Plastic Ban: ರಾಜ್ಯದ 36,000 ದೇಗುಲಗಳಲ್ಲಿ ಇನ್ನು ಮುಂದೆ ಪ್ಲಾಸ್ಟಿಕ್ ಬಳಕೆ ನಿಷೇಧ – ಮುಜರಾಯಿ ಇಲಾಖೆ ಮಹತ್ವದ ಹೆಜ್ಜೆ

Share the Article

Plastic Ban: ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದ ಒಟ್ಟು 36 ಸಾವಿರ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿ ಮಾಡಲು ಅಭಿಯಾನವನ್ನು ಪ್ರಾರಂಭಿಸಲಾಗಿದೆ.

ರಾಜ್ಯದ ಎಲ್ಲ ದೇವಾಲಯ ಇನ್ನು ಮುಂದೆ ಪ್ರಸಾದ ವಿತರಣೆಗೆ ಅಥವಾ ಯಾವುದೇ ಉದ್ದೇಶಕ್ಕಾಗಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವಂತಿಲ್ಲ. ಆ.15 ರಿಂದಲೇ ಪ್ಲಾಸ್ಟಿಕ್ ನಿಷೇಧವನ್ನು ಜಾರಿಗೆ ತರಲಾಗಿದ್ದು, ಆ. 17ರಿಂದ ಅಧಿಕೃತವಾಗಿ ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಧಾರ್ಮಿಕ ದತ್ತಿ ಇಲಾಖೆಯ ನೇತೃತ್ವದಲ್ಲಿ, ಬಸವನಗುಡಿಯ ದೊಡ್ಡಗಣಪತಿ ದೇವಾಲಯದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಸಕ ರವಿ ಸುಬ್ರಮಣ್ಯ ಅವರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ ಅವರು, ದೇವಾಲಯಗಳು ಕೇವಲ ಧಾರ್ಮಿಕ ಕೇಂದ್ರಗಳಲ್ಲ, ಅವುಗಳು ಪರಿಸರ ಸ್ವಚ್ಛತೆಯ ಸಂಕೇತವೂ ಆಗಬೇಕು. ಈ ಅಭಿಯಾನದ ಮೂಲಕ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಪರಿಸರ ಸ್ನೇಹಿ ವಾತಾವರಣ ನಿರ್ಮಿಸುವ ಗುರಿ ಹೊಂದಿ ದ್ದೇವೆ ಎಂದು ತಿಳಿಸಿದರು. ಈ ಕ್ರಮವು ಪರಿಸರ ಸಂರಕ್ಷಣೆಗೆ ದೊಡ್ಡ ಮಟ್ಟದಲ್ಲಿ ಸಹಾಯಕವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಅಭಿಯಾನದ ವಿವರಗಳು:

ಪ್ಲಾಸ್ಟಿಕ್ ಮುಕ್ತ ದೇವಾಲಯಗಳು: ರಾಜ್ಯದ 36,000 ಮುಜರಾಯಿ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಬೌಲ್, ಪ್ಲಾಸ್ಟಿಕ್ ತಟ್ಟೆ ಮತ್ತು ಪ್ಲಾಸ್ಟಿಕ್ ಬ್ಯಾಗ್‌ಗಳಂತಹ ವಸ್ತುಗಳ ಬಳಕೆ ಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಪ್ರಸಾದ ವಿತರಣೆಯಲ್ಲಿ ಬದಲಾವಣೆ: ಇನ್ಮುಂದೆ ಪ್ರಸಾದವನ್ನು ಪ್ಲಾಸ್ಟಿಕ್ ತಟ್ಟೆ ಅಥವಾ ಲೋಟದಲ್ಲಿ ನೀಡುವಂತಿಲ್ಲ. ದೇವಾಲಯಗಳು ಪರ್ಯಾಯ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಬೇಕಿದೆ.

ಪರಿಸರ ಜಾಗೃತಿ: ‘ಪರಿಸರ ಉಳಿಸಿ, ಪರಿಸರ ಬೆಳೆಸಿ’ ಎಂಬ ಧೈಯ ವಾಕ್ಯದೊಂದಿಗೆ ಈ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ದೇವಾಲಯಕ್ಕೆ ಭೇಟಿ ನೀಡುವ ಭಕ್ತಾದಿಗಳಲ್ಲಿ ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಪ್ರಯತ್ನಿಸಲಾಗುವುದು.

ಕಟ್ಟುನಿಟ್ಟಿನ ಕ್ರಮ: ಒಂದು ವೇಳೆ, ಯಾವುದೇ ದೇವಾಲಯದಲ್ಲಿ ಈ ನಿಯಮವನ್ನು ಉಲ್ಲಂಘಿಸಿ ಪ್ಲಾಸ್ಟಿಕ್ ವಸ್ತುಗಳು ಕಂಡುಬಂದರೆ, ಆಯಾ ದೇವಾಲಯದ ಆಡಳಿತ ಮಂಡಳಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.

Heart attack: ಹೃದಯಾಘಾತ ಪ್ರಕರಣ ಪರಿಷತ್‌ನಲ್ಲಿ ಚರ್ಚೆ – ಎಲ್ಲಾ ಜಿಲ್ಲೆಗಳಲ್ಲಿ ಕ್ಯಾತಲ್ಯಾಬ್ ವ್ಯವಸ್ಥೆ ಮಾಡಿ – ಆರೋಗ್ಯ ಸಚಿವರಿಗೆ ಮನವಿ

Comments are closed.