Bengaluru: ರಾಜ್ಯಾದ್ಯಂತ ಆರೋಗ್ಯ ಸೇವೆ ಮನೆ ಬಾಗಿಲಿಗೆ: 14 ಅಸಾಂಕ್ರಾಮಿಕ ರೋಗಗಳ ಉಚಿತ ತಪಾಸಣೆ ಮತ್ತು ಔಷಧ ವಿತರಣೆ: ದಿನೇಶ್‌ ಗುಂಡೂರಾವ್‌

Share the Article

Bengaluru: ರಾಜ್ಯಾದ್ಯಂತ ಅಸಾಂಕ್ರಾಮಿಕ ರೋಗಗಳು ಜನರ ಜೀವಕ್ಕೆ ಅಪಾಯ ತಂದೊಡ್ಡಿವೆ. ಖಾಸಗಿ ಆರೋಗ್ಯ ವಯಲದಲ್ಲಿ ಚಿಕಿತ್ಸೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಆದರೆ ಅಸಾಂಕ್ರಾಮಿಕ ರೋಗಗಳನ್ನು ಮುಂಚಿತವಾಗಿಯೇ ತಡೆಗಟ್ಟುವುದು ಮುಖ್ಯ. ಆರೋಗ್ಯ ಇಲಾಖೆಯಿಂದ ಅಸಾಂಕ್ರಾಮಿಕ ರೋಗಗಳನ್ನ ತಡೆಗಟ್ಟುವತ್ತ ಗೃಹ ಆರೋಗ್ಯ ಯೋಜನೆಯನ್ನ ರಾಜ್ಯಾದ್ಯಂತ ವಿಸ್ತರಿಸಲಾಗುತ್ತಿದೆ. ಎಲ್ಲ ಮನೆಗಳಲ್ಲಿ 30 ವರ್ಷ ಮೇಲ್ಪಟ್ಟವರನ್ನ ತಪಾಸಣೆಗೆ ಒಳಪಡಿಸಿ, ಸೂಕ್ತ ಔಷಧಗಳನ್ನ ಅವರ ಬಳಿಗೆ ತಲುಪಿಸುವ ಕಾರ್ಯ ಪ್ರಾರಂಭಿಸಲಾಗುತ್ತಿದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ.

ಗೃಹ ಆರೋಗ್ಯ ಯೋಜನೆ ರಾಜ್ಯದಾದ್ಯಂತ ವಿಸ್ತರಣೆಯಾಗುತ್ತಿದ್ದು, ಈ ಯೋಜನೆಯಡಿ 14 ಅಸಾಂಕ್ರಾಮಿಕ ರೋಗಗಳ ತಪಾಸಣೆ ಕೈಗೆತ್ತಿಕೊಳ್ಳಲಾಗಿದೆ. ಅಲ್ಲದೆ 19-29 ವರ್ಷ ವಯಸ್ಸಿನವರಿಗೆ ಆರೋಗ್ಯ ತಪಾಸಣೆಯನ್ನು ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ಉಚಿತವಾಗಿ ನಡೆಸಲಾಗುವುದು. ರೋಗನಿರ್ಣಯವಾದ ನಂತರ, ವ್ಯಕ್ತಿಗಳು ಹತ್ತಿರದ ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ತೆರಳಿ ಆರೋಗ್ಯ ತಪಾಸಣೆ, ನಿರ್ವಹಣೆ ಮತ್ತು ಉಚಿತವಾಗಿ ಅಸಾಂಕ್ರಾಮಿಕ ರೋಗಗಳ ಶಿಷ್ಟಾಚಾರದ ಔಷಧಿಗಳನ್ನು ಪಡೆಯಬಹುದು.

ಪ್ರಮುಖ ಅಸಾಂಕ್ರಾಮಿಕ ರೋಗಗಳಾದ ಮಧುಮೇಹ, ರಕ್ತದೊತ್ತಡ, ಮತ್ತು ಗರ್ಭಕಂಠದ ಕ್ಯಾನ್ಸರ್ ರೋಗಗಳ ತಪಾಸಣೆ ಮತ್ತು ನಿರ್ವಹಣೆಯನ್ನು ನಡೆಸಲಾಗುವುದು. ಆಶಾ ಕಾರ್ಯಕರ್ತೆಯರು ಪ್ರತಿ ಮನೆ ಮನೆಗೆ ತೆರಳಿ ಜನರಲ್ಲಿ ಅಸಾಂಕ್ರಾಮಿಕ ರೋಗಗಳ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ಸಮುದಾಯ ಆರೋಗ್ಯಾಧಿಕಾರಿಗಳ ಮೂಲಕ ತಪಾಸಣಾ ಕಾರ್ಯಕ್ಕೆ ನೆರವಾಗಲಿದ್ದಾರೆ.

ಸಮುದಾಯ ಆರೋಗ್ಯ ಅಧಿಕಾರಿಗಳು ತಪಾಸಣೆ ನಡೆಸಿ NCD ಪೊರ್ಟಲ್‌ನಲ್ಲಿ ಡೇಟಾ ನಮೂದಿಸಲಿದ್ದು, ರಕ್ತದೊತ್ತಡ, ಡಯಾಬಿಟಿಸ್ ಹೊಂದಿದವರಿಗೆ ಸ್ಥಳದಲ್ಲೇ ಔಷಧಿಗಳನ್ನ ಉಚಿತವಾಗಿ ಒದಗಿಸುವ ವ್ಯವಸ್ಥೆಯನ್ನ ಗೃಹ ಆರೋಗ್ಯ ಯೋಜನೆಯಲ್ಲಿ ಕಲ್ಪಿಸಲಾಗಿದೆ.

Comments are closed.