

ಉಳ್ಳಾಲ: ಖಾಸಗಿ ಶಾಲಾ ಬಸ್ಸಿನ ಹಿಂಬದಿಗೆ ಮೀನು ಸಾಗಾಟದ ಕ್ಯಾಂಟರ್ ಡಿಕ್ಕಿ ಹೊಡೆದ ಘಟನೆಯೊಂದು ರಾ.ಹೆ.66 ರ ಕಾಪಿಕಾಡು ಎನ್ನುವಲ್ಲಿ ಇಂದು ಬೆಳಗ್ಗೆ ನಡೆದಿದೆ. ಭೀಕರ ಅಪಘಾತದಲ್ಲಿ ಏಳು ಮಂದಿ ವಿದ್ಯಾರ್ಥಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಪವಾಡ ಸದೃಶರಾಗಿ ಪಾರಾಗಿದ್ದಾರೆ.
ತಲಪಾಡಿಯ ಶಾರದಾ ನಿಕೇತನ ಪಬ್ಲಿಕ್ ಸ್ಕೂಲ್ & ಕಾಲೇಜಿಗೆ ಸೇರಿರುವ ಬಸ್ಸು ಇದು ಎನ್ನಲಾಗಿದೆ. ಇಂದು ಬೆಳಗ್ಗೆ ಕಾಪಿಕಾಡಿನ ಹೆದ್ದಾರಿ ಅಂಚಿನಲ್ಲಿ ವಿದ್ಯಾರ್ಥಿಗಳನ್ನು ಬಸ್ಸಿಗೆ ಹತ್ತಿಸಿ ತಲಪಾಡಿ ಕಡೆಗೆ ತೆರಳುತ್ತಿದ್ದಾಗ ಹಿಂದಿನಿಂದ ಬಂದ ಮೀನಿನ ಕ್ಯಾಂಟರ್ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನ ಹಿಂಭಾಗದ ಸೀಟುಗಳು ಕಿತ್ತು ಹೋಗಿದೆ.
ಕ್ಯಾಂಟರ್ ಚಾಲಕ ಕುಂದಾಪುರ ಮೂಲದ ಚಾಲಕ ಸಂಜೀವ ಎನ್ನುವವರು ನಿದ್ರೆಯ ಮಂಪರಿನಲ್ಲಿದರು ಎಂದು ವರದಿಯಾಗಿದೆ.
ಗಾಯಗೊಂಡ ವಿದ್ಯಾರ್ಥಿಗಳಿಗೆ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಂಡಿದ್ದಾರೆ. ಮತ್ತೋರ್ವ ವಿದ್ಯಾರ್ಥಿಯ ಕಾಲಿಗೆ ಗಂಭೀರ ಗಾಯವಾಗಿದ್ದು, ಈತನನ್ನು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲು ಮಾಡಲಾಗಿದೆ.
ಸುದ್ದಿ ತಿಳಿದು ವಿದ್ಯಾರ್ಥಿಗಳ ಪೋಷಕರು ಗಾಬರಿಗೊಂಡು ಆಸ್ಪತ್ರೆಯಲ್ಲಿ ಜಮಾಯಿಸಿದ್ದರು. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಘಟನೆಯ ಕುರಿತು ಪರಿಶೀಲನೆ ನಡೆಸಿದ್ದಾರೆ.