ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ 12 ವರ್ಷಗಳ ಹಿಂದೆ ನಡೆದಿದ್ದ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾ.23 ರಂದು ಸುಪ್ರೀಂಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.

2012 ರ ಅಕ್ಟೋಬರ್ನಲ್ಲಿ ನಾಪತ್ತೆಯಾಗಿದ್ದ ಸೌಜನ್ಯ ಮೃತದೇಹ ಮರುದಿನ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ನಂತರ ಸಿಐಡಿ ತನಿಖೆ ನಡೆದು ಬಳಿಕ ಸಿಬಿಐ ತನಿಖೆ ನಡೆದಿತ್ತು. ಈ ಪ್ರಕರಣದಲ್ಲಿ ಕಾರ್ಕಳದ ಸಂತೋಷ್ ರಾವ್ ಎನ್ನುವಾತನನ್ನು ಅತ್ಯಾಚಾರ, ಕೊಲೆ ಆರೋಪದಲ್ಲಿ ಬಂಧನ ಮಾಡಲಾಗಿತ್ತು.
ನಂತರ ಸಾಕ್ಷ್ಯಾಧಾರಗಳ ಕೊರತೆಯಿಂದ ಸಿಬಿಐ ವಿಶೇಷ ನ್ಯಾಯಾಲಯವು ಸಂತೋಷ್ ರಾವ್ನನ್ನು ನಿರ್ದೋಷಿ ಎಂದು ತೀರ್ಪು ನೀಡಿ ಬಿಡುಗಡೆಗೊಳಿಸಿತ್ತು. ಈ ವೇಳೆ ಸಿಬಿಐ ನ್ಯಾಯಾಲಯ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳ ಲೋಪದೋಷಗಳನ್ನು ಎತ್ತಿ ಹಿಡಿದಿತ್ತು. ತನಿಖಾ ತಂಡ ನೈಜ ಅಪರಾಧಿ ಪತ್ತೆ ಹಚ್ಚುವಲ್ಲಿ ತನಿಖಾ ತಂಡ ವಿಫಲವಾಗಿದೆ ಎಂದು ನ್ಯಾಯಾಧೀಶರು ಅಭಿಪ್ರಾಯ ಪಟ್ಟಿದ್ದಾರೆ.
ಈ ಅಂಶದ ಆಧಾರದಲ್ಲಿ ಸೌಜನ್ಯ ತಾಯಿ ಕುಸುಮಾವತಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಕುಸುಮಾವತಿ ಅವರ ಮೇಲ್ಮನವಿ ಅರ್ಜಿ ವಿಚಾರಣೆ ಮಾಡಿದ ಸುಪ್ರೀಂಕೋರ್ಟ್ ಪೀಠ ಕೆಳ ನ್ಯಾಯಾಲಯದ ತೀರ್ಪನ್ನು ಗಮನಿಸಿ ಪ್ರಕರಣದ ತನಿಖೆಯ ವರದಿಯನ್ನು ಸಲ್ಲಿಸುವಂತೆ ಸಿಬಿಐಗೆ ಸೂಚಿಸಿ ನೋಟಿಸ್ ಜಾರಿ ಮಾಡಿದೆ.

