ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡಿದ್ದು ಹಲವಡೆ ಭಾರೀ ಮಳೆಯಾಗುತ್ತಿದೆ. ಅಂತೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯು ರೌದ್ರಾವತಾರವನ್ನು ತಾಳಿದ್ದು, ಮೊದಲ ಮಳೆಗೆ ರಾಷ್ಟ್ರೀಯ ಹೆದ್ದಾರಿ ಕೊಚ್ಚಿ ಹೋಗಿರುವ ಅಜಾತಕಾರಿ ಘಟನೆ ನಡೆದಿದೆ. ಇದು ಕಳಪೆ ಕಾಮಗಾರಿಯನ್ನು ಎತ್ತಿ ಹಿಡಿಯುತ್ತಿದೆ.


ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ತೆಂಕ ಮಿಜಾರಿನಲ್ಲಿ ಇತ್ತೀಚೆಗಷ್ಟೇ ನಿರ್ಮಿಸಲಾದ ರಾಷ್ಟ್ರೀಯ ಹೆದ್ದಾರಿಯ ಒಂದು ಭಾಗ ಮೊದಲ ಮಳೆಗೆ ಕೊಚ್ಚಿ ಹೋಗಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕೋಟಿಗಟ್ಟಲೆ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ಈ ಹೆದ್ದಾರಿಯು ಕನಿಷ್ಠ ಒಂದು ವರ್ಷವೂ ತಡೆದುಕೊಳ್ಳದೆ ಮೊದಲ ಮುಂಗಾರು ಮಳೆಗೆ ಧ್ವಂಸಗೊಂಡಿದೆ.
ಈ ಭಾಗದಲ್ಲಿ ಮಳೆ ನೀರು ಹರಿದು ಹೋಗಲು ವೈಜ್ಞಾನಿಕ ಯೋಜನೆ ರೂಪಿಸಿಲ್ಲ. ದೊಡ್ಡ ಮೋರಿ ನಿರ್ಮಿಸುವ ಬದಲಿಗೆ, ಅತ್ಯಂತ ಸಣ್ಣ ಗಾತ್ರದ ಮೋರಿಯನ್ನು ನಿರ್ಮಿಸಲಾಗಿದೆ. ಇದರಿಂದಾಗಿ ಮಳೆ ನೀರು ರಸ್ತೆಯ ಮೇಲೆಯೇ ನಿಂತು, ಕೆಳಭಾಗದ ಮಣ್ಣು ಮತ್ತು ಜಲ್ಲಿಕಲ್ಲುಗಳನ್ನು ಸಂಪೂರ್ಣವಾಗಿ ಕೊಚ್ಚಿಕೊಂಡು ಹೋಗಿದೆ. ಇದರ ಪರಿಣಾಮವಾಗಿ ರಸ್ತೆಯ ಒಂದು ಭಾಗವೇ ಕುಸಿದು ಬಿದ್ದಿದೆ.
ಈ ಕಳಪೆ ಮತ್ತು ಬೇಜವಾಬ್ದಾರಿಯುತ ಕೆಲಸದ ವಿರುದ್ಧ ಸಾರ್ವಜನಿಕರು ಹಾಗೂ ವಾಹನ ಸವಾರರು ಕಾಮಗಾರಿ ನಡೆಸಿದ ಡಿಬಿಎಲ್ ಕಂಪನಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊದಲ ಮಳೆಯನ್ನೇ ತಡೆದುಕೊಳ್ಳದ ಈ ಹೆದ್ದಾರಿ ಮುಂದಿನ ದಿನಗಳಲ್ಲಿ ಇನ್ಯಾವ ಮಟ್ಟದ ಅನಾಹುತಕ್ಕೆ ಕಾರಣವಾಗಬಹುದು ಎಂದು ಸ್ಥಳೀಯರು ಪ್ರಶ್ನಿಸುತ್ತಿದ್ದಾರೆ.

