ಮಂಗಳೂರು: ಕಬಕ-ಪುತ್ತೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಲು 2.91 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿ ಯೋಜನೆಗೆ ಮಂಜೂರಾತಿ ದೊರತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಕಬಕ ಪುತ್ತೂರು ನಿಲ್ದಾಣದ ಪ್ಲಾಟ್ಫಾರ್ಮ್ ನಂ.1 ರಲ್ಲಿ 2.91 ಕೋಟಿ ರೂ.ವೆಚ್ಚದಲ್ಲಿ ಬೃಹತ್ ಶೆಲ್ಟರ್ ನಿರ್ಮಾಣಕ್ಕೆ ಮಂಜೂರಾತಿ ದೊರಕಿದೆ. ಈ ನಿಲ್ದಾಣದಲ್ಲಿ ಪ್ರಯಾಣಿಕರ ತಂಗುದಾಣಕ್ಕೆ ಕೇವಲ 531 ಚ.ಮೀಟರ್ ಉದ್ದದ ಶೆಲ್ಟರ್ ಇದ್ದು, ಇದೀಗ ಈ ಯೋಜನೆಯಡಿಯಲ್ಲಿ 3392 ಚ.ಮೀಟರ್ ವಿಸ್ತೀರ್ಣದ ಬೃಹತ್ ಶೆಲ್ಟರ್ ನಿರ್ಮಾಣಕ್ಕೆ ಅನುದಾನ ದೊರಕಿದೆ. ಅದರಂತೆ ಈ ಶೆಲ್ಟರ್ ನಿರ್ಮಾಣಕ್ಕೆ ಸ್ಥಳ ಗುರುತು ಮಾಡುವ ಕೆಲಸ ಮುಗಿದಿದ್ದು, ಕಾಮಗಾರಿ ಆರಂಭಗೊಳ್ಳಲಿದೆ.
ಈ ಕಾಮಗಾರಿ ಪೂರ್ಣಗೊಂಡರೆ ಕಬಕ-ಪುತ್ತೂರು ರೈಲ್ವೇ ಸ್ಟೇಷನ್ನಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಕ್ಯಾ.ಚೌಟ ಹೇಳಿದ್ದಾರೆ. ಪ್ರಯಾಣಿಕರು ಸುಲಭವಾಗಿ ಓಡಾಡಲು ಅನುಕೂಲವಾಗುವ ರೀತಿಯಲ್ಲಿ ಸದ್ಯ ಇರುವ ಮೇಲ್ಸೇತುವೆಗೆ ಫ್ಲಾಟ್ಫಾರ್ಮ್ ನಂ.2 ಮತ್ತು 2 ರ ಬಳಿ ಒಟ್ಟು 2 ಲಿಫ್ಟ್ ವ್ಯವಸ್ಥೆ ಅಳವಡಿಸುವ ಪ್ರಸ್ತಾವನೆ ಇದೆ. ಇದಕ್ಕೆ ಅಂದಾಜು 1.33 ಕೋಟಿ ರೂ. ವೆಚ್ಚ ನಿರೀಕ್ಷಿಸಲಾಗಿದ್ದು, ಪ್ರಸ್ತುತ ಈ ಯೋಜನೆಯು ರೈಲ್ವೆ ಕೇಂದ್ರ ಕಚೇರಿಯಲ್ಲಿ ಪರಿಶೀಲನೆ ಹಂತದಲ್ಲಿದೆ ಎಂದು ಸಂಸದರು ತಿಳಿಸಿರುವ ಕುರಿತು ವರದಿಯಾಗಿದೆ.
ರೈಲು ನಿಲ್ದಾಣದ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡಿರುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ರೈಲ್ವೇ ಸಚಿವರಾದ ಅಶ್ವಿನಿ ವೈಷ್ಣವ್, ವಿ.ಸೋಮಣ್ಣ ಮತ್ತು ರೈಲ್ವೇ ಇಲಾಖೆಗೆ ಪ್ರಯಾಣಿಕರು ಹಾಗೂ ರೈಲ್ವೇ ಬಳಕೆದಾರರ ಸಂಘದ ಪರವಾಗಿ ಸಂಸದರು ಧನ್ಯವಾದ ಸಲ್ಲಿಸಿದ್ದಾರೆ.

