ಬಜೆಟ್‌ನಲ್ಲಿ ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನಕ್ಕೆ ಅನುದಾನ ಘೋಷಣೆ -ಕ್ಯಾಂಪ್ಕೋ ಸ್ವಾಗತ

ಹಳದಿ ಎಲೆ ಮತ್ತು ಎಲೆ ಚುಕ್ಕಿರೋಗದ ಬಗ್ಗೆ ಸಂಶೋಧನೆ ನಡೆಸಲು ಬಜೆಟ್‌ನಲ್ಲಿ 10 ಕೋ.ರೂ. ಅನುದಾನ ಘೋಷಣೆ ಮಾಡಿರುವುದನ್ನು ಕ್ಯಾಂಪ್ಕೋ ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.

ಬಜೆಟ್‌ನಲ್ಲಿ ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನಕ್ಕೆ ಅನುದಾನ ಘೋಷಿಸಬೇಕೆಂಬ ಅಪೇಕ್ಷೆಯನ್ನು ಕ್ಯಾಂಪ್ಕೋ ಹೊಂದಿತ್ತು. ಅದನ್ನು ಸರಕಾರ ಈಡೇರಿಸಿದೆ.

ಕೃಷಿಯಲ್ಲಿ ತಂತ್ರಜ್ಞಾನ ಮತ್ತು ವೈಜ್ಞಾನಿಕ ಪದ್ಧತಿಗಳ ಅಳವಡಿಕೆಗೆ ಉತ್ತೇಜನ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಹಾಗೂ ರಪ್ತಿಗೆ ಒತ್ತು ನೀಡುವ ಮೂಲಕ ಸಮಗ್ರ ಕೃಷಿ ಪದ್ಧತಿಯ ಉತ್ತೇಜನಕ್ಕೆ ಬಜೆಟ್‌ನಲ್ಲಿ ಪ್ರೋತ್ಸಾಹ 3 ಲಕ್ಷದಿಂದ 5 ಲಕ್ಷದವರೆಗೆ ಬಡ್ಡಿ ರಹಿತ ಸಾಲ, ಉತ್ತರ ಕರ್ನಾಟಕದ ರೈತರಿಗೆ ಸಹಾಯಧನ, ನೀರಾವರಿಗೆ ಅತೀ ಹೆಚ್ಚಿನ ಹಣ ಮಂಜೂರು, ಕೃಷಿ ಯಂತ್ರೋಪಕರಣಗಳ ಖರೀದಿಗೆ ಸಬ್ಸಿಡಿ ಮುಂತಾದ ಯೋಜನೆಗಳ ಮೂಲಕ ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬಜೆಟ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ.

ಪಶುಸಂಗೋಪನೆಗೆ ಅನುದಾನದಲ್ಲಿ ಹೆಚ್ಚಳ, ಶಿಕ್ಷಣ, ವೈದ್ಯಕೀಯ ಮತ್ತು ಆಡಳಿತ ಸುಧಾರಣೆಗೆ ಒತ್ತು ನೀಡಿ ಸಾಮಾನ್ಯ ಜನರ ಅಭಿವೃದ್ಧಿ ದೃಷ್ಟಿಯಿಂದ ಬಜೆಟ್ ಮಂಡನೆ ಮಾಡಲಾಗಿದೆ. ಒಟ್ಟಾರೆ ನೇಗಿಲ ಯೋಗಿಯ ನೆರವಿಗೆ ಒತ್ತು ನೀಡಲಾಗಿದೆ. ಕೃಷಿ ಮತ್ತು ಉಳಿದ ಎಲ್ಲಾ ರಂಗಗಳಿಗೂ ಅನುದಾನ ನೀಡುವ ಮೂಲಕ ಸಮತೋಲನ ಹೊಂದಿರುವ ಅತ್ಯುತ್ತಮ ಬಜೆಟ್ ಆಗಿದೆ ಎಂದು ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.

Leave A Reply

Your email address will not be published.