

CS: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲನಿ ರಜನೀಶ್ ಅವರ ವಿರುದ್ಧ ಭಾರಿ ದೊಡ್ಡ ಭ್ರಷ್ಟಾಚಾರ ಆರೋಪವನ್ನು ಕೇಳಿಬಂದಿದೆ. ಅವರ ವಿರುದ್ಧ ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿ ಆಗಿರುವ ಅಧಿಕಾರಿಗೆ ಲಂಚ ಪಡೆದು ಭಡ್ತಿ ನೀಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು ಈ ಸಂಬಂಧ ದೂರುದಾರ ಸ್ನೇಹಮಯಿ ಕೃಷ್ಣ ಮಹತ್ವದ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.
ದೂರುದಾರರ ಆರೋಪದ ಪ್ರಕಾರ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಲಂಚ ಸ್ವೀಕರಿಸಿದ್ದಾರೆ. ಮುಡಾ ಮಾಜಿ ಆಯುಕ್ತ ಹಾಗೂ ಹಾಲಿ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ.ಬಿ. ನಟೇಶ್ ಅವರಿಗೆ ಭಡ್ತಿ ನೀಡುವ ಸಲುವಾಗಿ ಬರೋಬ್ಬರಿ ರೂ.1.60 ಕೋಟಿ ಲಂಚ ಪಡೆಯಲಾಗಿದೆ ಎಂಬುದು ಪ್ರಮುಖ ಆರೋಪವಾಗಿದೆ. ಇದೀಗ ಸರ್ಕಾರದ ಸಿ.ಎಸ್ ವಿರುದ್ಧ ಇಡಿ ಹಾಗೂ ಆದಾಯ ತೆರಿಗೆ ಇಲಾಖೆಗೆ ದೂರು ನೀಡಿದ್ದಾರೆ.
ಮೂಡಾ ಮಾಜಿ ಆಯುಕ್ತ ನಟೇಶ್ ಕಡೆಯವರು ಕೆ. ಎ 41 ಸಿ 6723 ಎಂಬ ಕಾರಿನಲ್ಲಿ 5 ಬ್ಯಾಗ್ ಗಳಲ್ಲಿ ಹಣ ತಂದು ಶಾಲಿನಿ ರಜನೀಶ್ ಕಡೆಯವರಿಗೆ ನೀಡಿದ್ದಾರೆ. ಕೆ. ಎ 41 ಸಿ 6723 ನಂಬರಿನ ಆ ಕಾರು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆಗೆ ಸೇರಿದೆ. ನಟೇಶ್ ಪ್ರಸ್ತುತ ಅಲ್ಲೇ ಕೆಲಸ ಮಾಡುತ್ತಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆರೋಪ ಮಾಡಿದ್ದಾರೆ. ಈ ಸಂಬಂಧ ತನಿಖೆ ನಡೆಸುವಂತೆ ಇಡಿ ಹಾಗೂ ಆದಾಯ ಇಲಾಖೆಗೆ ದೂರು ನೀಡಿದ್ದು, ಈ ಕುರಿತು ಸೂಕ್ತ ತನಿಖೆ ಆಗ್ಬೇಕು ಎಂದು ಆಗ್ರಹಿಸಿದ್ದಾರೆ.
ಇಷ್ಟೇ ಅಲ್ಲದೆ ಈ ಆರೋಪಕ್ಕೆ ಪುಷ್ಠಿ ನೀಡುವಂತೆ ಹಣವನ್ನು ಸಾಗಣೆ ಮಾಡಿದ ಕಾರಿನ ಫೋಟೋ ಹಾಗೂ ಹಣ ವರ್ಗಾವಣೆ ಸಂದರ್ಭದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ವ್ಯಕ್ತಿಗಳ ದೂರವಾಣಿ ಸಂಖ್ಯೆಗಳ ಸಮೇತ ದಾಖಲೆಯನ್ನು ಸ್ನೇಹಮಯಿ ಕೃಷ್ಣ ಬಿಡುಗಡೆ ಮಾಡಿದ್ದಾರೆ. ಈ ಸಂಬಂಧ ಅವರು ಜಾರಿ ನಿರ್ದೇಶನಾಲಯ (ED) ಹಾಗೂ ಆದಾಯ ತೆರಿಗೆ ಇಲಾಖೆಗೆ ಅಧಿಕೃತ ದೂರು ಸಲ್ಲಿಸಿದ್ದಾರೆ.