ಮುಲ್ಕಿ: ದುಬೈನಲ್ಲಿ ನಡೆದ ವಾಹನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುನರೂರು ಸಮೀಪದ ಯುವತಿ ಶ್ರೀಲತಾ ತಂತ್ರಿ(22) ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಮೃತ ಶ್ರೀಲತಾ ತಂತ್ರಿ ಕಟೀಲು ಹಾಗೂ ಮೂಡುಬಿದ್ರೆ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದು, ಉದ್ಯೋಗ ನಿಮಿತ್ತ 2025ರ ಜುಲೈ ತಿಂಗಳಲ್ಲಿ ದುಬೈಗೆ ತೆರಳಿದ್ದರು. ಕಳೆದ ನವೆಂಬರ್ನಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡಿದ್ದ ಅವರು ಕೋಮಾ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಪಘಾತದ ಬಳಿಕ ಕಂಪನಿಯವರೇ ಚಿಕಿತ್ಸಾ ವೆಚ್ಚವನ್ನು ಭರಿಸಿಕೊಂಡಿದ್ದು, ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಾಣದ ಹಿನ್ನೆಲೆಯಲ್ಲಿ ಮೂರು ದಿನಗಳ ಹಿಂದೆ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಶ್ರೀಲತಾ ಅವರು ತಾಯಿ ಹಾಗೂ ಅಕ್ಕನನ್ನು ಅಗಲಿದ್ದಾರೆ. ಶಾಲಾ-ಕಾಲೇಜು ದಿನಗಳಲ್ಲಿ ಪ್ರತಿಭಾನ್ವಿತ ನೃತ್ಯಗಾರ್ತಿಯಾಗಿ ಹಾಗೂ ರಾಜ್ಯಮಟ್ಟದ ಕ್ರೀಡಾಪಟುವಾಗಿ ಗುರುತಿಸಿಕೊಂಡಿದ್ದ ಅವರು, ವಿದ್ಯಾಭ್ಯಾಸದಲ್ಲಿಯೂ ಮೇಲುಗೈ ಸಾಧಿಸಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದರು.


