ಕಳೆದ ಜನವರಿ ತಿಂಗಳಿನಲ್ಲಿ ನಡೆದಿದ್ದ, ಆಧಾರ್ ಕಾರ್ಡ್ ಹಿಡಿದು ಮನೆ ಬಿಟ್ಟಿದ್ದ ಇಬ್ಬರು PUC ವಿದ್ಯಾರ್ಥಿನಿಯರ ನಿಗೂಢ ನಾಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಈಗ ಅಪರಾಧ ತನಿಖಾ ಇಲಾಖೆಗೆ (CID) ಒಪ್ಪಿಸಿದೆ.


ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸ್ ಠಾಣಾ(Vidyaranyapura Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ತನಿಷ್ಕಾ ಹಾಗೂ ಆಕೆಯ ಜ್ಯೂನಿಯರ್ ತೇಜಸ್ವಿನಿ ಜನವರಿ 31ರಂದು ಮನೆಯಿಂದ ಹೊರಟು ಹೋದ ಬಳಿಕ ಮರಳಿ ಮನೆಗೆ ಬಂದಿಲ್ಲ. ಆತಂಕಗೊಂಡ ಪೋಷಕರು ತಕ್ಷಣ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಅಲ್ಲದೆ ತನಿಖೆಯ ವೇಳೆ ವಿದ್ಯಾರ್ಥಿನಿಯರು ತಮ್ಮೊಂದಿಗೆ ಆಧಾರ್ ಕಾರ್ಡ್ಗಳನ್ನು ತೆಗೆದುಕೊಂಡು ಹೋಗಿದ್ದರೆಂಬುದು ತಿಳಿದುಬಂದಿದೆ. ಆದರೆ ಅವರು ಯಾವುದೇ ಮೊಬೈಲ್ ಫೋನ್ ಅಥವಾ ಎಟಿಎಂ ಕಾರ್ಡ್ ಬಳಕೆ ಮಾಡಿರುವ ಸುಳಿವು ಪತ್ತೆಯಾಗಿಲ್ಲ. ಕಳೆದ ಎಂಟು ತಿಂಗಳಿನಿಂದ ಅವರು ಕುಟುಂಬ ಸದಸ್ಯರು ಅಥವಾ ಸ್ನೇಹಿತರೊಂದಿಗೆ ಯಾವುದೇ ಸಂಪರ್ಕ ಸಾಧಿಸಿಲ್ಲ ಎಂಬುದೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ವಿದ್ಯಾರಣ್ಯಪುರ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿ ಮುಂಬೈ, ಚೆನ್ನೈ, ಕೊಯಮತ್ತೂರು, ದೆಹಲಿ, ಕಾಶಿ, ಕೇರಳ, ಚಾಮರಾಜನಗರ ಹಾಗೂ ಮೈಸೂರು ಸೇರಿದಂತೆ ದೇಶದ ಸುಮಾರು 100 ಕ್ಕೂ ಹೆಚ್ಚು ಸ್ಥಳಗಳಲ್ಲಿ ಹುಡುಕಾಟ ನಡೆಸಿದ್ದರು. ಆದರೂ, ವಿದ್ಯಾರ್ಥಿನಿಯರ ಬಗ್ಗೆ ಯಾವುದೇ ಸುಳಿವು ಪತ್ತೆಯಾಗಲಿಲ್ಲ. ಸ್ಥಳೀಯ ಪೊಲೀಸರ ತನಿಖೆಯಿಂದ ಸಮಾಧಾನಗೊಳ್ಳದ ವಿದ್ಯಾರ್ಥಿನಿಯರ ಪೋಷಕರು ಹೈಕೋರ್ಟ್ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸಹ ಸಲ್ಲಿಸಿದ್ದರು. ಆದರೂ ಫಲಿತಾಂಶ ಶೂನ್ಯವಾಗಿದ್ದರಿಂದ, ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಪೋಷಕರು ಒತ್ತಾಯಿಸಿದ್ದರು. ಸದ್ಯದ ಪರಿಸ್ಥಿತಿಯನ್ನು ಪರಿಗಣಿಸಿದ ಸರ್ಕಾರ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿ ಆದೇಶಿಸಿದೆ.

