ಕುಮಾರಧಾರ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಸೋಮವಾರ ಸಂಜೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಮೃತ ಯುವಕನನ್ನು ಮಂಜು ಎಂಬುವವರ ಪುತ್ರ ರಕ್ಷಿತ್ (26) ಎಂದು ಗುರುತಿಸಲಾಗಿದೆ.


ಸೋಮವಾರ ಸಂಜೆ ಐತ್ತೂರು ಗ್ರಾಮದ ಅರಬ್ಬಿ ತೋಡು ಎಂಬಲ್ಲಿ ರಕ್ಷಿತ್ ತನ್ನ ಸ್ನೇಹಿತರೊಂದಿಗೆ ಸ್ನಾನಕ್ಕೆಂದು ತೆರಳಿದ್ದಾಗ ಈ ಘಟನೆ ನಡೆದಿದೆ. ರಕ್ಷಿತ್ಗೆ ಈಜು ತಿಳಿದಿದ್ದರೂ ಕೂಡಾ ನದಿಯ ಸುಳಿಗೆ ಸಿಲುಕಿ ನೀರಿನಲ್ಲಿ ಮುಳುಗಿರುವುದಾಗಿ ಸ್ಥಳೀಯರು ತಿಳಿಸಿರುವ ಕುರಿತು ವರದಿಯಾಗಿದೆ.
ಘಟನೆ ನಡೆದ ಕೂಡಲೇ ಸ್ನೇಹಿತರು ಮತ್ತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಡಬ ಪೊಲೀಸರು ಮತ್ತು ಪುತ್ತೂರಿನ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಸ್ಥಳೀಯರ ನೆರವಿನೊಂದಿಗೆ ಶೋಧ ಕಾರ್ಯ ಪ್ರಾರಂಭ ಮಾಡಿದ್ದರು. ಆದರೆ ಕತ್ತಲೆಯ ಆವರಿಸಿದ ಕಾರಣ ಶೋಧ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು.
ತಡರಾತ್ರಿ ಖ್ಯಾತ ಮುಳುಗುತಜ್ಞ ಈಶ್ವರ್ ಮಲ್ಪೆ ಮತ್ತು ಅವರ ತಂಡ ಸ್ಥಳಕ್ಕೆ ಆಗಮಿಸಿದ್ದು, ಸುಮಾರು 30 ಅಡಿ ಆಳದಲ್ಲಿ ಸಿಲುಕಿದ್ದ ಮೃತದೇಹವನ್ನು ಹೊರತೆಗೆದಿದ್ದಾರೆ.

