Home » ದೇವಸ್ಥಾನಗಳ ಹಣವನ್ನು ಬೇರೆ ಕೆಲಸಕ್ಕೆ ಬಳಸುವಂತಿಲ್ಲ – ಸಿಎಂ ವಿಜಯ್ ಘೋಷಣೆ

ದೇವಸ್ಥಾನಗಳ ಹಣವನ್ನು ಬೇರೆ ಕೆಲಸಕ್ಕೆ ಬಳಸುವಂತಿಲ್ಲ – ಸಿಎಂ ವಿಜಯ್ ಘೋಷಣೆ

0 comments

ಹಿಂದೂ ದೇವಸ್ಥಾನಗಳ ನಿಧಿಯನ್ನು ಇತರೆ ಸರ್ಕಾರಿ ಯೋಜನೆಗಳು ಹಾಗೂ ಕಲ್ಯಾಣ ಕಾರ್ಯಕ್ರಮಗಳಿಗೆ ಬಳಸುವಂತಿಲ್ಲ ಎಂದು ತಮಿಳುನಾಡಿನ ನೂತನ ಮುಖ್ಯಮಂತ್ರಿ ವಿಜಯ್(Vijay) ನೇತೃತ್ವದ ಟಿವಿಕೆ (TVK) ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಹಿಂದಿನ ಸರ್ಕಾರದ ಯೋಜನೆಗೆ ತಡೆ

ತಮಿಳುನಾಡಿನ ಹಿಂದಿನ ಡಿಎಂಕೆ ಸರ್ಕಾರವು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳ ನಿಧಿಯನ್ನು ಬಳಸಿಕೊಂಡು 17 ವಾಣಿಜ್ಯ ಕಾಂಪ್ಲೆಕ್ಸ್ ಹಾಗೂ 29 ಕಲ್ಯಾಣ ಮಂಟಪಗಳನ್ನು ನಿರ್ಮಿಸಲು ಯೋಜನೆ ರೂಪಿಸಿತ್ತು. ಇದಕ್ಕಾಗಿ 246 ಕೋಟಿ ರೂಪಾಯಿಗಳನ್ನು ವಿನಿಯೋಗಿಸಲು ಸಿದ್ಧತೆ ನಡೆಸಿತ್ತು. ಆದರೆ, ನೂತನ ವಿಜಯ್ ಸರ್ಕಾರ ಈ ಆದೇಶಕ್ಕೆ ಸಂಪೂರ್ಣವಾಗಿ ಬ್ರೇಕ್ ಹಾಕಿದ್ದು, ಯೋಜನೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ರದ್ದುಗೊಳಿಸಿದೆ.

ಶುಕ್ರವಾರ ಹೊರಡಿಸಿದ ಸರ್ಕಾರಿ ಆದೇಶದ ಪ್ರಕಾರ, 115.77 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿದ್ದ 29 ಕಲ್ಯಾಣ ಮಂಟಪಗಳ ಯೋಜನೆಗಳು ಮತ್ತು 130.08 ಕೋಟಿ ರೂಪಾಯಿ ವೆಚ್ಚದ 17 ವಾಣಿಜ್ಯ ಸಂಕೀರ್ಣಗಳ ಯೋಜನೆಗಳನ್ನು ರದ್ದುಪಡಿಸಲಾಗಿದೆ. ಒಟ್ಟು 245.85 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳನ್ನು ಸರ್ಕಾರ ಕೈಬಿಟ್ಟಿದೆ. ಈ ಯೋಜನೆಗಳನ್ನು ಈ ಹಿಂದೆ ಘೋಷಿಸಲಾಗಿದ್ದರೂ, ನಿರ್ಮಾಣ ಕಾಮಗಾರಿ ಇನ್ನೂ ಆರಂಭವಾಗಿರಲಿಲ್ಲ. ಈ ಯೋಜನೆಗಳಲ್ಲಿ ಹಲವು ಕಾನೂನು ತೊಡಕುಗಳನ್ನು ಎದುರಿಸುತ್ತಿವೆ ಮತ್ತು ಇವುಗಳನ್ನು ಮುಂದುವರಿಸಿದರೆ ದೇವಸ್ಥಾನಗಳಿಗೆ ದೊಡ್ಡ ಆರ್ಥಿಕ ಹೊರೆಯಾಗಲಿದೆ ಎಂದು ಸರ್ಕಾರ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ. ದೇವಸ್ಥಾನದ ನಿಧಿಯನ್ನು ಹೇಗೆ ಬಳಸಬೇಕು ಎಂಬುದರ ಕುರಿತು ಹೊಸ ಸರ್ಕಾರವು ತನ್ನ ನೀತಿಯಲ್ಲಿ ಬದಲಾವಣೆ ತಂದಿರುವುದೇ ಈ ನಿರ್ಧಾರದ ಹಿಂದಿನ ಪ್ರಮುಖ ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ

banner

ದೇಗುಲಗಳ ಆರ್ಥಿಕ ಸ್ಥಿತಿ ಸುಧಾರಣೆಗೆ ಕ್ರಮ

ಈ ಕುರಿತು ಮಾಹಿತಿ ನೀಡಿರುವ ಸರ್ಕಾರದ ಉನ್ನತ ಅಧಿಕಾರಿಗಳು, “ದೇವಸ್ಥಾನಗಳಿಂದ ಬರುವ ಆದಾಯ ಮತ್ತು ನಿಧಿಯನ್ನು ಕೇವಲ ಆಯಾ ದೇವಸ್ಥಾನಗಳ ಜೀರ್ಣೋದ್ಧಾರ, ಭಕ್ತರ ಸೌಲಭ್ಯ ಹಾಗೂ ದೇವರ ಕಲ್ಯಾಣೋತ್ಸವ ಮುಂತಾದ ಧಾರ್ಮಿಕ ಕಾರ್ಯಗಳಿಗೆ ಮಾತ್ರ ಬಳಸಲಾಗುತ್ತದೆ. ಸರ್ಕಾರದ ಈ ತೀರ್ಮಾನದಿಂದಾಗಿ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳು ಆರ್ಥಿಕವಾಗಿ ದಿವಾಳಿಯಾಗುವುದು ತಪ್ಪಲಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

You may also like