Mangaluru : ಬಾವಿಯಲ್ಲಿ ಪತ್ತೆಯಾದ ಆಟೋ ಚಾಲಕ ಶರೀಫ್‌ ಸಾವು ಕೊಲೆ – ಮರಣೋತ್ತರ ವರದಿಯಲ್ಲಿ ಸ್ಪೋಟಕ ಸತ್ಯ ಬಹಿರಂಗ, ಇಬ್ಬರು ಅರೆಸ್ಟ್

ಮಂಜೇಶ್ವರ ಕುಂಜತ್ತೂರು ಬಳಿ ನಿರ್ಜನ ಪ್ರದೇಶದ ಬಾವಿಯಲ್ಲಿ ಪತ್ತೆಯಾದ ಮಂಗಳೂರಿನ ಆಟೋ ಚಾಲಕ ಮೊಹಮ್ಮದ್ ಷರೀಪ್ ಅವರ ಸಾವು ಕೊಲೆ ಎಂದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ತಿಳಿದು ಬಂದಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಕುಂಜತ್ತೂರು ಬಳಿಯ ಅಡ್ಕಪ್ಪಳ್ಳ ಮಾನಿಗುಡ್ಡೆಯಲ್ಲಿ ಆವರಣ ಗೋಡೆಯಿಲ್ಲದ ಬಾವಿಯಲ್ಲಿ ಮಂಗಳೂರಿನ ಮೂಲ್ಕಿ ಕೊಲಾ°ಡು ನಿವಾಸಿ, ಮಂಗಳೂರಿನಲ್ಲಿ ಆಟೋ ಚಾಲಕರಾಗಿ ದುಡಿಯುತ್ತಿದ್ದ ಮೊಹಮ್ಮದ್‌ ಶರೀಫ್‌ (52) ಅವರ ಮೃತ ದೇಹ ಪತ್ತೆಯಾಗಿತ್ತು. ಬಾವಿಯ ಬಳಿ ರಕ್ತ ಮಿಶ್ರಿತ ಬಟ್ಟೆಗಳು, ಪಾದರಕ್ಷೆ, ಪರ್ಸ್‌ ಪತ್ತೆಯಾಗಿತ್ತು. ಸ್ಥಳೀಯರು ನೀಡಿದ ಮಾಹಿತಿಯಂತೆ ಮಂಜೇಶ್ವರ ಪೊಲೀಸರು ಸ್ಥಳಕ್ಕೆ ತಲುಪಿ ಪರ್ಸ್‌ ತೆರೆದು ನೋಡಿದಾಗ ಮೃತಪಟ್ಟ ವ್ಯಕ್ತಿಯ ಭಾವಚಿತ್ರ ಹಾಗೂ ದಾಖಲೆ ಪತ್ರಗಳು ಕಂಡು ಬಂದಿವೆ. ಈ ಬಗ್ಗೆ ಮಂಜೇಶ್ವರ ಪೊಲೀಸರು ಮೂಲ್ಕಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ವೇಳೆ ಮೊಹಮ್ಮದ್‌ ಶರೀಫ್‌ ನಾಪತ್ತೆಯಾದ ಬಗ್ಗೆ ಕೇಸು ದಾಖಲಾಗಿರುವ ವಿಷಯ ತಿಳಿದು ಬಂದಿದೆ. ವಿಷಯ ತಿಳಿದು ಸಂಬಂಧಿಕರು ಸ್ಥಳಕ್ಕೆ ತಲುಪಿ ಆಟೋ ರಿಕ್ಷಾ ನಾಪತ್ತೆಯಾದ ವ್ಯಕ್ತಿಯದ್ದೆಂದು ದೃಢೀಕರಿಸಿದ್ದಾರೆ.

ಎಪ್ರಿಲ್ 11ರಂದು ಬೆಳಗ್ಗೆ ಬಾವಿಯಿಂದ ಮೇಲಕ್ಕೆತ್ತಿದ ಮೃತದೇಹದಲ್ಲಿ ಇರಿತದಿಂದ ಉಂಟಾದ ಗಾಯಗಳು ಕಂಡು ಬಂದಿತ್ತು. ಬಳಿಕ ಪರಿಯಾರಂ ಮೆಡಿಕಲ್‌ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಸಂಬಂಧಿಕರಿಗೆ ಬಿಟ್ಟುಕೊಡಲಾಯಿತು. ಪರಿಯಾರಂ ಮೆಡಿಕಲ್‌ ಕಾಲೇಜು ಆಸ್ಪತ್ರೆಯಲ್ಲಿ ನಡೆದ ಮೃತದೇಹದ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕೊಲೆ ಕೃತ್ಯವಾಗಿದೆಯೆಂದು ದೃಢೀಕರಿಸಲಾಗಿದೆ. ಕುತ್ತಿಗೆ ಹಾಗೂ ತಲೆಯ ಹಿಂಭಾಗದಲ್ಲಿ ಉಂಟಾದ ಇರಿತದ ಗಾಯವೇ ಸಾವಿಗೆ ಕಾರಣವೆಂದು ತಿಳಿದು ಬಂದಿದೆ.

ಇದೀಗ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಮಂಜೇಶ್ವರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪೊಲೀಸರು ವಶಕ್ಕೆ ಪಡೆದಿರುವ ಇಬ್ಬರು ಕೂಡಾ ಮಂಗಳೂರು ನಿವಾಸಿಗಳು ಎಂದು ತಿಳಿದುಬಂದಿದೆ.

Comments are closed.