Dharmasthala Case: ತಿಮರೋಡಿ, ಸಮೀರ್, ಗಿರೀಶ್ ಮಟ್ಟಣ್ಣನವರ್ ತನಿಖೆ ನಡೆಸಿ; ಸರ್ಕಾರಕ್ಕೆ ಸ್ನೇಹಮಯಿ ಕೃಷ್ಣ ಪತ್ರ

Dharmasthala Case: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ಆರೋಪಿಸಲಾದ ಪ್ರಕರಣಕ್ಕೆ (Dharmasthala Case) ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ (SP) ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ, ಈ ಗಂಭೀರ ಆರೋಪದ ಸತ್ಯಾಸತ್ಯತೆಯನ್ನು ತನಿಖೆಯ ಮೂಲಕ ತಿಳಿಯಲು ಮತ್ತು ಸಾರ್ವಜನಿಕರಿಗೆ ಸ್ಪಷ್ಟ ಮಾಹಿತಿ ನೀಡಲು ಒತ್ತಾಯಿಸಲಾಗಿದೆ. ಅಲ್ಲದೇ ಈ ಬಗ್ಗೆ ಆರೋಪ ಮಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ, ಯೂಟ್ಯೂಬರ್ ಸಮೀರ್ ಎಮ್ಡಿ ಮತ್ತು ಗಿರೀಶ್ ಮಟ್ಟಣ್ಣನವರ್ ಅವರನ್ನೇ ತನಿಖೆ ನಡೆಸಿ ಎಂದು ಆಗ್ರಹಿಸಿದ್ದಾರೆ.

ಧರ್ಮಸ್ಥಳ ಗ್ರಾಮದಲ್ಲಿ 100ಕ್ಕೂ ಹೆಚ್ಚು ಮೃತದೇಹಗಳನ್ನು ತಾನು ಹೂತು ಹಾಕಿದ್ದೇನೆ ಎಂದು ಅನಾಮಧೇಯ ವ್ಯಕ್ತಿಯೊಬ್ಬರು ಆರೋಪಿಸಿರುವುದು ರಾಜ್ಯದಾದ್ಯಂತ ಭಾರೀ ಸಂಚಲನ ಸೃಷ್ಟಿಸಿದೆ. ಇನ್ನು ಅನಾಮಧೇಯ ವ್ಯಕ್ತಿ ಜೊತೆಗೆ ಸಮೀರ್, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಎಂಬ ವ್ಯಕ್ತಿಗಳು ಕೂಡಾ ಇದನ್ನು ಆರೋಪಿಸಿದ್ದಾರೆ. ಈ ವ್ಯಕ್ತಿಗಳು ಸಮಾಜದಲ್ಲಿ ಅಶಾಂತಿ ಉಂಟುಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಸ್ನೇಹಮಯಿ ಕೃಷ್ಣ, ಈ ಪ್ರಕರಣದ ತನಿಖೆಯನ್ನು ಶೀಘ್ರಗತಿಯಲ್ಲಿ ನಡೆಸಿ, ಸಾಕ್ಷಿಗಳನ್ನು ಸಂಗ್ರಹಿಸಿ, ಸತ್ಯಾಸತ್ಯತೆಯನ್ನು ಜನರಿಗೆ ಬಹಿರಂಗಪಡಿಸುವಂತೆ ಒತ್ತಾಯಿಸಿದ್ದಾರೆ.
Comments are closed.