ಕುಜ ದೋಷ ಮಾಡಿದ ಕೊಲೆ

6 ವರ್ಷದಿಂದ ಪ್ರೀತಿಸುತ್ತಿದ್ದ ಪ್ರೇಮಿಗಳು ಜ್ಯೋತಿಷಿ ಹೇಳಿದ ಒಂದು ಮಾತಿನಿಂದ ಆತ್ಮಹತ್ಯೆ ಗೆ ಯತ್ನಿಸಿ ಈಗ ಮಹಿಳೆ ಮೃತಪಟ್ಟರೆ, ಯುವಕ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ.

ಮದುವೆಯಾಗಲು ಕುಜ ದೋಷ ಅಡ್ಡಿಯಾಗಿದ್ದರಿಂದ ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ್ದು, ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಮೃತಪಟ್ಟರೆ, ಪ್ರಿಯಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಭದ್ರಾವತಿ ತಾಲೂಕಿನ ಕಲ್ಲಾಪುರ ನಿವಾಸಿ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಸುಧಾ ಹಾಗೂ ಭದ್ರಾವತಿ ಅರಣ್ಯ ಇಲಾಖೆ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬೆಳಗಾವಿ ಮೂಲದ ಪ್ರವೀಣ್ ಆತ್ಮಹತ್ಯೆಗೆ ಯತ್ನಿಸಿದ್ದು, ಸುಧಾ ಚಿಕಿತ್ಸೆ ಫಲಕಾರಿಯದೇ ಮೃತಪಟ್ಟಿದ್ದಾರೆ.

ಇಬ್ಬರು 6 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಪ್ರೀತಿಗೆ ಹೆತ್ತವರ ವಿರೋಧವಿತ್ತು. ಆರಂಭದಲ್ಲಿ ಇವರಿಬ್ಬರ ಪ್ರೀತಿಗೆ ಜಾತಿ ಅಡ್ಡಿಯಾಗಿತ್ತು. ಜಾತಿ ಅಡ್ಡಿಯ ನಡುವೆಯೂ ಇಬ್ಬರು ಮದುವೆಗೆ ಸಿದ್ಧರಾಗಿದ್ದರು. ಆದರೆ ಪ್ರವೀಣ್ ತಾಯಿ ಯುವತಿಯ ಜಾತಕವನ್ನು ಜ್ಯೋತಿಷಿಯೊಬ್ಬರಿಗೆ ತೋರಿಸಿದ್ದರು.

ಜ್ಯೋತಿಷಿ ಈ ಯುವತಿಗೆ ಕುಜ ದೋಷ ಇದೆ. ಈಕೆಯೊಂದಿಗೆ ವಿವಾಹವಾದರೆ ನಿಮ್ಮ ಮಗನ ಆಯಸ್ಸು ಕಡಿಮೆ ಎಂದಿದ್ದಾರೆ ಎನ್ನಲಾಗಿದೆ. ಹುಡುಗಿ ಜೊತೆ ಮದುವೆ ಮಾಡಲು ಸಾಧ್ಯವಿಲ್ಲ ಎಂದು ಪ್ರವೀಣ್ ತಾಯಿ ಪಟ್ಟು ಹಿಡಿದಿದ್ದಾರೆ.

ಯುವತಿ ಸುಧಾಳಿಗೂ ಫೋನ್ ಮಾಡಿ ನನ್ನ ಮಗನ ಸಹವಾಸ ಬಿಟ್ಟು ಬಿಡು. ಈ ಮದುವೆ ಮಾಡಲು ಸಾಧ್ಯವಿಲ್ಲ ಎಂದು ಹಾಕಿದ್ದಾರೆ. ಇದರಿಂದ ನೊಂದ ಪ್ರೇಮಿಗಳು ಮೇ 31ರಂದು ಭದ್ರಾವತಿಯ ಎಪಿಎಂಸಿ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.

ಇಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಯುವತಿ ಸುಧಾಳನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್‌ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮಧ್ಯ ರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Leave A Reply

Your email address will not be published.