Karnataka Gvt: ನೇರ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ – 80 ಸಾವಿರ ಹುದ್ದೆಗಳ ಭರ್ತಿಗೆ ಅಧಿಸೂಚನೆ

Share the Article

Karnataka Gvt: ರಾಜ್ಯದಲ್ಲಿ ಉದ್ಯೋಗ ಆಕಾಂಕ್ಷಿಗಳಿಗೆ ಸರ್ಕಾರವು ಸಿಹಿ ಸುದ್ದಿಯನ್ನು ನೀಡಿದ್ದು ನೇರ ನೇಮಕಾತಿಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ನೇರ ನೇಮಕಾತಿಗೆ ತಡೆ ಹಿಡಿಯಲಾಗಿತ್ತು. ಇದೀಗ ಒಳ ಮೀಸಲಾತಿ ಜಾರಿಯಾದ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ.

ಹೌದು, ರಾಜ್ಯ ಸರ್ಕಾರವು ಒಳ ಮೀಸಲಾತಿ ಅಳವಡಿಸಿಕೊಂಡು ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ.

ಆಯೋಗ ನೀಡಿದ್ದ ವರದಿಯನ್ನು ಕೆಲವು ಬದಲಾವಣೆ ಮಾಡಿಕೊಂಡು ಅಂಗೀಕರಿಸಿದ ಸರ್ಕಾರ, ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿಗಳಿಗೆ ಲಭ್ಯವಿದ್ದ ಶೇ 17 ಮೀಸಲಾತಿಯನ್ನು ಪ್ರವರ್ಗವಾರು ವಿಂಗಡಿಸಿ ಹಂಚಿಕೆ ಮಾಡಿದೆ. ಅಲ್ಲದೆ, ಒಳ ಮೀಸಲಾತಿ ನಿಗದಿಪಡಿಸಿ ‘ಪರಿಷ್ಕೃತ ಮೀಸಲಾತಿ ರೋಸ್ಟರ್‌’ ಅನ್ನು ಈಗಾಗಲೇ ಪ್ರಕಟಿಸಿದೆ. ‘ಒಳ ಮೀಸಲಾತಿ ಜಾರಿಗೆ ಬಂದಿರುವುದರಿಂದ ಎಲ್ಲ ಇಲಾಖೆಗಳು ಮತ್ತು ನೇಮಕಾತಿ ಪ್ರಾಧಿಕಾರಗಳು ನೇರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಬಹುದು’ ಎಂದು ಆದೇಶದಲ್ಲಿ ಡಿಪಿಎಆರ್‌ ಕಾರ್ಯದರ್ಶಿ ಕೆ.ಜಿ. ಜಗದೀಶ್‌ ತಿಳಿಸಿದ್ದಾರೆ.

ಇದನ್ನೂ ಓದಿ:Karnataka Ratna: ಇದುವರೆಗೆ “ಕರ್ನಾಟಕ ರತ್ನ ಪ್ರಶಸ್ತಿ” ಯಾರಿಗೆಲ್ಲ ದೊರಕಿದೆ ?

80 ಸಾವಿರ ಹುದ್ದೆ :

ನೇರ ನೇಮಕಾತಿಗೆ ಹೊಸದಾಗಿ ಅಧಿಸೂಚನೆ ಹೊರಡಿಸಲು ಮತ್ತು ಕಾಲಮಿತಿಯಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೂಚನೆ ನೀಡಿ ಸುತ್ತೋಲೆ ಹೊರಡಿಸಿದೆ. ಕೃಷಿ, ಪಶು ಸಂಗೋಪನೆ, ಶಿಕ್ಷಣ, ಪೊಲೀಸ್, ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳ ಸುಮಾರು 80,000ಕ್ಕೂ ಅಧಿಕ ಹುದ್ದೆಗಳ ಭರ್ತಿಗೆ ಸಂಬಂಧಿತ ನೇಮಕಾತಿ ಪ್ರಾಧಿಕಾರಗಳಿಂದ ಸರಣಿ ಅಧಿಸೂಚನೆಗಳು ಶೀಘ್ರವೇ ಹೊರಬೀಳಲಿವೆ. ಈ ಮೂಲಕ ವರ್ಷಗಳಿಂದ ಸ್ಥಗಿತಗೊಂಡಿದ್ದ ನೇಮಕ ಪ್ರಕ್ರಿಯೆ ಶುರುವಾಗಲಿದೆ ಎಂದು ಹೇಳಲಾಗಿದೆ.

Comments are closed.