Dakshina Kannada ಜಿಲ್ಲೆ ಈ ಗ್ರಾಮದಲ್ಲಿ ಸರಣಿ ಆತ್ಮಹತ್ಯೆ, ಅಪಘಾತಗಳಿಂದ 50ಕ್ಕೂ ಹೆಚ್ಚು ಸಾವು – ದೈವದ ಮುನಿಸು ಕಾರಣ?

Dakshina Kannada : ದೈವ ದೇವರುಗಳ ನಂಬಿಕೆಗೆ ಹೆಸರಾದ ದಕ್ಷಿಣಕನ್ನಡ ಜಿಲ್ಲೆಯ ಗ್ರಾಮ ಒಂದರಲ್ಲಿ ಸಾಲು ಸಾಲು ಅಕಾಲಿಕ ಮೃತ್ಯು ಇಲ್ಲಿನ ಜನರನ್ನು ಬೆಚ್ಚಿಬೀಳಿಸಿದ್ದು ಇದು ದೈವದ ಶಾಪವೇ ಎಂಬ ಆತಂಕ ಜನರಲ್ಲಿ ಶುರುವಾಗಿದೆ.

ಹೌದು, 2019ರಿಂದ ಈವರೆಗೆ ಸುಮಾರು 50ಕ್ಕೂ ಹೆಚ್ಚು ಮಂದಿ ವಯಸಲ್ಲದ ವಯಸ್ಸಿಗೆ ಅಪಮೃತ್ಯುವಿಗೆ ಒಳಗಾಗಿದ್ದರು. ಹೆಚ್ಚಿನ ಮಂದಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇನ್ನು ಕೆಲವರು ಅಪಘಾತ, ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗಿ ಜೀವ ಕಳೆದುಕೊಂಡಿದ್ದರು. ಅದರಲ್ಲೂ ರೂಪದರ್ಶಿಯಾಗಿದ್ದ ಪ್ರೇಕ್ಷಾ ಎಂಬ ಯುವತಿ ನೇಣಿಗೆ ಕೊರಳೊಡ್ಡಿದ್ದರೆ, ಅಶ್ವಿನಿ ಬಂಗೇರ ಎಂಬ ಯುವತಿ ಗೃಹಪ್ರವೇಶವಾದ ಐದೇ ದಿನದಲ್ಲಿ ತನ್ನದೇ ನೂತನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು.
ಇದರಿಂದ ಕಂಗೆಟ್ಟ ಊರಿನ ಮಂದಿ ಕುಂಪಲದ ಆದಿಶಕ್ತಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ದೈವಜ್ಞರ ಮೂಲಕ ಪ್ರಶ್ನಾ ಚಿಂತನೆಯನ್ನಿಟ್ಟರು. ಈ ಪ್ರಶ್ನಾ ಚಿಂತನೆಯಲ್ಲಿ ಕುಂಪಲ ಗ್ರಾಮದ ಜನತೆಯ ಸರಣಿ ಸಾವಿಗೆ ದೈವದ ಮುನಿಸೇ ಕಾರಣ ಎಂಬ ಸುಳಿವು ಸಿಕ್ಕಿತು. ಇದರ ಜೊತೆ ಗ್ರಾಮದ ಜನರ ಅಕಾಲಿಕ ಮರಣಕ್ಕೆ ತಡೆ ನೀಡಲು ಮಹಾ ಮೃತ್ಯುಂಜಯ ಯಾಗ ನಡೆಸಲು ಸೂಚಿಸಲಾಗಿತ್ತು. ಅದರಂತೆ ಈ ಸಾವು ನೋವು ತಡೆಯಲು ಕುಂಪಲದಲ್ಲಿ ಮಹಾ ಮೃತ್ಯುಂಜಯ ಹೋಮ ನಡೆಸಲಾಯಿತು.
ದೈವಜ್ಞರ ಮೂಲಕ ನಡೆದ ಪ್ರಶ್ನಾಚಿಂತನೆಯಲ್ಲಿ ಕುಂಪಲ ಗ್ರಾಮದ ಪೂರ್ವ ದಿಕ್ಕಿನಲ್ಲಿ ದೈವ ಸಾನಿಧ್ಯ ಇರುವ ಬಗ್ಗೆ ಸುಳಿವು ಸಿಕ್ಕಿತ್ತು. ಆದರೆ, ಈ ದೈವದ ಗುಡಿ ಪಾಳು ಬಿದ್ದು ದೈವಕ್ಕೆ ಕಾಲಾದಿಯಲ್ಲಿ ನಡೆಯುವ ಪೂಜೆ, ಪುನಸ್ಕಾರಗಳು ನಿಂತಿರುವ ಬಗ್ಗೆ ಗೋಚರವಾಗಿದೆ. ಹೀಗಾಗಿ ದೈವ ಅಸಮಾಧಾನಗೊಂಡು ತನ್ನ ರೂಪವನ್ನು ಋಣಾತ್ಮಕವಾಗಿ ತೋರಿಸುತ್ತಿದೆ ಎಂದು ತಿಳಿದುಬಂದಿದೆ. ಈ ದೈವಸ್ಥಾನ ಬೆಳಗುವ ಮೊದಲು ಗ್ರಾಮದಲ್ಲಿ ಮಹಾ ಮೃತ್ಯುಂಜಯ ಯಾಗ ನಡೆಸುವಂತೆ ಪ್ರಶ್ನೆಯಲ್ಲಿ ಕಂಡುಬಂದಿತ್ತು.
ಮೃತ್ಯು ಭಯವನ್ನು ಶಮನಗೊಳಿಸಲು ಮಹಾ ಮೃತ್ಯುಂಜಯ ಯಾಗ ಮಾಡಲಾಗುತ್ತದೆ. ಇದೀಗ ಕುಂಪಲ ಗ್ರಾಮದಲ್ಲಿಯು ಈ ಯಾಗ ನಡೆಸಲಾಗಿದ್ದು ಸಕರಾತ್ಮಕ ವಾತಾವರಣ ಸೃಷ್ಟಿಯಾಗಿದೆ ಎಂದು ಅಲ್ಲಿನವರು ಹೇಳುತ್ತಾರೆ. ಮುಂದಿನ ದಿನಗಳಲ್ಲಾದರೂ ಕುಂಪಲ ಗ್ರಾಮದಲ್ಲಿ ದುರಿತಗಳು ನಿವಾರಣೆಯಾಗಿ ಮನೆ ಮನೆಯಲ್ಲಿ ನೆಮ್ಮದಿ ನೆಲೆಯೂರತ್ತದೆಯೇ ಎಂಬುದನ್ನು ಕಾದುನೋಡಬೇಕಾಗಿದೆ.
Comments are closed.