ನವದೆಹಲಿ: ಎ.8: ಉತ್ತರ ಕನ್ನಡ ಜಿಲ್ಲೆಯ ಕಾಳಿ ಹುಲಿ ಸಂರಕ್ಷಿತ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ ಘೋಷಣೆ ಮಾಡಿದೆ. ಈ ಕುರಿತು ಅಧಿಸೂಚನೆ ಹೊರಡಿಸಿದೆ.


663 ಚದರ ಕಿಲೋಮೀಟರ್ ವ್ಯಾಪ್ತಿಯ ಪ್ರದೇಶವನ್ನು ಸೂಕ್ಷ್ಮ ವಲಯ, ಅರಣ್ಯದ ಅಂಚಿನಿಂದ 10 ಕಿಲೋಮೀಟರ್ ವ್ಯಾಪ್ತಿಯ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಹಾಗೂ ಸೂಕ್ಷ್ಮ ಪ್ರದೇಶದ ವ್ಯಾಪ್ತಿಗೆ ಬರುವ 75 ಚ.ಕಿಲೋಮೀಟರ್ ಪ್ರದೇಶವನ್ನು ಕಂದಾಯ ಪ್ರದೇಶ ಎಂದು ಘೋಷಿಸಲಾಗಿದೆ. 84 ಚ.ಕಿಲೋಮೀಟರ್ ಪ್ರದೇಶವ್ಯಾಪ್ತಿಯ ಕಂದಾಯ ಗ್ರಾಮಗಳು, 503 ಕಿಲೋಮೀಟರ್ ಪ್ರದೇಶವ್ಯಾಪ್ತಿಯ ಅರಣ್ಯ ಇದರಲ್ಲಿ ಸೇರಿದೆ.
ಈ ಸಂಬಂಧ ಆಕ್ಷೇಪಣೆಗಳಿದ್ದರೆ ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಲಾಗಿದೆ. ಅಲ್ಲದೆ, ಅಧಿಸೂಚನೆಯ ಬಳಿಕ ಎರಡು ವರ್ಷಗಳ ಅವಧಿಯಲ್ಲಿ ರಾಜ್ಯ ಸರ್ಕಾರ ಈ ಸಂಬಂಧ ಮಾಸ್ಟರ್ ಪ್ಲ್ಯಾನ್ ಸಿದ್ದಪಡಿಸಬೇಕು. ಈ ಸಂಬಂಧ ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿ, ಯೋಜನೆ ರೂಪಿಸಬೇಕು ಎಂದು ತಿಳಿಸಲಾಗಿದೆ.
