ಕಡಬ: ಹಿಂದೂ ಮಹಿಳೆಯರು ಹಾಗೂ ಮಕ್ಕಳನ್ನು ಕೂಡಿ ಹಾಕಿ ಮತಾಂತರಕ್ಕೆ ಯತ್ನ ಮಾಡಲಾಗುತ್ತಿದೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ, ಹಿಂದೂ ಸಂಘಟನೆಯ ಮಾಹಿತಿ ಮೇರೆಗೆ ಕಡಬ ಪೊಲೀಸರು ಮೇ.7 ರಾತ್ರಿ ಐತ್ತೂರಿನ ಮನೆಯೊಂದಕ್ಕೆ ದಾಳಿ ಮಾಡಿದ ಘಟನೆ ನಡೆದಿದೆ.


ಐತ್ತೂರು ಗ್ರಾಮದ ಜೋಸೆಫ್ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಬೆಂಗಳೂರು ಮೂಲದ ಸುಮಾರು 15 ಕ್ಕೂ ಹೆಚ್ಚು ಮಂದಿ ಮಹಿಳೆಯರು, ಪುರುಷರು ಹಾಗೂ ಮಕ್ಕಳು ಅಲ್ಲಿ ಇರುವುದು ಪತ್ತೆಯಾಗಿರುವುದಾಗಿ ವರದಿಯಾಗಿದೆ.
ಈ ಕುರಿತು ವಿಶ್ವ ಹಿಂದೂ ಪರಿಷದ್ ಮುಖಂಡ ಪ್ರಮೋದ್ ನಂದುಗುರಿ ಅವರು ಕಡಬ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದು, ಮನೆಯಲ್ಲಿ ಮತಾಂತರ ಹಾಗೂ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ ಎಂದು ಆರೋಪ ಮಾಡಿದ್ದಾರೆ.
ದೂರಿನ ಆಧಾರದ ಮೇಲೆ ಪೊಲೀಸರು ರಾತ್ರೋರಾತ್ರಿ ಸ್ಥಳಕ್ಕೆ ತೆರಳಿದ್ದು, ಪರಿಶೀಲನೆ ಮಾಡಿದ್ದಾರೆ. ರಾತ್ರಿ ಸಮಯವಾಗಿದ್ದರಿಂದ ಪೊಲೀಸರು ಮನೆಯೊಳಗೆ ಪ್ರವೇಶ ಮಾಡದೆ, ಹೊರಭಾಗದಲ್ಲಿಯೇ ಕಾವಲು ಕಾಯುತ್ತಿದ್ದು, ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಾಡು ಮಾಡಲಾಗಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಸ್ಥಳದಲ್ಲಿದ್ದವರನ್ನು ವಿಚಾರಣೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಹಾಗೂ ಮುಂದಿನ ಕ್ರಮದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

