ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಮಮತಾ ಬ್ಯಾನರ್ಜಿಯ ಭದ್ರಕೋಟೆಯನ್ನು ಚಿತ್ರಗೊಳಿಸಿ ಭರ್ಜರಿ ಜಯಭೇರಿ ಬಾರಿಸಿದೆ. ಈ ಬೆನ್ನಲ್ಲೇ ಇದೀಗ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು ಸಿಎಂ ಪಟ್ಟವನ್ನು ಯಾರಿಗೆ ಕಟ್ಟುತ್ತದೆ ಎಂಬ ಕುತೂಹಲ ಎಲ್ಲರಲ್ಲಿಯೂ ಕೆರಳಿ ನಿಂತಿದೆ.


ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದ ನಂತರ ಸರ್ಕಾರ ರಚನೆ ಕುರಿತು ಚರ್ಚಿಸಲು ಶುಕ್ರವಾರ (ಮೇ 8) ಕೋಲ್ಕತ್ತಾದಲ್ಲಿ ಬಿಜೆಪಿಯ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಸುವೇಂದು ಅಧಿಕಾರಿ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ. ಈ ಆಯ್ಕೆ ಕೈ ಎತ್ತುವ ಸರಳ ವಿಧಾನದಿಂದ ನಡೆಯಲಿದೆ ಎಂದು ಹೇಳಲಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಸುವೇಂದು ಅಧಿಕಾರಿ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ನಂತರ ಸುವೇಂದು ಅಧಿಕಾರಿ, ಭಟ್ಟಾಚಾರ್ಯ ಮತ್ತು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುನಿಲ್ ಬನ್ಸಾಲ್ ರಾಜಭವನಕ್ಕೆ ತೆರಳಿ ಸರ್ಕಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ ಎನ್ನಲಾಗಿದೆ.
ಯಾರಿವರು ಸುವೇಂದು ಅಧಿಕಾರಿ?
ಸುವೇಂದು ಅಧಿಕಾರಿ ಪ್ರಸ್ತುತ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಪ್ರಮುಖ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಬಿಜೆಪಿಗೆ ಸೇರುವ ಮೊದಲು, ಅವರು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಪ್ರಭಾವಿ ನಾಯಕರಾಗಿದ್ದರು. ರಾಜ್ಯ ರಾಜಕಾರಣದಲ್ಲಿ ಸುದೀರ್ಘ ಹಾದಿ ಸವೆಸಿರುವ ಬಿಜೆಪಿ ಹಿರಿಯ ನಾಯಕ ಸುವೇಂದು, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕೋಲ್ಕತ್ತಾದ ಭವಾನಿಪುರ ವಿಧಾನಸಭಾ ಕ್ಷೇತ್ರದಿಂದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಣಕ್ಕಿಳಿದಿದ್ದಾರೆ. ಇದರ ಜೊತೆಗೆ, ತಮ್ಮ ಭದ್ರಕೋಟೆಯಾದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಿಂದಲೂ ಅವರು ಅದೃಷ್ಟ ಪರೀಕ್ಷೆಗಿಳಿದಿದ್ದರು.
ನಿಖರವಾಗಿ ಐದು ವರ್ಷಗಳ ಹಿಂದೆ, ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಕಹಿ ಸೋಲಿನ ರುಚಿ ನೀಡಿದ್ದರು. 2026 ಮತ್ತೆ ಅದೇ ವ್ಯಕ್ತಿ ದೀದಿಯನ್ನು ಸೋಲಿಸಿದ್ದಾರೆ. ಆದರೆ ಈ ಬಾರಿ ಕ್ಷೇತ್ರ ನಂದಿಗ್ರಾಮದವಲ್ಲ, ಬದಲಾಗಿ ಕೋಲ್ಕತ್ತಾದ ಭಬಾನಿಪುರ! ನಂದಿಗ್ರಾಮ ಸೋಲಿನ ನಂತರ ಮಮತಾ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಯಲು ಅವಕಾಶ ಮಾಡಿಕೊಟ್ಟ ಕ್ಷೇತ್ರವದು. ಒಂದು ಕಾಲದಲ್ಲಿ ಮಮತಾ ಅವರ ಆಪ್ತರಾಗಿದ್ದ ಸುವೇಂದು ಅಧಿಕಾರಿ ಇದೀಗ ಎರಡನೇ ಬಾರಿ ಅವರಿಗೆ ಸೋಲಿನ ರುಚಿ ತೋರಿಸಿರುವುದು ಸಾಮಾನ್ಯ ಸಂಗತಿಯಲ್ಲ. ತಮ್ಮ ಮಾಜಿ ನಾಯಕಿಯ ಸುರಕ್ಷಿತ ಭದ್ರಕೋಟೆಯಲ್ಲಿ ಎಲ್ಲರೂ ಅಚ್ಚರಿಪಡುವ ಹಾಗೆ ಗೆದ್ದಿದ್ದಾರೆ. ಅದೂ 15,114 ಮತಗಳ ಅಂತರದಿಂದ ಎಂಬುದು ವಿಶೇಷ.

