

ಬೆಂಗಳೂರು: ಹೊಸಕೋಟೆ ದುರಂತ ಮಾಸುವ ಮೊದಲೇ ಬೆಂಗಳೂರಿನ ಹೊರವಲಯದಲ್ಲಿ ಮತ್ತೊಂದು ಭೀಕರ ಅಪಘಾತ ನಡೆದಿದೆ. ಈ ದುರ್ಘಟನೆಯಲ್ಲಿ ಐವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ತುಮಕೂರು ರಸ್ತೆಯ ನವಯುಗ ಟೋಲ್ ಸಮೀಪದ ಜಿಂದಲ್ ಆಸ್ಪತ್ರೆಯ ಫ್ಲೈ ಓವರ್ ಮೇಲೆ ಅಪಘಾತ ನಡೆದಿದೆ.
ನೆಲಮಂಗಲ ಟೋಲ್ ಬಳಿ TATA INDICA ಕಾರ್ ಅಪಘಾತಕ್ಕೊಳಗಾಗಿದ್ದು, ಸಾರಿಗೆ ಬಸ್ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ತುಮಕೂರು ಡಿಪೋಗೆ ಸೇರಿದ್ದ ಸಾರಿಗೆ ಬಸ್ ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೊರಟಿತ್ತು. ಅಪಘಾತದ ನಂತರ ಪ್ರಯಾಣಿಕರನ್ನು ಮತ್ತೊಂದು ಬಸ್ ಮೂಲಕ ಕಳುಹಿಸಿ ಕೊಡಲಾಗಿದೆ. ಬಸ್ ಮುಂಭಾಗದ ಆಸನದಲ್ಲಿ ಕುಳಿತ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ಕಾರಿನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿಯೇ ಶವಗಳು ಅಪ್ಪಚ್ಚಿಯಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮೃತದೇಹಗಳನ್ನು ನೆಲಮಂಗಲ ಸರಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಿ, ಟ್ರಾಫಿಕ್ ಕ್ಲಿಯರ್ ಮಾಡಿದ್ದಾರೆ.













