ವಿಟ್ಲ: ಬಂಟ್ವಾಳ ತಾಲ್ಲೂಕಿನ ವಿಟ್ಲಕಸಬ ಗ್ರಾಮದ ಮಾಡ ಪ್ರದೇಶದಲ್ಲಿ ಕೋಳಿ ಅಂಕ ಜೂಜಾಟ ನಡೆಯುತ್ತಿರುವ ಬಗ್ಗೆ ಬಂದ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.


ಭಾನುವಾರ ಸಂಜೆ (ಏಪ್ರಿಲ್ 12) ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ಸುಮಾರು 20 ರಿಂದ 25 ಜನರು ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟದಲ್ಲಿ ತೊಡಗಿಸಿಕೊಂಡಿರುವುದು ಪತ್ತೆಯಾಗಿದೆ. ಪೊಲೀಸರು ಸ್ಥಳಕ್ಕೆ ದಾಳಿ ನಡೆಸುತ್ತಿದ್ದಂತೆಯೇ ಕೆಲವರು ಪರಾರಿಯಾಗಿದ್ದು, ಚಂದ್ರಶೇಖರ (43), ಇಬ್ರಾಹಿಂ (65), ಹೊನ್ನಪ್ಪ (46) ಹಾಗೂ ಚಂದ್ರಹಾಸ (32) ಎಂಬ ನಾಲ್ವರನ್ನು ಬಂಧಿಸಲಾಗಿದೆ.
ಇನ್ನುಳಿದ ಆರೋಪಿಗಳನ್ನು ಹಿಡಿಯಲು ಪೊಲೀಸರು ಮುಂದಾಗಿದ್ದಾಗ, ಬಾಬಣ್ಣ ಮತ್ತು ಹೊನ್ನಪ್ಪ ಹರಿಜನ ಎಂಬವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.
ದಾಳಿಯ ವೇಳೆ ಜೂಜಾಟಕ್ಕೆ ಬಳಸುತ್ತಿದ್ದ 3 ಕೋಳಿಗಳು, ರೂ.1000 ನಗದು ಹಾಗೂ ಇತರೆ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 87, 93, ಪ್ರಾಣಿ ಹಿಂಸೆ ತಡೆ ಕಾಯ್ದೆಯ ಕಲಂ 3, 11 ಹಾಗೂ BNS 2023 ರ ಕಲಂ 112, 221 ಅಡಿಯಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.

