H D Kumaraswamy: ADGP ಚಂದ್ರಶೇಖರ್ ಒಬ್ಬ ಕ್ರಿಮಿನಲ್, ಬ್ಲ್ಯಾಕ್ ಮೇಲರ್ – HD ಕುಮಾರಸ್ವಾಮಿ ಕಿಡಿ

H D Kumaraswamy: ADGP ಚಂದ್ರಶೇಖರ್ ಒಬ್ಬ ಬ್ಲ್ಯಾಕ್ ಮೇಲರ್(Black mailer), ಕ್ರಿಮಿನಲ್(Criminal). ನನ್ನ ಪ್ರಶ್ನೆಗಳಿಗೆ ಆ ಅಧಿಕಾರಿ ಉತ್ತರ ಕೊಡಲಿ, ಮತ್ತೆ ನಾನು ಎಲ್ಲಿ ಮಾತನಾಡಬೇಕು ಅಲ್ಲೇ ಮಾತನಾಡುತ್ತೇನೆ. ಇನ್ಸ್ಪೆಕ್ಟರ್(Inspector) ಒಬ್ಬರಿಂದ ₹20 ಕೋಟಿ ಡಿಮ್ಯಾಂಡ್ ಮಾಡಿದ್ದರು, ಆ ಕಿರಿಯ ಅಧಿಕಾರಿಯೇ ದೂರು ಕೊಟ್ಟಿದ್ದಾರೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ(MP H D Kumaraswami) ಅವರು ಗುಡುಗಿದರು.

ಆತ ತನ್ನ ಸಹೋದ್ಯೋಗಿಗಳಿಗೆ ಬರೆದಿರುವ ಪತ್ರವನ್ನು ಚೆನ್ನಾಗಿ ತಯಾರು ಮಾಡಿದ್ದಾರೆ. ಆ ಪತ್ರವನ್ನು ಯಾರು, ಎಲ್ಲಿ ತಯಾರು ಮಾಡಿಕೊಟ್ರೂ ಅನ್ನೋದು ಚೆನ್ನಾಗಿ ಗೊತ್ತಿದೆ ನನಗೆ. ಯಾವ ಜಾಗ, ಸಂದರ್ಭದಲ್ಲಿ ಇದಕ್ಕೆ ಉತ್ತರ ಕೊಡಬೇಕೋ ಅಲ್ಲಿ ಕೊಡುತ್ತೇನೆ ಎಂದರು. ಈ ಬಗ್ಗೆ ಭಾನುವಾರ ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಸಚಿವರು ಉತ್ತರಿಸಿದರು.

ಆತ ಹೇಳಿದಂತೆ ನಾನು ಪ್ರಕರಣದಲ್ಲಿ ಆರೋಪಿ ಇರಬಹುದು. ಆದರೆ, ಆತ ಅಧಿಕಾರಿ ಸೋಗಿನಲ್ಲಿರೋ ಒಬ್ಬ ಕ್ರಿಮಿನಲ್. ಆತನ ವಿರುದ್ಧ ಸರಣಿ ಅಪರಾಧ ಕೃತ್ಯಗಳನ್ನು ಮಾಡಿರುವ ಆರೋಪಗಳಿವೆ. ಲೋಕಾಯುಕ್ತರಿಗೆ ರಾಜ್ಯಪಾಲರು ಬರೆದ ಪತ್ರವು ಸರಕಾರಿ ಪ್ರಾಯೋಜಿತ ಒಂದು ನಿರ್ದಿಷ್ಟ ಸುದ್ದಿ ವಾಹಿನಿಗೆ ಸೋರಿಕೆ ಆಗಿತ್ತು. ಅದನ್ನು ಸೋರಿಕೆ ಮಾಡಿದ್ದು ಯಾರು ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದು ಕಿಡಿಕಾರಿದರು.

ಆದರೆ, ಆತ ರಾಜಭವನದಿಂದಲೇ ಸೋರಿಕೆ ಆಗಿದೆ ಎಂದು ಕತೆ ಕಟ್ಟಿ, ರಾಜಭವನ ಸಿಬ್ಬಂದಿಯನ್ನೇ ತನಿಖೆ ಮಾಡಬೇಕು,ಇದಕ್ಕೆ ಅನುಮತಿ ಕೊಡಿ ಎಂದು ಅಧಿಕಾರಿ ಚಂದ್ರಶೇಖರ್ ತನ್ನ ಉನ್ನತ ಅಧಿಕಾರಿಗೆ ಪತ್ರ ಬರೆದಿದ್ದಾರೆ. ಹೀಗಾಗಿ ಆ ಅಧಿಕಾರಿಯ ದರ್ಪ ಮತ್ತು ಆತನ ಹಿನ್ನೆಲೆ ಬಗ್ಗೆ ನಾನು ದಾಖಲೆಗಳ ಸಮೇತ ಮಾತನಾಡಿದ್ದೇನೆ ಎಂದು ಸಚಿವರು ಹೇಳಿದರು.

ನನ್ನ ಪ್ರಶ್ನೆಗಳಿಗೆ ಅಧಿಕಾರಿ ಉತ್ತರಿಸಲಿ, ನಾನು ಕೇಳಿರುವ ಪ್ರಶ್ನೆಗಳಿಗೆ ಆತ ಉತ್ತರ ಕೊಟ್ಟಿಲ್ಲ. ಬದಲಿಗೆ ಕ್ರಿಮಿನಲ್ ಮನಃಸ್ಥಿತಿಯ ಆತ ಕೊಳಕು ಭಾಷೆ ಬಳಸಿ, ಒಬ್ಬ ಕೇಂದ್ರ ಸಚಿವರ ಬಗ್ಗೆ ಕೆಟ್ಟದ್ದಾಗಿ ಪತ್ರದಲ್ಲಿ ಪದ ಬಳಕೆ ಮಾಡಿದ್ದಾರೆ. ಇದಕ್ಕೆ ಏನು ಮಾಡಬೇಕು, ಎಲ್ಲಿ ಉತ್ತರ ಕೊಡಬೇಕು ಅನ್ನೋದು ಗೊತ್ತಿದೆ ನನಗೆ ಎಂದರು.
ನಾನು ದಾಖಲೆ, ವಿಷಯ ಇಲ್ಲದೆ ಮಾತನಾಡುವುದಿಲ್ಲ. ಅಧಿಕಾರಿ ಬರೆದಿರುವ ಪತ್ರವನ್ನು ಚೆನ್ನಾಗಿ ಸಿದ್ಧ ಮಾಡಿಕೊಟ್ಟಿದ್ದಾರೆ. ನಾನು ಶನಿವಾರ ಮಾಧ್ಯಮಗೋಷ್ಠಿ ನಡಿಸಿದ ಮೇಲೆ, ಸಂಜೆ ಆ ಅಧಿಕಾರಿ ಎಲ್ಲಿ ಹೋಗಿದ್ರು ಅನ್ನೋದು ತಿಳಿದಿದೆ. ಆ ಪತ್ರವನ್ನು ಯಾವ ಕಾನೂನು ಪಂಡಿತರು ತಯಾರು ಮಾಡಿಕೊಟ್ಟರು, ಅವರೊಂದಿಗೆ ಇನ್ನೊಬ್ಬರು ಯಾರಿದ್ರು ಅನ್ನೋದು ನನಗೆ ಗೊತ್ತಿದೆ ಎಂದು ಹೇಳಿದರು.

ಆ ಪತ್ರದಲ್ಲಿ ಸತ್ಯಮೆಯ ಜಯತೆ ಎಂದು ಅಧಿಕಾರಿ ಬರೆದಿದ್ದಾರೆ. ನಾನು ಹೋರಾಟ ಮಾಡುತ್ತಿರೋದು ಕೂಡ ಅದೇ ಉದ್ದೇಶಕ್ಕೆ. ಶನಿವಾರ ಅಷ್ಟು ದಾಖಲೆಗಳ ಸಮೇತ ಈ ವ್ಯಕ್ತಿ ಬಗ್ಗೆ ಹೇಳಿದ್ದು ಸತ್ಯಮೇವ ಜಯತೇ ಅನ್ನೋ ಕಾರಣಕ್ಕಾಗಿಯೇ. ಪೊಲೀಸ್ ಠಾಣೆಗೆ ಈ ಅಧಿಕಾರಿ ವಿರುದ್ಧ ನಾನು ದೂರು ಕೊಟ್ಟಿದ್ದೀನಾ? ಅವರ ಕೈಕೆಳಗೆ ಕೆಲಸ ಮಾಡೋ ಇನ್ಸ್‌ಪೆಕ್ಟರ್ ಗೆ ₹20 ಕೋಟಿ ಡಿಮ್ಯಾಂಡ್ ಇಟ್ಟು ಸಿಕ್ಕಿಬಿದ್ದಿದ್ದಾನೆ. ಅದೇ ಇನ್ಸ್‌ಪೆಕ್ಟರ್ ಈ ಚಂದ್ರಶೇಖರ್ ವಿರುದ್ಧ ದೂರು ನೀಡಿದ್ದಾರೆ. ತಕ್ಷಣ ₹2 ಕೋಟಿ ತಂದು ಕೊಡಬೇಕು ಎಂದು ಬ್ಲಾಕ್ ಮೇಲ್ ಮಾಡಿದ್ದು ಈತನೇ ಅಲ್ವಾ? FIR ಹಾಕಿದ ಮೇಲೆ ಕೇಸ್ ಕೋರ್ಟ್ ಮುಂದೆ ಇದೆಯಲ್ಲ. ಇದೇನಾ ಆತನ ಸತ್ಯಮೇವ ಜಯತೆ? ಎಂದು ಸಚಿವರು ಕಿಡಿಕಾರಿದರು.

Leave A Reply

Your email address will not be published.