ಉಪ್ಪಿನಂಗಡಿ; ದಾಖಲೆಗಳಿಲ್ಲದೆ ಲಾರಿಯೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 16 ಜಾನುವಾರುಗಳನ್ನು ಉಪ್ಪಿನಂಗಡಿ ಪೊಲೀಸರು ಬುಧವಾರ ಬೆಳಗ್ಗೆ ಆನೆಬೈಲು ಎಂಬಲ್ಲಿ ಜಪ್ತಿ ಮಾಡಿದ್ದಾರೆ. ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.


ಚಿಕ್ಕಮಗಳೂರು ಜಿಲ್ಲೆಯ ಕಡೂರು ನಿವಾಸಿ, ಲಾರಿ ಚಾಲಕ ಫರ್ದಿನ್ ಖಾನ್ (24) ಮತ್ತು ಹಾಸನ ಜಿಲ್ಲೆಯ ಹೊಳೆನರಸೀಪುರ ನಿವಾಸಿ ಜಾವೀದ್ ಪಾಷಾ (34) ಬಂಧಿತ ಆರೋಪಿಗಳು. ಕೃತ್ಯಕ್ಕೆ ಬಳಸಲಾದ ಐಷರ್ ಲಾರಿಯನ್ನು ವಶಪಡಿಸಲಾಗಿದೆ.
ಜೂ.17 ರಂದು ಬೆಳಿಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪನಿರೀಕ್ಷಕರಾದ ಸುತೇಶ್ ಕೆಪಿ ಹಾಗೂ ಸಿಬ್ಬಂದಿಯವರು ಆನೆಬೈಲು ಬಳಿ ವಾಹನ ತಪಾಸಣೆ ಮಾಡುತ್ತಿದ್ದಾಗ, ಸಂಶಯಾಸ್ಪದವಾಗಿ ಬಂದ ಲಾರಿಯನ್ನು ತಡೆದು ತಪಾಸಣೆ ಮಾಡಿದಾಗ, ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿ ಸಾಗಿಸುತ್ತಿರುವುದು ಕಂಡು ಬಂದಿದೆ.
ವಾಹನದಲ್ಲಿದ್ದವರನ್ನು ವಿಚಾರಿಸಿದಾಗ ಜಾನುವಾರ ಸಾಗಾಟಕ್ಕೆ ಯಾವುದೇ ಪರವಾನಗಿ ಅಥವಾ ಅಧಿಕೃತ ದಾಖಲೆಗಳು ಇಲ್ಲದಿರುವುದು ಕಂಡು ಬಂದಿದೆ. ಕೂಡಲೇ ಪೊಲೀಸರು 16 ಜಾನುವಾರುಗಳನ್ನು ರಕ್ಷಣೆ ಮಾಡಿ, ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಘಟನೆ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

