Home » ಕಡಬ: ಮದುವೆ ಮಾತುಕತೆಗೆ ಪ್ರೀತಿಸುತ್ತಿದ್ದ ವ್ಯಕ್ತಿಯ ಮನೆಗೆ ತೆರಳಿದಾಗ ಮಹಿಳೆ ಮೇಲೆ ಜೀವ ಬೆದರಿಕೆ

ಕಡಬ: ಮದುವೆ ಮಾತುಕತೆಗೆ ಪ್ರೀತಿಸುತ್ತಿದ್ದ ವ್ಯಕ್ತಿಯ ಮನೆಗೆ ತೆರಳಿದಾಗ ಮಹಿಳೆ ಮೇಲೆ ಜೀವ ಬೆದರಿಕೆ

0 comments
Crime News Bangalore

ಕಡಬ: ಮದುವೆ ಮಾತುಕತೆ ಮಾಡಲು ತಾನು ಪ್ರೀತಿಸುತ್ತಿದ್ದ ವ್ಯಕ್ತಿಯ ಮನೆಗೆ ತೆರಳಿದ ಸಂದರ್ಭದಲ್ಲಿ, ಮಹಿಳೆ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ಕಡಬ ತಾಲೂಕಿನ ಐತ್ತೂರು ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ನಡೆದಿರುವ ಕುರಿತು ವರದಿಯಾಗಿದೆ.

ದೂರುದಾರೆ ಮಹಿಳೆಯು ಕಳೆದ ಮೂರು ವರ್ಷಗಳಿಂದ ದೇವಸ್ಥಾನವೊಂದರಲ್ಲಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದು, ಅಲ್ಲಿ ಪ್ರಭಾಕರ ಎಂಬಾತನ ಪರಿಚಯವಾಗಿತ್ತು. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಹಾಗಾಗಿ ಮದುವೆ ಬಗ್ಗೆ ಚರ್ಚಿಸಲು ಏಪ್ರಿಲ್ 3ರಂದು ರಾತ್ರಿ ಮಹಿಳೆಯು ಐತ್ತೂರು ಗ್ರಾಮದ ನೆಲ್ಲಿಕಟ್ಟೆಯಲ್ಲಿರುವ ಪ್ರಭಾಕರನ ಮನೆಗೆ ತೆರಳಿದ್ದರು.

ಮನೆಯಲ್ಲಿ ಮಾತುಕತೆ ನಡೆಯುತ್ತಿದ್ದ ವೇಳೆ ವ್ಯಕ್ತಿಯು ಏಕಾಏಕಿ ಏರು ಧ್ವನಿಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಮಹಿಳೆಯನ್ನು ಕೆಳಗೆ ತಳ್ಳಿ ಕೈಯಿಂದ ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮಹಿಳೆ ಕಿರುಚಿಕೊಂಡಾಗ ನೆರೆಹೊರೆಯವರು ಬರುವುದನ್ನು ಕಂಡು, “ಇನ್ನೊಮ್ಮೆ ನನ್ನ ಸುದ್ದಿಗೆ ಬಂದರೆ ಸುಮ್ಮನೆ ಬಿಡುವುದಿಲ್ಲ” ಎಂದು ಜೀವ ಬೆದರಿಕೆ ಹಾಕಿ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಸಂತ್ರಸ್ತೆಯ ದೂರಿನ ಮೇರೆಗೆ ಕಡಬ ಪೊಲೀಸರು ಆರೋಪಿ ಪ್ರಭಾಕರನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 115(2), 352, 74, ಮತ್ತು 351 (2) ಪ್ರಕರಣ ದಾಖಲಿಸಿಕೊಂಡಿದ್ದಾರೆ.

banner

You may also like