

Vidhana Siudha: ವಿಧಾನಸೌಧದ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರವೇಶಕ್ಕೆ ರಾಜ್ಯ ಸರ್ಕಾರ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ ಈ ಬೆನ್ನೆಲು ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಕಿಡಿ ಕಾರಿವೆ.
ಹೌದು, ರಾಜ್ಯದ ಶಕ್ತಿ ಸೌಧ ಎಂದೇ ಕರೆಯಲ್ಪಡುವ ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ. ಇತ್ತೀಚೆಗೆ ವಿಧಾನಸೌಧದಲ್ಲಿ ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ ಪ್ರಕರಣ ನಡೆದಿತ್ತು. ಮಾಧ್ಯಮಗಳ ವರದಿಯಿಂದ ಇದು ಬಹಿರಂಗಗೊಂಡಿತ್ತು. ಇದರ ಬೆನ್ನಲ್ಲೇ ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ. ರಾಜ್ಯ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತವಾಗಿದೆ.
ಈ ಕುರಿತಾಗಿ ಮಾಧ್ಯಮ ಪ್ರತಿನಿಧಿಗಳ ಕಾರ್ಯವ್ಯಾಪ್ತಿಯನ್ನು ನಿರ್ಬಂಧಿಸುವ ಕುರಿತು ವಾರ್ತಾ ಇಲಾಖೆಗೆ ಪತ್ರ ಬರೆದಿರುವ ಸರ್ಕಾರ, ಮಾಧ್ಯಮಗಳು ರಾಜಕೀಯ ನಾಯಕರ ಪ್ರತಿಕ್ರಿಯೆಗಳನ್ನು (ಬೈಟ್) ಪೋರ್ಟಿಕೋ ಅಥವಾ ಕೆಂಗಲ್ ಗೇಟ್ ಬಳಿಯ ನಿಗದಿತ ಸ್ಥಳದಲ್ಲಿ ಮಾತ್ರ ತೆಗೆದುಕೊಳ್ಳಬೇಕು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಅಥವಾ ಶಾಸಕರನ್ನು ವಿಧಾನಸೌಧದ ಇತರ ಯಾವುದೇ ಸ್ಥಳದಲ್ಲಿ ಹಿಂಬಾಲಿಸಿ ಪ್ರತಿಕ್ರಿಯೆ ಪಡೆಯುವುದನ್ನು ನಿಷೇಧಿಸಬೇಕು ಎಂದು ಹೇಳಿದೆ.
ಈ ನಡೆ ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಖಂಡಿಸಿದ್ದಾರೆ. ಮಾಧ್ಯಮಗಳು ಜನರ ಮತ್ತು ಸರ್ಕಾರದ ನಡುವಿನ ಸೇತುವೆಯಾಗಿ ಕಾರ್ಯನಿರ್ವಹಿಸುತ್ತವೆ. ಕಳೆದ ವಾರ ವಿಧಾನಸೌಧದಲ್ಲಿ ನಡೆದ ಭದ್ರತಾ ಲೋಪಗಳನ್ನು (ಚಿನ್ನ ಕಳ್ಳತನದಂತಹ ಘಟನೆಗಳು) ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಲು ನೆಪವಾಗಿ ಬಳಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ
ಇನ್ನೂ ರಾಜ್ಯ ಸರ್ಕಾರದ ಕ್ರಮಕ್ಕೆ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ‘ಎಕ್ಸ್’ ವೇದಿಕೆಯಲ್ಲಿ ಸರಣಿ ಪೋಸ್ಟ್ ಮಾಡಿರುವ ಜೆಡಿಎಸ್, ಇದು ಸರ್ಕಾರದ “ಹೇಡಿತನ ಮತ್ತು ಭ್ರಷ್ಟಾಚಾರದ ಭಯ” ಎಂದು ಬಣ್ಣಿಸಿದೆ