Mahesh Joshi: ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ಬಿಗ್ ಶಾಕ್ – ಸಚಿವ ಸ್ಥಾನಮಾನ ಸೇರಿ, ಎಲ್ಲಾ ಸೌಲಭ್ಯ ಹಿಂಪಡೆದ ರಾಜ್ಯ ಸರ್ಕಾರ

Mahesh Joshi: ಕರ್ನಾಟಕ ಸರ್ಕಾರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ (Dr. Mahesh joshi) ಅವರಿಗೆ ಊಹಿಸಲಾಗದ ಶಾಕ್ ನೀಡಿದ್ದು, ಮಹೇಶ್ ಜೋಶಿ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಾಗೂ ರಾಜ್ಯ ಸಚಿವರ ದರ್ಜೆಗೆ ಅನ್ವಯಿಸುವ ಎಲ್ಲಾ ಸೌಲಭ್ಯಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆದಿದೆ.

ಹೌದು, ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ-2 ಬಾಣದರಂಗಯ್ಯ ಎನ್.ಆರ್. ಆದೇಶ ಹೊರಡಿಸಿದ್ದಾರೆ. ಅಂದಹಾಗೆ ಮಹೇಶ್ ಜೋಶಿ ಅವರ ಕಾರ್ಯವೈಖರಿಗೆ ಆಕ್ಷೇಪ ವ್ಯಕ್ತಪಡಿಸಿ ಕೆಲ ಸಾಹಿತಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಅಧಿಕಾರ ದುರುಪಯೋಗ, ಭ್ರಷ್ಟಾಚಾರ, ಬೈಲಾ ತಿದ್ದುಪಡಿಯಂತಹ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಅಧ್ಯಕ್ಷ ಮಹೇಶ್ ಜೋಶಿ ಅವರ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್ ಪ್ರೇಮಿಗಳು ಹಾಗೂ ಜನಪರ ಸಂಘಟನೆಗಳ ವೇದಿಕೆ ಸದಸ್ಯರು ಇತ್ತೀಚೆಗೆ ಪ್ರತಿಭಟನೆ ನಡೆಸಿದ್ದರು.
ಕನ್ನಡ ಸಾಹಿತ್ಯ ಪರಿಷತ್, ನಾಡು, ನುಡಿ, ಸಂಸ್ಕೃತಿ ಉಳಿಸಲು ಕೆಲಸ ಮಾಡಬೇಕು. ಅಧಿಕಾರದಲ್ಲಿರುವ ಮಹೇಶ್ ಜೋಶಿ ಸರ್ವಾಧಿಕಾರಿ ಧೋರಣೆ, ದಬ್ಬಾಳಿಕೆ ಮೂಲಕ ಆಡಳಿತ ನಡೆಸುತ್ತಿದ್ದಾರೆ. ಪರಿಷತ್ತಿನಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿದ್ದಾರೆ. ಸರ್ವಾಧಿಕಾರಿ ಧೋರಣೆ ಹೊಂದಿರುವ ಮಹೇಶ್ ಜೋಶಿ ಅವರನ್ನು ಸರ್ಕಾರ ಕೂಡಲೇ ಅಧಿಕಾರದಿಂದ ಕೆಳಗಿಳಿಸಬೇಕು. ಸೂಕ್ತ ತನಿಖೆ ಕೈಗೊಂಡು, ಅವರಿಗೆ ನೀಡಿರುವ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಹಿಂಪಡೆಯಬೇಕು ಎಂದು ಕೆಲ ಸಾಹಿತಿಗಳು ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ ಸರ್ಕಾರ ಈ ಕ್ರಮ ಕೈಗೊಂಡಿದೆ.
ರಾಜ್ಯಪಾಲರ ಆದೇಶದಲ್ಲೇನಿದೆ?
ನಾಡೋಜ ಡಾ: ಮಹೇಶ್ ಜೋಶಿ, ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು. ಇವರಿಗೆ ಸರ್ಕಾರದ ಅಧಿಸೂಚನೆ ಸಂಖ್ಯೆ: ಸಿಆಸುಇ 49 ಶಿಸನೇ 2022 ದಿನಾಂಕ: 03.08.2022 ಹಾಗೂ ಸಿಆಸುಇ 01 ಶಿಸನೇ 2023 ದಿನಾಂಕ: 05.01.2023 ರಲ್ಲಿ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಾಗೂ ರಾಜ್ಯ ಸಚಿವರ ದರ್ಜೆಗೆ ಅನ್ವಯಿಸುವ ಎಲ್ಲಾ ಸೌಲಭ್ಯಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಉಲ್ಲೇಖಿಸಲಾಗಿದೆ.
ಈ ಬಗ್ಗೆ ಡಾ. ಮಹೇಶ್ ಜೋಶಿ ಅವರು ಪ್ರತಿಕ್ರಿಯಿಸಿ, ತಮಗೆ ನೀಡಿರುವ ರಾಜ್ಯ ಸಚಿವ ಸ್ಥಾನಮಾನ ಹಿಂಪಡೆದಿರುವುದರ ಹಿಂದೆ ಪಟ್ಟಭದ್ರ ಹಿತಾಸಕ್ತಿಗಳ ಕೈವಾಡವಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಈ ಬಗ್ಗೆ ನಾನು ಇತ್ತೀಚೆಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೆ. ಇದು ನನಗೋಸ್ಕರ ಮಾಡಿರುವ ವ್ಯವಸ್ಥೆ ಅಲ್ಲ, 1994ರಲ್ಲಿ 63ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಆಗಿನ ಮುಖ್ಯಮಂತ್ರಿಗಳು ಕಸಾಪ ಅಧ್ಯಕ್ಷರು ಹಾಗೂ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳದ ಅಧ್ಯಕ್ಷರಿಗೆ ಶಿಷ್ಟಾಚಾರದ ಎಲ್ಲಾ ಸೌಲಭ್ಯ ಕಲ್ಪಿಸುತ್ತೇವೆ ಎಂದು ಹೇಳಿದ್ದರು. ಅದರಂತೆ ಸರ್ಕಾರ ಆದೇಶ ಮಾಡಿತ್ತು. ಅದರಲ್ಲಿ ಲಭ್ಯತೆಗೆ ಒಳಪಟ್ಟು ಶಿಷ್ಟಾಚಾರ ಸೌಲಭ್ಯ ಕಲ್ಪಿಸಲು ಸೂಚಿಸಲಾಗಿತ್ತು. ಆದರೆ, ʼಲಭ್ಯತೆಗೆ ಒಳಪಟ್ಟುʼ ಎಂಬ ಶಬ್ದ ಖಂಡಿಸಿ ಹರಿಕೃಷ್ಣ ಪುನರೂರು ಅವರು ಅಧ್ಯಕ್ಷರಾಗಿದ್ದಾಗ ಅನಂತಮೂರ್ತಿ ನೇತೃತ್ವದ ನಿಯೋಗ ತೆರಳಿ ಸಿಎಂ ಗಮನಕ್ಕೆ ತಂದಿದ್ದರು. ಆಗ ಸಿಎಂ ಅವರು ಇದು ಅಧಿಕಾರಿಗಳು ಬಳಸಿರುವ ಶಬ್ದ ಎಂದು ಖಂಡಿಸಿ, ಸರ್ಕಾರ ಕನ್ನಡದ ಧ್ವನಿಯಾಗಿ ಕಸಾಪ ಅಧ್ಯಕ್ಷರಿಗೆ ಎಲ್ಲ ಸೌಲಭ್ಯ ನೀಡಲಾಗುತ್ತದೆ ಎಂದು ಹೇಳಿದ್ದರು. ಹೀಗಾಗಿ ಈ ಹಿಂದಿನಿಂದಲೇ ನಮಗೆ ಶಿಷ್ಟಾಚಾರ ಸೌಲಭ್ಯ ಸಿಗುತ್ತಿತ್ತು. ಆದರೆ, ಕೆಲವರು ದುರುದ್ದೇಶಪೂರಿತವಾಗಿ ತಮ್ಮ ವಿರುದ್ಧ ಅಪಪ್ರಚಾರ ಮಾಡಿದ್ದಾರೆ. ಮುಖ್ಯಮಂತ್ರಿಗಳಿಗೆ ದಾಖಲೆ ಸಹಿತವಾದ ಪತ್ರವನ್ನು ಬರೆದು ವಾಸ್ತವಾಂಶಗಳನ್ನು ತೆರೆದಿಡಲಾಗಿದೆ ಎಂದು ತಿಳಿಸಿದ್ದಾರೆ.
Comments are closed.