

ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಸಮೀಪ, ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇತ್ತೀಚೆಗೆ ಮದುವೆಯಾದ ನವ ದಂಪತಿ ಸಾವಿಗೀಡಾಗಿರುವ ಘಟನೆ ನಡೆದಿದೆ. ನಿಂತಿದ್ದ ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಪರಿಣಾಮ ಭೀಕರ ಅಪಘಾತವಾಗಿದೆ. ನವ ದಂಪತಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಕಾರು ನುಜ್ಜುಗುಜ್ಜಾಗಿದೆ.
ಮೃತರನ್ನು ಹಾವೇರಿ ನಗರದ ನಿವಾಸಿಗಳಾದ ಕಾರ್ತಿಕ್ ಹೂಗಾರ (34 ವ) ಮತ್ತು ಅವರ ಪತ್ನಿ ಐಶ್ವರ್ಯ (30 ವ) ಎಂದು ಗುರುತಿಸಲಾಗಿದೆ. ಇವರು ಹುಬ್ಬಳ್ಳಿ ಕಡೆಯಿಂದ ಶಿಗ್ಗಾಂವಿ ಕಡೆಗೆ KA-63 M 0522 ವ್ಯಾಗನಾರ್ ಕಾರಿನಲ್ಲಿ ತೆರಳುತ್ತಿದ್ದು, ಆಗ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ವ್ಯಾಗನಾರ್ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಕಾರು ಈ ಅಪಘಾತದ ತೀವ್ರತೆಯಿಂದ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರ್ತಿಕ್ ಮತ್ತು ಐಶ್ವರ್ಯ ಇಬ್ಬರೂ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.
ಕಾರಿನಲ್ಲಿದ್ದ ಇನ್ನಿಬ್ಬರು ಪ್ರಯಾಣಿಕರಿದ್ದು ಅವರಿಗೆ ಗಂಭೀರ ಗಾಯವಾಗಿದೆ. ಕೂಡಲೇ ಅವರನ್ನು ಕಿಮ್ಸ್ ಆಸ್ಪತ್ರೆ ಹುಬ್ಬಳ್ಳಿಗೆ ದಾಖಲು ಮಾಡಲಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿರುವ ಕುರಿತು ವರದಿಯಾಗಿದೆ.
ಮೃತ ದಂಪತಿ ಫೆ.03,2025 ರಂದು ವಿವಾಹವಾಗಿದ್ದು, ಕೇವಲ 15 ದಿನಗಳಷ್ಟೇ ಆಗಿತ್ತು. ನವ ದಂಪತಿಗಳು ದೇವರ ದರ್ಶನಕ್ಕೆಂದು ನವಲಗುಂದದ ಕಾಮಣ್ಣನಿಗೆ ಪೂಜೆ ಸಲ್ಲಿಸಲು ತೆರಳಿದ್ದ ದಂಪತಿ, ಪೂಜೆ ಮುಗಿಸಿ ವಾಪಾಸ್ಸಾಗುವ ಸಂದರ್ಭ ಈ ಘಟನೆ ನಡೆದಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದರು. ಕಾರಿನೊಳಗೆ ಸಿಲುಕಿದ್ದ ಮೃತದೇಹಗಳನ್ನು ಬಹಳ ಪ್ರಯತ್ನದ ನಂತರ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ.
ತಡಸ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
