ಚಿಕ್ಕಮಗಳೂರು: ಅನಾರೋಗ್ಯ ನಿವಾರಣೆಯಾಗಲೆಂದು ದೇವಸ್ಥಾನಕ್ಕೆ ತೆರಳುತ್ತಿದ್ದ ಮಹಿಳೆಯೊಬ್ಬರ ಮೇಲೆ ದೇವಸ್ಥಾನದ ಪೂಜಾರಿಯೇ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಈ ಕುರಿತು ಮಹಿಳೆ ಚಿಕ್ಕಮಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗೆ ಶೋಧ ಕಾರ್ಯ ಆರಂಭ ಮಾಡಿದ್ದಾರೆ.

ಜುಲೈ 17 ರಂದು ದಾಖಲಾಗಿರುವ ದೂರಿನ ಅನುಸಾರ, ಅನಾರೋಗ್ಯದ ಹಿನ್ನೆಲೆಯಲ್ಲಿ ಮಹಿಳೆ ಬಸ್ಕಲ್ನ ಪಂಜುರ್ಲಿ ದೇವಸ್ಥಾನಕ್ಕೆ ಪೂಜೆಗೆ ತೆರಳುತ್ತಿದ್ದರು. ಈ ವೇಳೆ ಪೂಜಾರಿ ಶ್ರೀಧರ್ ಪರಿಚಯವಾಗಿತ್ತು. ಈ ಪರಿಚಯ ದುರುಪಯೋಗ ಮಾಡಿಕೊಂಡ ಪೂಜಾರಿ, ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಮಹಿಳೆ ದೂರಿನಲ್ಲಿ ಆರೋಪ ಮಾಡಿದ್ದಾರೆ.
ಈ ಕುರಿತು ಯಾರಿಗಾದರೂ ಮಾಹಿತಿ ನೀಡಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪೂಜಾರಿ ಬೆದರಿಕೆ ಹಾಕಿದ್ದು, ಇಷ್ಟು ದಿನ ಮೌನವಾಗಿದ್ದೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಲೈಂಗಿಕ ದೌರ್ಜನ್ಯದ ಪರಿಣಾಮ ನಾನು ಗರ್ಭಿಣಿಯಾಗಿರುವುದಾಗಿ ಮಹಿಳೆ ಆರೋಪ ಮಾಡಿದ್ದಾರೆ.
ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು, ನಾಪತ್ತೆಯಾಗಿರುವ ಆರೋಪಿ ಪೂಜಾರಿ ಶ್ರೀಧರ್ನ ಪತ್ತೆಗೆ ಶೋಧ ಕಾರ್ಯ ಆರಂಭ ಮಾಡಿದ್ದಾರೆ.

