ಉಜಿರೆ, ದಿ.ಜೂ. 22 : ಬೆಳಾಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ 2025- 26 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನಾ ಹಾಗು ಪ್ರಸಕ್ತ ಸಾಲಿನ ಶಾಲೆಯ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮವನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಧನ್ಯ ಕುಮಾರ್ ಉದ್ಘಾಟಿಸಿ ಮಾತನಾಡಿ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ಮೌಲ್ಯಯುತ ಶಿಕ್ಷಣ ನೀಡುವುದರ ಜೊತೆಗೆ ಜೀವನ ಶಿಕ್ಷಣವನ್ನು ಕಲಿಸಿಕೊಡುತ್ತದೆ. ವಿದ್ಯಾರ್ಥಿಗಳ ಸಾಧನೆ ನಿರಂತರವಾಗಿರಬೇಕು. ಅಂಕಗಳ ಜೊತೆಗೆ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದು ಅತ್ಯಂತ ಅಗತ್ಯ. ಪಠ್ಯೇತರ ಚಟುವಟಿಕೆಗಳನ್ನು ಒಳಗೊಂಡ ವಿದ್ಯಾರ್ಥಿ ಕಾರ್ಯಕ್ರಮಗಳು ಹಾಗು ಶಾಲಾ ಸಂಘಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ. ವಿದ್ಯಾಭ್ಯಾಸದಲ್ಲಿ ಶಿಸ್ತು ಮತ್ತು ನಿರಂತರ ಪ್ರಯತ್ನ ಇದ್ದಾಗ ಯಶಸ್ಸು ನಮ್ಮದಾಗುತ್ತದೆ ಎಂದು ಶೈಕ್ಷಣಿಕವಾಗಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದಿಸಿ, ನೂತನವಾಗಿ ರಚನೆಯಾದ ಶಾಲಾ ವಿವಿಧ ಸಂಘಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲೆಯ ಮುಖ್ಯ ಶಿಕ್ಷಕ ಜಯರಾಮ ಮಯ್ಯ ಮಾತನಾಡಿ, ಪಠ್ಯೇತರ ಚಟುವಟಿಕೆಗಳು ಹೊಸ ಹೊಸ ಅನುಭವವನ್ನು ಪರಿಚಯಿಸುವುದರ ಜೊತೆಗೆ ನಮ್ಮ ಬೌದ್ಧಿಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಪ್ರತಿಯೊಂದು ಸಂಘಗಳಲ್ಲೂ ವಿದ್ಯಾರ್ಥಿಗಳು ಸಕ್ರೀಯವಾಗಿ ತೊಡಗಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಿದರು.
ಕಾರ್ಯಕ್ರಮದಲ್ಲಿ 2025- 26 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ 612 ಅಂಕ ಪಡೆದ ಶಾಲೆಯ ವಿದ್ಯಾರ್ಥಿನಿ ರಕ್ಷಾ ಎನ್ ಇವರನ್ನು ಸನ್ಮಾನಿಸಲಾಯಿತು. ಬಳಿಕ ನೂರು ಶೇಕಡಾ ಫಲಿತಾಂಶವನ್ನು ಪಡೆದುಕೊಳ್ಳಲು ಸಹಕರಿಸಿದ ಶಾಲೆಯ ಅಧ್ಯಾಪಕರನ್ನು ಅಭಿನಂದಿಸಲಾಯಿತು.
ಕಾರ್ಯಕ್ರಮದ ವೇದಿಕೆಯಲ್ಲಿ ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ರಾಜೇಶ ಕುರ್ಕಿಲ ಸೇರಿದಂತೆ ವಿದ್ಯಾರ್ಥಿಗಳು, ಬೋಧಕ , ಬೋಧಕೇತರ ಸಿಬ್ಬಂದಿ ವರ್ಗದವರು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ಶಿಕ್ಷಕರಾದ ಶಿಕ್ಷಕರಾದ ಕೋಕಿಲ ಸ್ವಾಗತಿಸಿ, ಐಶ್ವರ್ಯ ವಂದಿಸಿದರು. ಸುಮನ್ ಯು.ಎಸ್ ಕಾರ್ಯಕ್ರಮ ನಿರೂಪಿಸಿದರು.

