಜಕೀಯಕ್ಕೆ ಎಂಟ್ರಿ ಕೊಟ್ಟ ಮೇಲೆ ಒಂದಲ್ಲ ಒಂದು ವಿಚಾರಕ್ಕೆ ಮುನಿಸು ಕೋಪ, ಜಗಳಗಳು ನಡೆಯೋದು ಸರ್ವೇ ಸಾಮಾನ್ಯ. ಅದರಲ್ಲಿಯೂ ಒಂದು ಪಕ್ಷದಲ್ಲಿ ಗುರುತಿಸಿಕೊಂಡು ಮತ್ತೊಂದು ಪಕ್ಷಕ್ಕೆ ಜಂಪ್ ಆಗಿ ಚುನಾವಣೆ ಸಮೀಪಿಸುತ್ತಿದ್ದಂತೆ ಹೀಗೆ ಪಕ್ಷ ಪರ್ಯಟನೆ ನಡೆಸೋದು ಕಾಮನ್ ಆಗಿ ಬಿಟ್ಟಿದ್ದು, ಚುನಾವಣೆಯ ಕಾವು ಏರಿದಂತೆ ಜಗಳ ತಾರಕಕ್ಕೇರಿ ಗಲಾಟೆ ಹಲ್ಲೆ ನಡೆಯೋದು ಗೊತ್ತಿರುವ ವಿಚಾರವೇ!!.
ಇದೀಗ, ಎನ್.ಆರ್.ಪುರ ತಾಲೂಕಿನ ನಾಗಲಾಪುರ ಸಮೀಪದ ರಾವೂರು ಗ್ರಾಮದ ಬಳಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಬುಧವಾರ ವರದಿಯಾಗಿವೆ. ರಾವೂರು ಗ್ರಾಮದ ಬಿಜೆಪಿ ಕಾರ್ಯಕರ್ತನಾಗಿರುವ ಶಿವು ಮಾರಣಾಂತಿಕ ಹಲ್ಲೆಗೊಳಗಾದ ಕಾರ್ಯಕರ್ತ ಎನ್ನಲಾಗಿದೆ. ಕಳೆದ ತಿಂಗಳಷ್ಟೇ, ಶಿವು ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಎನ್ನಲಾಗಿದ್ದು, ಹೀಗಾಗಿ, ಶಿವು ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದ ಹಿನ್ನೆಲೆ ಕೋಪಗೊಂಡ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಹಿಂಬಾಲಕರು ಶಿವು ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಗಾಯಗೊಂಡಿರುವ ಶಿವು ಎನ್.ಆರ್.ಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧವಾದ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಖಾಕಿ ಪಡೆ ಈ ಕುರಿತಂತೆ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.