ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಪರ ವಕೀಲ ಎಸ್.ಸುನೀಲ್ ಕುಮಾರ್ ಅವರು ದರ್ಶನ್ ಪರ ವಕಾಲತ್ತಿನಿಂದ ನಿವೃತ್ತಿ ಪಡೆಯುವುದಾಗಿ ಹೈಕೋರ್ಟ್ ತಿಳಿಸಿದ್ದಾರೆ.


‘ರೇಣುಕ ಸ್ವಾಮಿ ಅವರ ತಾಯಿ ರತ್ನಪ್ರಭಾ ಅವರನ್ನು ಪಾಟಿ ಸವಾಲಿಗೆ ಒಳಪಡಿಸಲು ನಿರಾಕರಿಸಲಾಗಿದೆ’ ಎಂದು ಆಕ್ಷೇಪಿಸಿ ಪ್ರಾಸಿಕ್ಯೂಷನ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಆರೋಪಿಗಳಾದ ದರ್ಶನ್, ಲಕ್ಷ್ಮಣ್ (ದರ್ಶನ್ ಕಾರಿನ ಡ್ರೈವರ್) ಮತ್ತು ನಾಗರಾಜ್ (ದರ್ಶನ್ ಮ್ಯಾನೇಜರ್) ಪರ ಹಾಜರಾಗಿದ್ದ ಹೈಕೋರ್ಟ್ ವಕೀಲ ಎಸ್.ಸುನಿಲ್ ಕುಮಾರ್, ‘ಈ ಪ್ರಕರಣದಲ್ಲಿ ನಾನು ದರ್ಶನ್ ಮತ್ತಿತರರ ವಕಾಲತ್ತಿನಿಂದ ನಿವೃತ್ತಿ ಪಡೆಯಲು ಬಯಸಿದ್ದೇನೆ’ ಎಂದರು. ಇದಕ್ಕೆ ಪ್ರತಿಯಾಗಿ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಪಿ.ಪ್ರಸನ್ನ ಕುಮಾರ್, ‘ಇವರ ಈ ಹೇಳಿಕೆ ವಿಚಾರಣೆಯನ್ನು ವಿಳಂಬಿಸುವ ಸೂತ್ರ. ಪ್ರಕರಣದ ವಿಚಾರಣೆಯನ್ನು ನಿಗದಿತ ಮಿತಿಯಲ್ಲಿ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನವಿದೆ. ಈ ಆದೇಶವನ್ನು ದರ್ಶನ್ ಅವರೇ ಸುಪ್ರೀಂ ಕೋರ್ಟ್ಗೆ ಹೋಗಿ ಪಡೆದುಕೊಂಡು ಬಂದಿದ್ದಾರೆ. ಆದರೆ, ವಿಚಾರಣೆಯಲ್ಲಿ ಈಗ ಪ್ರತಿಯೊಂದಕ್ಕೂ ತಕರಾರು ತೆಗೆದು ವಿಳಂಬಗೊಳಿಸಲಾಗುತ್ತಿದೆ’ ಎಂದು ಆಕ್ಷೇಪಿಸಿದರು.
ಇದನ್ನು ಅಲ್ಲಗಳೆದ ಸುನೀಲ್ ಕುಮಾರ್, ವಿಚಾರಣೆ ಬೇಗ ಮುಗಿಸಿ ಎಂದು ನಾವು ಸುಪ್ರೀಂಕೋರ್ಟ್ಗೆ ವಿಶೇಷ ಮೇಲ್ಮನವಿ ಸಲ್ಲಿಸಿರಲಿಲ್ಲ. ನಮ್ಮ ಕಕ್ಷಿದಾರರಿಗೆ ಜೈಲಿನಲ್ಲಿ ಮನೆ ಊಟ ನೀಡಲು ಮತ್ತು ಸೂಕ್ತವಾದ ಸೌಲಭ್ಯ ಒದಗಿಸಲು ಮತ್ತು ತ್ವರಿತಗತಿಯಲ್ಲಿ ವಿಚಾರಣೆ ನಡೆಯುತ್ತಿಲ್ಲವಾದ ಕಾರಣ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದ್ದೆವು. ಈ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ವಿಚಾರಣೆಗೆ ಕಾಲಮಿತಿ ನಿಗದಿಪಡಿಸಿದೆ ಎಂದು ಸಮಜಾಯಿಷಿ ನೀಡಿದರು.
ಕೆಲ ಹೊತ್ತು ಪ್ರಾಸಿಕ್ಯೂಷನ್ ಮತ್ತು ಆರೋಪಿ ಪರ ವಕೀಲರ ಬಿಸಿ-ಬಿಸಿ ವಾಕ್ಸಮರ ನಡೆಯಿತು. ಅಂತಿಮವಾಗಿ ಸುನೀಲ್ ಕುಮಾರ್, ಈ ಅರ್ಜಿಗೆ ಸಂಬಂಧಿಸಿದಂತೆ ಹಾಜರಾಗಲು ದರ್ಶನ್ ಮತ್ತು ಇತರ ಆರೋಪಿಗಳು ಜೈಲಿನಲ್ಲಿದ್ದು ನನಗೆ ಈತನಕ ಯಾವುದೇ ಸೂಚನೆ ಬಂದಿಲ್ಲ. ಅಷ್ಟಕ್ಕೂ, ಈ ಪ್ರಕರಣದಿಂದ ನಾನು ನಿವೃತ್ತಿ ಪಡೆಯಲು ಬಯಸಿದ್ದೇನೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಈ ದಿನ ಮೆರಿಟ್ ಮೇಲೆ ಯಾವುದೇ ವಿಚಾರಣೆ ನಡೆದಿಲ್ಲವಾದರೂ ಆರೋಪಿ ಪರ ವಕೀಲರು ತಾವು ಹೇಳಬೇಕಾದ್ದನ್ನು ಅಡಕಗೊಳಿಸಿಯೇ ವಿಚಾರಣೆ ಮುಂದೂಡುವಂತೆ ಕೋರಿದ್ದಾರೆ. ಆದ್ದರಿಂದ, ಅರ್ಜಿ ವಿಚಾರಣೆಯನ್ನು ಜೂನ್ 23ಕ್ಕೆ ಮುಂದೂಡಲಾಗಿದೆ ಎಂದು ತಿಳಿಸಿ ವಿಚಾರಣೆ ಮುಂದೂಡಿತು.
ಪ್ರಾಸಿಕ್ಯೂಷನ್ ಕೋರಿಕೆ ಏನು?:
‘ಈ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಕರೆಸಿದ್ದ ಸಾಕ್ಷಿಯು (ರತ್ನಪ್ರಭಾ) ನ್ಯಾಯಾಲಯದ ಮುಂದೆ ಪ್ರಾಸಿಕ್ಯೂಷನ್ಗೆ ವಿರುದ್ಧವಾಗಿ ಹೇಳಿಕೆ ನೀಡಿದ್ದಾರೆ. ಹೀಗಾಗಿ, ಸಾಕ್ಷಿ ತನ್ನ ಹೇಳಿಕೆಯಿಂದ ಹಿಂದೆ ಸರಿದಾಗ, ನಮ್ಮ ಮನವಿಯ ಮೇರೆಗೆ ನ್ಯಾಯಾಲಯ ತನ್ನ ವಿವೇಚನೆಯನ್ನು ಬಳಸಿ ಪಾಟಿ ಸವಾಲು ನಡೆಸಲು ಅನುಮತಿ ನೀಡಬೇಕಿತ್ತು. ಆದರೆ, ನಮ್ಮ ಮನವಿಯನ್ನು ಸೆಷನ್ಸ್ ನ್ಯಾಯಾಲಯ ತಳ್ಳಿ ಹಾಕಿದೆ’ ಎಂದು ಪ್ರಾಸಿಕ್ಯೂಷನ್ ಆಕ್ಷೇಪಿಸಿದೆ.

