Home » ಧರ್ಮಸ್ಥಳ ಸೌಜನ್ಯ ಪ್ರಕರಣ – ಮರು ತನಿಖೆ ವಿವೇಚನೆ ಸಿಬಿಐ ಅಥವಾ ಕೇಂದ್ರಕ್ಕೆ!!

ಧರ್ಮಸ್ಥಳ ಸೌಜನ್ಯ ಪ್ರಕರಣ – ಮರು ತನಿಖೆ ವಿವೇಚನೆ ಸಿಬಿಐ ಅಥವಾ ಕೇಂದ್ರಕ್ಕೆ!!

0 comments

ಧರ್ಮಸ್ಥಳದ ಉಜಿರೆಯ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ (Soujanya Case) ಒಂದು ಪ್ರಮುಖ ಬೆಳವಣಿಗೆಯಾಗಿದೆ. ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಈ ಹಳೆಯ ಪ್ರಕರಣದ ಮರು ತನಿಖೆ ಕುರಿತು ಕೇಂದ್ರ ತನಿಖಾ ಸಂಸ್ಥೆ ಅಥವಾ ಕೇಂದ್ರ ಸರ್ಕಾರವೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಲು ಕರ್ನಾಟಕ ರಾಜ್ಯ ಸರ್ಕಾರ ಮುಂದಾಗಿದೆ.

ಈಗಾಗಲೇ ರಾಜ್ಯ ಗೃಹ ಹಾಗೂ ಕಾನೂನು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸರ್ಕಾರ ಮಹತ್ವದ ಸಮಾಲೋಚನೆ ನಡೆಸಿದೆ. ಸುಮಾರು 13 ವರ್ಷಗಳ ಹಿಂದೆಯೇ ಈ ಕೊಲೆ ಪ್ರಕರಣದ ಸಂಪೂರ್ಣ ತನಿಖೆಯನ್ನು ಸಿಬಿಐಗೆ ಒಪ್ಪಿಸಲಾಗಿದ್ದು, ವೈದ್ಯಕೀಯ ವರದಿಗಳು ಸೇರಿದಂತೆ ಎಲ್ಲಾ ಪ್ರಮುಖ ದಾಖಲೆಗಳನ್ನು ಕೇಂದ್ರ ಸಂಸ್ಥೆಗೆ ಹಸ್ತಾಂತರಿಸಲಾಗಿದೆ. ಮುಂದಿನ ವಾರ ಸುಪ್ರೀಂ ಕೋರ್ಟ್‌ನಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದ್ದು, ಅಷ್ಟರೊಳಗೆ ಸರ್ಕಾರ ತನ್ನ ಈ ನಿಲುವನ್ನು ಅಧಿಕೃತವಾಗಿ ಸ್ಪಷ್ಟಪಡಿಸಲಿದೆ ಎಂದು ಗೃಹ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ

ಮತ್ತೆ ಕೋರ್ಟ್‌ಗೆ ಯಾಕೆ?:

ಸಾಕ್ಷಿಗಳ ಕೊರತೆ ಹಿನ್ನೆಲೆಯಲ್ಲಿ ಸೌಜನ್ಯ ಕೊಲೆ ಪ್ರಕರಣದ ಆರೋಪಿ ಸಂತೋಷ್ ರಾವ್ ನನ್ನು ಸಿಬಿಐ ನ್ಯಾಯಾಲಯವು ಖುಲಾಸೆಗೊಳಿಸಿತ್ತು. ಈ ತೀರ್ಪು ಬಳಿಕ ಮಗಳ ಹತ್ಯೆ ಪ್ರಕರಣದ ಮರು ತನಿಖೆಗೆ ಆದೇಶಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಮೃತ ಸೌಜನ್ಯ ತಾಯಿ ಕುಸುಮಾವತಿ ಗೌಡ ಮೊರೆ ಹೋಗಿದ್ದರು. ಇನ್ನೊಂದೆಡೆ ಸಂತೋಷ್ ರಾವ್ ಖುಲಾಸೆಗೊಳಿಸಿದ್ದ ಕೆಳಹಂತದ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಿಬಿಐ ಮತ್ತೊಂದು ಅರ್ಜಿ ಸಲ್ಲಿಸಿತ್ತು. ಈ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್‌, ಪ್ರಕರಣದ ಮರು ತನಿಖೆ ವಿಚಾರವಾಗಿ ಮುಂದಿನ ಕ್ರಮದ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಕೋರ್ಟ್‌ಗೆ ತನ್ನ ಅಭಿಪ್ರಾಯ ತಿಳಿಸಲು ಸರ್ಕಾರ ಮುಂದಾಗಿದೆ ಎಂದು ತಿಳಿದು ಬಂದಿದೆ.

banner

You may also like