Shabarimale: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ 10ರಿಂದ 50 ವರ್ಷದ ಒಳಗಿನ ಮಹಿಳೆಯರಿಗೆ ಯಾವುದೇ ಕಾರಣಕ್ಕೂ ಪ್ರವೇಶ ನೀಡಬಾರದು ಎಂದು ದೇವಸ್ಥಾನದ ಆಡಳಿತ ಮಂಡಳಿ ಮಹತ್ವದ ನಿರ್ಣಯವನ್ನು ಕೈಗೊಂಡಿತ್ತು. ಇದಕ್ಕೆ ಭಾರೀ ಆಕ್ರೋಶ ಕೂಡ ವ್ಯಕ್ತವಾಗಿತ್ತು. ಇದೀಗ ಈ ಬಗ್ಗೆ ಕೇಂದ್ರ ಸರ್ಕಾರವು ಪ್ರತಿಕ್ರಿಯಿಸಿದ್ದು ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿಚಾರವು ಲಿಂಗ ತಾರತಮ್ಯದ ವಿಷಯವಲ್ಲ; ಅದು ಧಾರ್ಮಿಕ ಸಂಪ್ರದಾಯ ಮತ್ತು ನಂಬಿಕೆಗೆ ಸಂಬಂಧಿಸಿದ್ದು ಎಂದು ಕೇಂದ್ರ ಸರಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.


ಋತುಸ್ರಾವ ಆಗುವ ವಯಸ್ಸಿನ ಮಹಿಳೆಯರಿಗೆ ಕೂಡ ಶಬರಿಮಲೆ ದೇವಸ್ಥಾನ ಪ್ರವೇಶಿಸುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ 2018ರ ಸೆಪ್ಟೆಂಬರ್ನಲ್ಲಿ ತೀರ್ಪು ನೀಡಿತ್ತು. ಸುಪ್ರೀಂ ಕೋರ್ಟ್ನ ತೀರ್ಪನ್ನು ಜಾರಿಗೊಳಿಸುವುದಾಗಿ ಆಡಳಿತಾರೂಢ ಎಲ್ಡಿಎಫ್ ಸರ್ಕಾರ ಹಾಗೂ ಟಿಡಿಬಿ ತಿಳಿಸಿದ್ದವು. ಈ ನಿರ್ಧಾರವು ಬಿಜೆಪಿ ಮತ್ತು ಸಂಘ ಪರಿವಾರದ ಸಂಘಟನೆಗಳ ಹಿಂಸಾತ್ಮಕ ಪ್ರತಿಭಟನೆಗೂ ಕಾರಣವಾಗಿತ್ತು. 10 ರಿಂದ 50 ವರ್ಷದ ಒಳಗಿನ ಮಹಿಳೆಯರ ಪ್ರವೇಶ ನಿಷೇಧವನ್ನು ಮುಂದುವರಿಸಬೇಕು ಎಂದು ದೇವಸ್ಥಾನದ ಆಡಳಿತ ಮಂಡಳಿ ಮಹತ್ವದ ನಿರ್ಣಯವನ್ನು ಕೈಗೊಂಡಿತ್ತು.
ಇದೀಗ ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರಿಗೆ ಪ್ರವೇಶವನ್ನು ಅನುಮತಿಸಿದ್ದ 2018ರ ತೀರ್ಪಿನ ವಿರುದ್ಧ ಸಲ್ಲಿಸಿದ ದೀರ್ಘಕಾಲದಿಂದ ಬಾಕಿ ಇರುವ ಪರಿಶೀಲನಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಳ್ಳಲಿರುವ ಹಿನ್ನೆಲೆಯಲ್ಲಿ ಕೇಂದ್ರವು ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.
ಈ ವಿಷಯವು ಧಾರ್ಮಿಕ ನಂಬಿಕೆ ಹಾಗೂ ಪಂಗಡದ ಸ್ವಾಯತ್ತತೆಯ ವ್ಯಾಪ್ತಿಗೆ ಸೇರಿದ್ದು, ನ್ಯಾಯಾಂಗ ಪರಿಶೀಲನೆಯ ವ್ಯಾಪ್ತಿಯನ್ನು ಮೀರುತ್ತದೆ ಎಂದು ಕೇಂದ್ರ ವಾದಿಸಿದೆ. ಮುಟ್ಟಿನ ವಯಸ್ಸಿನ ಮಹಿಳೆಯರ ಪ್ರವೇಶದ ಮೇಲಿನ ನಿರ್ಬಂಧವನ್ನು ಮುಂದುವರಿಸುವಂತೆ ಸುಪ್ರೀಂ ಕೋರ್ಟ್ಗೆ ಕೇಂದ್ರವು ಆಗ್ರಹಿಸಿದೆ.

