ಮೈಸೂರು: ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿ, ತಾನೂ ಆತ್ಮ*ತ್ಯೆ ಮಾಡಿರುವ ಘಟನೆ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ನಡೆದಿದೆ.

ನ್ಯೂ ಮಾರುತಿ ಬಡಾವಣೆಯ ನಿವಾಸಿ ಹರೀಶ್ (40) ಎಂಬಾತನೇ ಈ ಕೃತ್ಯ ಎಸಗಿದ ವ್ಯಕ್ತಿ. ಹರೀಶ್ ತನ್ನ ಪತ್ನಿ ನಿಶ್ಚಿತಾ (36), ಮಕ್ಕಳಾದ ನೆಕ್ಸಾ (13) ಮತ್ತು ರಕ್ಷಾ (6) ಎಂಬುವವರನ್ನು ಕೊಲೆ ಮಾಡಿ ತಾನೂ ನೇಣಿಗೆ ಶರಣಾಗಿದ್ದಾನೆ.
ಮನೆಯಲ್ಲಿ ಹರೀಶ್ ತಾಯಿ ವಾಸವಾಗಿದ್ದು, ಮೂರು ದಿನಗಳ ಹಿಂದೆ ಹರೀಶ್ ತನ್ನ ತಾಯಿಯನ್ನು ಅಜ್ಜಿ ಮನೆಗೆ ಕಳುಹಿಸಿಕೊಟ್ಟಿದ್ದ.ಪತ್ನಿ ಮತ್ತು ಮಕ್ಕಳ ಬಾಯಿ ಹಾಗೂ ಮೂಗಿಗೆ ಪ್ಲಾಸ್ಟರ್ ಅಂಟಿಸಿ, ಅವರು ಕಿರುಚದಂತೆ ಮತ್ತು ಉಸಿರಾಡಲು ಸಾಧ್ಯವಾಗದಂತೆ ಮಾಡಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.
ಸ್ಥಳಕ್ಕೆ ಹುಣಸೂರು ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಒಂದು ನೋಟ್ ಪತ್ತೆಯಾಗಿದ್ದು, ಅದರಲ್ಲಿ ಏನಿದೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ಹರೀಶ್ ಈ ನಿರ್ಧಾರ ತೆಗೆದುಕೊಳ್ಳಲು ಆರ್ಥಿಕ ಸಂಕಷ್ಟ ಕಾರಣವೇ ಅಥವಾ ಕೌಟುಂಬಿಕ ಕಲಹವೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

