ಮಂಗಳೂರು: ಬಂಟ ಹಾಗೂ ಬಿಲ್ಲವ ಸಮುದಾಯಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಅನಿತಾ ಕಾಸರಗೋಡು ಅವರನ್ನು ಮಂಗಳೂರಿನ ಬರ್ಕೆ ಪೊಲೀಸರು ಬೆಂಗಳೂರಿನಲ್ಲಿ ಬಂಧನ ಮಾಡಿದ್ದಾರೆ.


ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜೂನ್ 25ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಅನಿತಾ ಕಾಸರಗೋಡು ಅವರು ಬಂಟ ಮತ್ತು ಬಿಲ್ಲವ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಮಾಡಿ ಹರಿಬಿಟ್ಟಿದ್ದರು. ಈ ಬಗ್ಗೆ ‘ಬಿರುವೆರ್ ಕುಡ್ಲ’ ಸಂಘಟನೆಯ ರಾಕೇಶ್ ಪೂಜಾರಿ ಅವರು ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತ ಆರೋಪಿ ಅನಿತಾ. ಮಂಗಳೂರಿನಿಂದ ಪರಾರಿಯಾಗಿ ಬೆಂಗಳೂರಿನಲ್ಲಿದ್ದ ತನ್ನ ಅಕ್ಕನ ಮನೆಯಲ್ಲಿ ತಲೆಮರೆಸಿಕೊಂಡಿರುವ ಕುರಿತು ವರದಿಯಾಗಿದೆ.
ಬರ್ಕೆ ಪೊಲೀಸರು, ಮೊಬೈಲ್ ಟ್ರ್ಯಾಕಿಂಗ್ ತಂತ್ರಜ್ಞಾನದ ಮೂಲಕ ಆಕೆಯ ಸ್ಥಳವನ್ನು ನಿಖರವಾಗಿ ಪತ್ತೆಹಚ್ಚುವಲ್ಲಿ ಯಶಸ್ವಿಯಾದರು. ಬೆಂಗಳೂರಿಗೆ ತೆರಳಿದ ಪೊಲೀಸ್ ತಂಡ ಅಲ್ಲಿ ಆಕೆಯನ್ನು ಬಂಧಿಸಿ ಮಂಗಳೂರಿಗೆ ಕರೆತಂದಿದೆ. ಸಮಾಜದಲ್ಲಿ ಅಶಾಂತಿ ಮೂಡಿಸುವ ಹಾಗೂ ಜಾತಿ ನಿಂದನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

